ಜಿಎಸ್ಟಿ ಪರಿಹಾರ ಅವಧಿ 2025ರ ವರೆಗೆ ವಿಸ್ತರಿಸಲು ಸಿಎಂ ಮನವಿ
ನವದೆಹಲಿ, ಡಿಸೆಂಬರ್ 27: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಇಂದು ದೆಹಲಿಯಲ್ಲಿ ಭೇಟಿಯಾದ ಕುಮಾರಸ್ವಾಮಿ ಅವರು, ಕೇಂದ್ರದಿಂದ ರಾಜ್ಯಕ್ಕೆ ಜಿಎಸ್ಟಿ ಪರಿಹಾರದ ಅನುದಾನದ ನೆರವನ್ನು 2025ರ ವರೆಗೆ ವಿಸ್ತರಿಸುವಂತೆ ಒತ್ತಾಯಿಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆಯ (ಜಿಎಸ್ಟಿ) ಅನುಷ್ಠಾನದಲ್ಲಿ ಕನಾಟಕ ರಾಜ್ಯವು ದೇಶದ ಉಳಿದ ರಾಜ್ಯಗಳಿಗೆ ಮಾದರಿಯಾಗಿದೆ. ಆದರೂ, ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪರೋಕ್ಷ ತೆರಿಗೆ ಸಂಗ್ರಹಣೆಯಾಗುತ್ತಿಲ್ಲ. ಇಂದರಿಂದಾಗಿ ರಾಜ್ಯದ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅನುದಾನದ ಕೊರತೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಎಸ್ಟಿ ಜಿಎಸ್ಟಿ ಪರಿಹಾರದ ಅನುದಾನದ ನೆರವನ್ನು 2025 ರ ವರೆಗೆ ಮುಂದುವರೆಸಬೇಕು ಎಂದು ಅವರು ಮನವಿ ಮಾಡಿದರು.
ರೈತರಿಗೆ ಭಾರಿ ಕೊಡುಗೆ: ಜ.5ರೊಳಗೆ ಕೇಂದ್ರದ ಘೋಷಣೆ?
ರಾಜ್ಯದಲ್ಲಿ ಜಿಎಸ್ ಟಿ ಅನುಷ್ಠಾನ ಕುರಿತಂತೆ ರಾಜ್ಯವು ಕೈಗೊಂಡಿರುವ ಕ್ರಮಗಳು ಮತ್ತು ತೆರಿಗೆ ಸಂಗ್ರಹಣೆ ಕುರಿತು ಅಂಕಿ-ಅಂಶಗಳ ಸಹಿತ ಮನವರಿಕೆ ಮಾಡಿಕೊಟ್ಟರು.ಜಿಎಸ್ ಟಿ ಜಾರಿಗೊಳ್ಳುವ ಮುನ್ನ ರಾಜ್ಯದ ತೆರಿಗೆ ಸಂಗ್ರಹವು ವಾರ್ಷಿಕವಾಗಿ ಏರುಗತಿಯಲ್ಲಿತ್ತು ಎಂದು ಸಿಎಂ ಅವರು ಮಾಹಿತಿ ನೀಡಿದ್ದಾರೆ.
ತೆರಿಗೆ ಸಂಗ್ರಹದಲ್ಲಿ ಇಳಿಕೆ
ಮೌಲ್ಯ ವರ್ಧಿತ ತೆರಿಗೆ ವ್ಯವಸ್ಥೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರವು ತೆರಿಗೆ ಸಂಗ್ರಹದಲ್ಲಿ ಸರಾಸರಿ ಶೇ. 10-12 ರಷ್ಟು ವಾರ್ಷಿಕ ವೃದ್ಧಿದರವನ್ನು ಹೊಂದಿತ್ತು. ಆದರೆ ರಾಜ್ಯದಲ್ಲಿ ಜಿಎಸ್ಟಿ ವ್ಯವಸ್ಥೆಯನ್ನು ಅಳವಡಿಸಿಕೊಂಡ ಬಳಿಕ ತೆರಿಗೆ ಸಂಗ್ರಹದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ. ರಾಜ್ಯವು ನಿರೀಕ್ಷಿಸಿದ್ದ ತೆರಿಗೆ ಸಂಗ್ರಹಕ್ಕಿಂತಲೂ ಶೇ. 20 ರಷ್ಟು ಕೊರತೆ ಕಂಡುಬಂದಿದೆ ಎಂದು ಕುಮಾರಸ್ವಾಮಿ ಅವರು ರಾಜ್ಯದ ಚಿತ್ರಣ ತೆರೆದಿಟ್ಟಿದ್ದಾರೆ.
