ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಿ: ಪ್ರಧಾನಿ ಮಧ್ಯ ಪ್ರವೇಶಕ್ಕೆ ಮನವಿ

|
Google Oneindia Kannada News

ನವದೆಹಲಿ, ಡಿಸೆಂಬರ್ 27: ಕೇಂದ್ರದ ಹಲವು ಸಚಿವರು ಹಾಗೂ ಪ್ರಧಾನಿ ಮಂತ್ರಿಗಳನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ ಅವರು, ಆ ನಂತರ ಸುದೀರ್ಘ ಸುದ್ದಿಗೋಷ್ಠಿ ನಡೆಸಿ ದೆಹಲಿ ಭೇಟಿಯ ವಿವರಗಳನ್ನು ಮಾಧ್ಯಮದವರೊಡನೆ ಹಂಚಿಕೊಂಡರು.

ನಿನ್ನೆ ಮತ್ತು ಇಂದು ಪ್ರಧಾನ ಮಂತ್ರಿಗಳು, ಕೇಂದ್ರ ಭೂ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ, ವಿತ್ತ ಸಚಿವ ಶ್ರೀ ಅರುಣ್ ಜೇಟ್ಲಿ, ಕಲ್ಲಿದ್ದಲು ಮತ್ತು ರೈಲ್ವೆ ಸಚಿವ ಶ್ರೀ ಪಿಯುಷ್ ಗೋಯಲ್, ಕೇಂದ್ರ ವಾಣಿಜ್ಯ ಸಚಿವ ಶ್ರೀ ಸುರೇಶ್ ಪ್ರಭು ಅವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ಕುಮಾರಸ್ವಾಮಿ ಹೇಳಿದರು.

ಪ್ರಧಾನಿಯವರನ್ನು ಭೇಟಿಯಾಗಿ ವಿವಿಧ ನೀರಾವರಿ ಯೋಜನೆಗಳು, ರಾಜ್ಯದ ಬರ ಪರಿಸ್ಥಿತಿ ಹಾಗೂ ಉದ್ಯೋಗ ಖಾತರಿ ಯೋಜನೆಗೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಚರ್ಚಿಸಿ, ಮನವಿಗಳನ್ನು ಸಲ್ಲಿಸಲಾಯಿತು ಎಂದರು. ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಕಲ್ಲಿದ್ದಲು ಪೂರೈಕೆ ಹೆಚ್ಚಳ ಹಾಗೂ ಹೊಸ ರೈಲ್ವೆ ಮಾರ್ಗಕ್ಕೆ ಬೇಡಿಕೆ ಸಲ್ಲಿಸಲಾಗಿದೆ ಎಂದರು.

400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ

400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ

ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ಆದೇಶ ಹಾಗೂ ನಂತರ ಸುಪ್ರೀಂ ಕೋರ್ಟಿನಲ್ಲಿ ಮಾರ್ಪಡಿಸಿದ ಆದೇಶಗಳ ಅನ್ವಯ ತಮಿಳುನಾಡಿಗೆ ಪ್ರತಿ ತಿಂಗಳು ನೀರು ಹರಿಸುವುದನ್ನು ಕ್ರಮಬದ್ಧವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆಯು ನೆರವಾಗಲಿದೆ. ಈ ಯೋಜನೆಯು ಸುಮಾರು 67 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಸುಪ್ರೀಂ ಕೋರ್ಟ್ ಬೆಂಗಳೂರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಿರುವ 4.75 ಟಿಎಂಸಿ ನೀರನ್ನು ಬಳಸಿಕೊಳ್ಳಲು ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಉದ್ದೇಶಿಸಲಾಗಿದೆ. ಇದಕ್ಕೆ ತಮಿಳು ನಾಡು ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿಯವರು ಮಧ್ಯಪ್ರವೇಶಿಸುವಂತೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ನೀರಾವರಿ ಉದ್ದೇಶಕ್ಕೆ 166 ಟಿಎಂಸಿ ಅಡಿ ನೀರು

