ಅಭ್ಯರ್ಥಿಗಳ ಪಟ್ಟಿ ಹಿಡಿದು ಸಿಎಂ, ಪರಮೇಶ್ವರ್ ದೆಹಲಿಗೆ!
ನವದೆಹಲಿ, ಡಿ. 16 : ಕರ್ನಾಟಕ ಕಾಂಗ್ರೆಸ್ ಪಕ್ಷದ ಲೋಕಸಭೆ ಚುನಾವಣಾ ತಯಾರಿ ಸಭೆ ನವದೆಹಲಿಗೆ ಶಿಫ್ಟ್ ಆಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ದೆಹಲಿಗೆ ಆಗಮಿಸಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿರುವ ಉಭಯ ನಾಯಕರು, ಅಭ್ಯರ್ಥಿಗಳ ಪಟ್ಟಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಚುನಾವಣಾ ಸಮಿತಿ ಸಭೆ ಮುಗಿದ ಬಳಿಕ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಸಿಸಿ ತಯಾರಿಸಿದೆ. ಇದನ್ನು ಸೋಮವಾರ ಹೈಕಮಾಂಡ್ ನಾಯಕರಿಗೆ ನೀಡಲಾಗುತ್ತಿದ್ದು, ಸಂಪುಟ ವಿಸ್ತರಣೆ, ರಾಜ್ಯದ ಯೋಜನೆಗಳಿಗೆ ಅನುದಾನ, ನಿಗಮ ಮಂಡಳಿ ನೇಮಕ ಮುಂತಾದಗವುಗಳ ಕುರಿತು ಚರ್ಚೆ ನಡೆಯಲಿದೆ.

ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ್ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾದ ಮಧುಸೂದನ್ ಮಿಸ್ತ್ರಿ,ಜನಾರ್ದನ್ ದ್ವಿವೇದಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಸೋಮವಾರ ಬೆಳಗ್ಗೆ ಭೇಟಿ ಮಾಡಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈಗಾಗಲೇ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ತಯಾರಾಗಿದ್ದು, ಒಂದು ಕ್ಷೇತ್ರಕ್ಕೆ ಮೂರರಿಂದ ಐದು ಹೆಸರುಗಳನ್ನು ಸೂಚಿಸಲಾಗಿದೆ.
ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ದೇಶದ ಪ್ರತಿ ರಾಜ್ಯದಿಂದಲೂ ಪಕ್ಷ ಲೋಕಸಭೆ ಚುನಾವಣೆಗೆ ಮಾಡಿಕೊಂಡಿರುವ ಸಿದ್ಧತೆ ಬಗ್ಗೆ ವರದಿ ಪಡೆಯುತ್ತಿದ್ದು, ಸೋಮವಾರ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕರ್ನಾಟಕದ ವರದಿ ನೀಡಲಿದ್ದಾರೆ.
ಚುನಾವಣಾ ಸಮಿತಿ ಸಭೆಯಲ್ಲಿ ಕರ್ನಾಟಕ ನೀಡಿರುವ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಚರ್ಚೆ ನಡೆಯಲಿದ್ದು, ಸಿಎಂ ಮತ್ತು ಪರಮೇಶ್ವರ್ ಸಮ್ಮಖದಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ. ಹಾಲಿ ಸಂಸದರಿರುವ ಕ್ಷೇತ್ರಗಳಲ್ಲಿ ಅವರಿಗೆ ಟಿಕೆಟ್ ನೀಡಬೇಕು ಎಂದು ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆದ್ದರಿಂದ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸೋಮವಾರ ಅಂತಿಮಗೊಳ್ಳುವ ಸಾಧ್ಯತೆ ಇದೆ.
ಹೆಚ್ಚು ಪೈಪೋಟಿ ಇರುವ ಕ್ಷೇತ್ರಗಳಿಗೆ ಮೂರರಿಂದ ಐದು ಅಭ್ಯರ್ಥಿಗಳ ಹೆಸರನ್ನು ಪರಿಗಣಿಸಲಾಗಿದ್ದು, ಇವರಲ್ಲಿ ಯಾರನ್ನು ಆಯ್ಕೆ ಮಾಡಬೇಕು ಎಂದು ಚರ್ಚೆ ನಡೆಯಲಿದೆ. ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ, ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.












Click it and Unblock the Notifications