ತೆರಿಗೆ ಸಂಗ್ರಹ ಬಲಪಡಿಸಬೇಕಿದೆ
ಕೊರತೆಯಿಂದಾಗಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ತೊಂದರೆಯಾಗುತ್ತದೆ ಎನ್ನುವ ಅಂಶವನ್ನು ಮುಖ್ಯಮಂತ್ರಿಗಳು ವಿತ್ತ ಸಚಿವರಿಗೆ ವಿವರಿಸಿದರು. ರಾಜ್ಯದಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯನ್ನು ಬಲಪಡಿಸಲಾಗಿದೆ. ಎಲ್ಲ ಪ್ರಯತ್ನಗಳ ಹೊರತಾಗಿಯೂ ಪ್ರಸಕ್ತ ತೆರಿಗೆ ದರಗಳು, ಸೇವಾ ವಲಯದಲ್ಲಿ ನಿರೀಕ್ಷೆಗಿಂತ ಕಡಿಮೆ ತೆರಿಗೆ ಸಂಗ್ರಹ ಮತ್ತಿತರ ಮೂಲಭೂತ ಕಾರಣಗಳಿಂದ ಈ ಕೊರತೆ ಕಂಡುಬರುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ಸಚಿವರ ಬಳಿ ಕಲ್ಲಿದ್ದಲು, ರೈಲು ಮಾರ್ಗಕ್ಕೆ ಕುಮಾರಸ್ವಾಮಿ ಬೇಡಿಕೆ
2018-19 ರಲ್ಲಿ ಹೆಚ್ಚಿನ ತೆರಿಗೆ
2017-18ಕ್ಕೆ ಹೋಲಿಸಿದರೆ 2018-19ರಲ್ಲಿ ತೆರಿಗೆ ಸಂಗ್ರಹದಲ್ಲಿ ಹೆಚ್ಚಳವಾಗಿದೆ. ಆದರೆ ಈ ಏರಿಕೆಯು ರಾಜ್ಯ ಸರ್ಕಾರವು ನಿರೀಕ್ಷಿಸಿದ್ದ ಪ್ರಮಾಣಕ್ಕಿಂತಲೂ ಕಡಿಮೆ ಇದೆ. ಈ ಚಿತ್ರಣವು 2022ರ ನಂತರವೂ ಮುಂದುವರಿಯುವ ಎಲ್ಲಾ ಸಾಧ್ಯತೆಗಳಿವೆ. ಹೀಗಾಗಿ, ಜಿಎಸ್ ಟಿ ಅನುಷ್ಠಾನಕ್ಕಾಗಿ ಕೇಂದ್ರವು ನೀಡುವ ಪರಿಹಾರ ನೆರವನ್ನು 2022ರ ಬಳಿಕವೂ 2025ರ ವರೆಗೆ ಮುಂದುವರಿಸುವುದು ರಾಜ್ಯ ಅಭಿವೃದ್ಧಿಯ ದೃಷ್ಟಿಯಿಂದ ಹೆಚ್ಚಿನ ಪ್ರಯೋಜನ ತಂದುಕೊಂಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮೋದಿ ಭೇಟಿ ಸಾಧ್ಯತೆ
ಕುಮಾರಸ್ವಾಮಿ , ದೇವೇಗೌಡ, ಎಚ್ಡಿ ರೇವಣ್ಣ ಅವರು ಇಂದು ನವ ದೆಹಲಿಗೆ ತೆರಳಿದ್ದು, ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಿದ್ದಾರೆ. ಕಲ್ಲಿದ್ದಲು ಮತ್ತು ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ನಾಗರಿಕ ವಿಮಾನ ಯಾನ ಸಚಿವ ಸುರೇಶ್ ಪ್ರಭು, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಆಗಿದ್ದು, ಅಂತಿಮವಾಗಿ ಪ್ರಧಾನಿ ಮೋದಿ ಅವರನ್ನು ಭೇಟಿ ಆಗುವ ಸಾಧ್ಯತೆ ಇದೆ.