ನಿರ್ಮಲಾ ಸೀತಾರಾಮನ್ಗೆ ಧನ್ಯವಾದ ಸಲ್ಲಿಸಿದ ಕುಮಾರಸ್ವಾಮಿ
Recommended Video
ನವದೆಹಲಿ, ಜುಲೈ 05: ರಾಜ್ಯದ ಸ್ಥಳೀಯ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಕುಮಾರಸ್ವಾಮಿ ಅವರು ಧನ್ಯವಾದ ಅರ್ಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ನಿನ್ನೆ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ ಅವರು, ನಮ್ಮ ಕೋರಿಕೆಯನ್ನು ಮನ್ನಿಸಿ ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಟ್ಟ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ, ಇದರಿಂದ ಗ್ರಾಮೀಣ ಭಾಗದ ಯುವಕರಿಗೆ ಬಹಳ ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.
ಧನ್ಯವಾದ ಅರ್ಪಿಸುವ ಜೊತೆಗೆ ಮತ್ತೊಂದು ಮನವಿಯನ್ನೂ ನಿರ್ಮಲಾ ಸೀತಾರಾಮನ್ ಅವರ ಮುಂದೆ ಇಟ್ಟಿರುವ ಕುಮಾರಸ್ವಾಮಿ ಅವರು, ಬ್ಯಾಂಕಿಂಗ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮಾತೃಭಾಷೆಯಲ್ಲಿ 10 ನೇ ತರಗತಿವರೆಗೆ ಓದಬೇಕು ಎಂಬ 2014 ರ ಸೂಚನೆಯನ್ನು ಮತ್ತೆ ಲಾಗೂಗೊಳಿಸಿ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ನಿನ್ನೆ ಲೋಕಸಭೆಯಲ್ಲಿ ಘೋಷಿಸಿದ ನಿರ್ಮಲಾ ಸೀತಾರಾಮನ್
ನಿನ್ನೆ ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು, ಗ್ರಾಮೀಣ ಬ್ಯಾಂಕ್ ಪರೀಕ್ಷೆಯ ವಿಚಾರವನ್ನು ಪ್ರಸ್ತಾಪಿಸಿ, ಜಿಸಿ ಚಂದ್ರಶೇಖರ್ ಸೇರಿದಂತೆ ಕರ್ನಾಟಕದ ಸಂಸದರು ಶೂನ್ಯವೇಳೆಯಲ್ಲಿ ಎತ್ತಿರುವ ಪ್ರಶ್ನೆ ಬಗ್ಗೆ ಸರ್ಕಾರ ಪರಿಗಣಿಸಲಿದೆ. ಸ್ಥಳೀಯ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಕನ್ನಡ ಸೇರಿ 13 ಭಾಷೆಗಳಲ್ಲಿ ಪರೀಕ್ಷೆ ಬರೆಯಬಹುದು
ಈ ಮೂಲಕ RRB, IBPS ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುವ ಅವಕಾಶ ಸಿಗಲಿದೆ. ಕನ್ನಡ ಸೇರಿದಂತೆ 13 ಭಾರತೀಯ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ನಿರ್ಮಲಾ ಸೀತಾರಾಮನ್ ರವರು ಭರವಸೆ ನೀಡಿದ್ದಾರೆ.

ದಕ್ಷಿಣ ಭಾರತ ರಾಜ್ಯಗಳ ಬಹು ದಿನಗಳ ಬೇಡಿಕೆ
ನಿರ್ಮಲಾ ಸೀತಾರಾಮನ್ ಅವರ ಈ ನಿರ್ಧಾರದ ಬಗ್ಗೆ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ವಿಶೇಷವಾಗಿ ದಕ್ಷಿಣ ಭಾರತ ರಾಜ್ಯಗಳು ಬ್ಯಾಂಕಿಂಗ್ ಪರೀಕ್ಷೆಯನ್ನು ಸ್ಥಳೀಯ ಭಾಷೆಯಲ್ಲಿ ಬರೆಯಲು ಹಲವು ವರ್ಷಗಳಿಂದ ಒತ್ತಾಯ ಹೇರುತ್ತಿದ್ದವು.

ಕರ್ನಾಟಕದ ಸಂಸದರು ಮನವಿ ಮಾಡಿದ್ದರು
ಕರ್ನಾಟಕದ ಸಂಸದರು ಸಹ ಕೆಲವು ದಿನಗಳ ಹಿಂದೆಯಷ್ಟೆ ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯುವಂತೆ ಅನುವು ಮಾಡಿಕೊಡಿರೆಂದು ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದರು. ಇಂದು ನಿರ್ಮಲಾ ಸೀತಾರಾಮನ್ ಅವರು ಮೋದಿ ಸರ್ಕಾರದ ಎರಡನೇ ಅವಧಿಯ ಮೊದಲ ಬಜೆಟ್ ಮಂಡಿಸುತ್ತಿದ್ದಾರೆ.











Click it and Unblock the Notifications