ನೀರಾವರಿ ಉದ್ದೇಶಕ್ಕೆ 166 ಟಿಎಂಸಿ ಅಡಿ ನೀರು

ಇದಲ್ಲದೆ, ಕೃಷ್ಣಾ ನ್ಯಾಯಾಧಿಕರಣ-2ರಡಿ ಕರ್ನಾಟಕಕ್ಕೆ ನೀರಾವರಿ ಉದ್ದೇಶಕ್ಕೆ 166 ಟಿಎಂಸಿ ನೀರು ಹಂಚಿಕೆಯಾಗಿದ್ದು, ಈ ನೀರಿನ ಬಳಕೆಗಾಗಿ ಕೃಷ್ಣ ಮೇಲ್ದಂಡೆ ಯೋಜನೆ- ಹಂತ 3 ಮತ್ತಿತರ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸರ್ಕಾರ ಈಗಾಗಲೇ ಈ ಯೋಜನೆಗಳಿಗೆ ಸಾಕಷ್ಟು ಹಣ ಹೂಡಿಕೆ ಮಾಡಿದ್ದು, ನ್ಯಾಯಾಧಿಕರಣದ ತೀರ್ಪು ನೀಡಿ 5 ವರ್ಷ ಕಳೆದರೂ ಇನ್ನೂ ಗಜೆಟ್ ಅಧಿಸೂಚನೆ ಹೊರಡಿಸಿಲ್ಲ. ಇದರಿಂದ ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಅಧಿಸೂಚನೆಯನ್ನು ಶೀಘ್ರವೇ ಹೊರಡಿಸುವಂತೆ ಮನವಿ ಮಾಡಲಾಯಿತು ಎಂದರು.

ಕರ್ನಾಟಕಕ್ಕೆ 13.42 ಟಿಎಂಸಿ ಅಡಿ ಮಹದಾಯಿ ನೀರು

ಕರ್ನಾಟಕಕ್ಕೆ 13.42 ಟಿಎಂಸಿ ಅಡಿ ಮಹದಾಯಿ ನೀರು

ಮಹದಾಯಿ ಜಲ ವಿವಾದ ನ್ಯಾಯಾಧಿಕರಣವು ತನ್ನ ಅಂತಿಮ ಆದೇಶದಲ್ಲಿ ಕರ್ನಾಟಕಕ್ಕೆ 13.42 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು ಹಾಗೂ ಈ ಮಾರ್ಗದಲ್ಲಿರುವ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆಗೆ ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ಕಳಸಾ ಬಂಡೂರಿ ನಾಲಾ ಯೋಜನೆ ಮತ್ತು ಇತರ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ನೀರು ಹಂಚಿಕೆಯ ಗಜೆಟ್ ನೋಟಿಫಿಕೇಷನ್ ಶೀಘ್ರವೇ ಹೊರಡಿಸುವಂತೆ ಮನವಿ ಮಾಡಲಾಗಿದೆ.

ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಪ್ರಧಾನಿಗೆ ಮನವಿ

ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಪ್ರಧಾನಿಗೆ ಮನವಿ

ಇದಲ್ಲದೆ ಕೃಷ್ಣಾ ಮೇಲ್ದಂಡೆ ಯೋಜನೆ- ಮೂರನೇ ಹಂತವನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಮಾನ್ಯ ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಈ ಯೋಜನೆಯಿಂದ ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ,, ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಗಳ 5.30 ಲಕ್ಷ ಹೆಕ್ಟೇರ್‍ಗೂ ಹೆಚ್ಚು ಪ್ರದೇಶದ ನೀರಾವರಿ ಸೌಲಭ್ಯ ಒದಗಿಸುವ ನಿರೀಕ್ಷೆ ಇದ್ದು, ಇದು ರಾಷ್ಟ್ರೀಯ ಯೋಜನೆಯ ಮಾನದಂಡಕ್ಕಿಂತ ಹೆಚ್ಚಾಗಿದೆ. ಈ ಯೋಜನೆಯ ಅಂದಾಜು ವೆಚ್ಚ 51,148 ಕೋಟಿ ರೂ. ಗಳಾಗಿದ್ದು, ರಾಜ್ಯದ ಸಂಪನ್ಮೂಲವೊಂದರಿಂದಲೇ ಭರಿಸಿದರೆ ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗಬಹುದು. ಭೂಸ್ವಾಧೀನಕ್ಕೆ ಅತಿ ಹೆಚ್ಚು ಅನುದಾನದ ಅಗತ್ಯವಿರುವುದರಿಂದ ಇದನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸುವಂತೆ ಜಲಸಂಪನ್ಮೂಲ ಸಚಿವಾಲಯಕ್ಕೆ ಸೂಚನೆ ನೀಡುವಂತೆ ಪ್ರಧಾನಿಗಳಿಗೆ ಮನವಿ ಮಾಡಲಾಯಿತು.

English summary
CM Kumaraswamy wants Prime minister to help Karnataka in solving Mekedatu issue with Tamilnadu peacefully. He today met Narendra Modi and talked about it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X