ಮಂತ್ರಿಸ್ಥಾನದ ಆಕಾಂಕ್ಷಿಗಳಿಗೆ ದೆಹಲಿಯಿಂದ ಕಹಿ ಸುದ್ದಿ ಕೊಟ್ಟ ಸಿಎಂ ಬೊಮ್ಮಾಯಿ!
ಬೆಂಗಳೂರು, ಆ. 25: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಈ ಬಾರಿ ಭೇಟಿ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಎರಡು ದಿನಗಳ ಭೇಟಿ ಕುರಿತು ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಸಂಜೆ ಮಾತನಾಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲು ಕಾಲಾವಕಾಶ ಕೇಳಿದ್ದೆ. ಆದರೆ ಅವರ ವೈಯಕ್ತಿಕ ಕಾರಣದಿಂದ ಭೇಟಿ ಮಾಡಲಾಗುತ್ತಿಲ್ಲ. ಮುಂದಿನ ವಾರ ಬರಲು ಹೇಳಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಈ ಹೇಳಿಕೆಯಿಂದ ಸಚಿವಾಕಾಂಕ್ಷಿಗಳಿಗೆ ನಿರಾಸೆ ಆದಂತಾಗಿದೆ. ದೆಹಲಿ ಭೇಟಿ ಸಂದರ್ಭದಲ್ಲಿ ಉಳಿದಿರುವ ನಾಲ್ಕು ಮಂತ್ರಿಸ್ಥಾನಗಳನ್ನು ತುಂಬಲು ಸಾಂದರ್ಭಿಕವಾಗಿ ಮಾತನಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು. ಹೀಗಾಗಿ ಸಚಿವಾಕಾಂಕ್ಷಿಗಳಲ್ಲಿ ಆಸೆ ಗರಿಗೆದರಿತ್ತು. ಇದೀಗ ದೆಹಲಿಯಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಮಂತ್ರಿ ಪದವಿ ಆಕಾಂಕ್ಷಿಗಳಲ್ಲಿ ನಿರಾಸೆ ಮೂಡಿಸಿದ್ದಾರೆ.

ಸಮಯ ಸಿಕ್ಕರೆ ಮಾತ್ರ ಅಮಿತ್ ಶಾ ಭೇಟಿ!
"ಮುಖ್ಯಮಂತ್ರಿಯಾದ ಬಳಿಕ ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿರಲಿಲ್ಲ. ಈಗ ಭೇಟಿಯಾಗಿ ಸಚಿವ ಆನಂದ್ ಸಿಂಗ್ ಪ್ರಕರಣ ಸೇರಿ ಎಲ್ಲಾ ವಿದ್ಯಮಾನಗಳ ಕುರಿತು ಚರ್ಚೆ ಮಾಡುವೆ. ಸಮಯ ಸಿಕ್ಕರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ. ರಾಜ್ಯದ ಎಲ್ಲ ವಿದ್ಯಮಾನಗಳ ಕುರಿತು ಚರ್ಚೆ ಮಾಡುವೆ. ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ" ಎಂದು ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಪಕ್ಷದ ನಾಯಕರ ಜೊತೆ ಮಾತನಾಡಿ, ಮುಂದಿನ ನಿರ್ಧಾರ!
ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರು ಮಂತ್ರಿ ಸ್ಥಾನ ಬೇಕು ಎನ್ನುವುದು ಸಹಜ, ಅದರಲ್ಲೇನು ತಪ್ಪಿದೆ?. ಎಲ್ಲ ಶಾಸಕರಿಗೂ ಮಂತ್ರಿ ಆಗಬೇಕು ಎಂಬ ಆಸೆ ಇರುತ್ತದೆ. ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರನ್ನು ಹೊರತು ಪಡಿಸಿದರೆ, ಉಳಿದಿರುವ ಯಾರಿಗೂ ಈಗಿರುವ ಖಾತೆಗಳ ಬಗ್ಗೆ ಯಾರಿಗೂ ಆಕ್ಷೇಪ ಇಲ್ಲ. ಸಚಿವ ಆನಂದ್ ಸಿಂಗ್ಗೂ ಮಾತನಾಡಿದ್ದೇನೆ. ಮಂಗಳವಾರ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಪಕ್ಷದ ನಾಯಕರ ಜೊತೆಗೆ ಮಾತನಾಡಿ, ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಕೊಟ್ಟ ಕಹಿ ಸುದ್ದಿ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಭೇಟಿ ಹಿನ್ನೆಲೆಯಲ್ಲಿ ಬುಧವಾರ ಬೆಳಗಿನಿಂದಲೇ ಸಚಿವಾಕಾಂಕ್ಷಿಗಳು ಭೇಟಿ ಮಾಡಿದ್ದರು. ಉಳಿದಿರುವ ನಾಲ್ಕು ಸಚಿವ ಸ್ಥಾನಗಳನ್ನು ಭರ್ತಿ ಮಾಡುವಾಗ ತಮಗೆ ಅವಕಾಶ ಕೊಡಬೇಕು ಎಂದು ವಿನಂತಿಸಿದ್ದರು. ಜೊತೆಗೆ ಸಿಎಂ ಕೂಡ ಪಕ್ಷದ ವರಿಷ್ಠರೊಂದಿಗೆ ಈ ಬಗ್ಗೆ ಚರ್ಚೆ ಮಾಡುವುದಾಗಿ ತಿಳಿಸಿದ್ದರು.
ಆದರೆ ದೆಹಲಿಯಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ಮಾಡುವುದಿಲ್ಲ ಎಂದಿದ್ದಾರೆ. ಜೊತೆಗೆ ಸಮಯ ಕೊಟ್ಟರೆ ಮಾತ್ರ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ. ಹೀಗಾಗಿ ಈ ಇಬ್ಬರೂ ನಾಯಕರನ್ನು ಭೇಟಿ ಮಾಡದಿದ್ದರೆ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ, ತೀರ್ಮಾನ ಆಗುವುದಿಲ್ಲ ಎಂದು ಮಂತ್ರಿಸ್ಥಾನದ ಆಕಾಂಕ್ಷಿಗಳು ನಿರಾಸೆಗೊಂಡಿದ್ದರೆ ಎನ್ನಲಾಗಿದೆ. ಜೊತೆಗೆ ಮತ್ತೊಂದು ಮಹತ್ವದ ಸುದ್ದಿ ಬಗ್ಗೆ ಸಿಎಂ ಮಾತನಾಡಿದ್ದಾರೆ.

ಮೈಸೂರು ಗ್ಯಾಂಗ್ ರೇಪ್; ಕಠಿಣಕ್ರಮ!
ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ಕೋವಿಡ್ ಲಸಿಕೆ ನೀಡುವಂತೆ ಮನವಿ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಇನ್ನು ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. "ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ವಿದ್ಯಾರ್ಥಿನಿ ಹೇಳಿಕೆ ದಾಖಲಿಸಲಾಗಿದೆ. ಅದರ ಆಧಾರದ ಮೇಲೆ ದೂರು ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಡಿಜಿಪಿಗೆ ಸೂಚನೆ ನೀಡಿದ್ದೇನೆ" ಎಂದು ಮುಖ್ಯಮಂತ್ರಿಗಳು ಭರವಸೆ ಕೊಟ್ಟಿದ್ದಾರೆ.












Click it and Unblock the Notifications