ಬರ ಪರಿಹಾರ: ಕೇಂದ್ರದಿಂದ ರು 4703 ಕೋಟಿ ನೆರವು ಬೇಡಿದ ಸಿಎಂ
ನವದೆಹಲಿ, ಡಿಸೆಂಬರ್9: ರಾಜ್ಯದ 139 ತಾಲೂಕುಗಳಲ್ಲಿ ಉಂಟಾಗಿರುವ ಬರ ಪರಿಹಾರಕ್ಕಾಗಿ ಪಕೃತಿ ವಿಕೋಪ ನಿಧಿಯಿಂದ ರು. 4703 ಕೋಟಿ ನೆರವು ನೀಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳು ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ದೆಹಲಿಯ ನಿವಾಸಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ವಿಶೇಷ ಅನುದಾನ ರೂಪದಲ್ಲಿ 967.76 ಕೋಟಿ ರೂ.ಗಳನ್ನು ರಾಜ್ಯಕ್ಕೆ ಬಿಡುಗಡೆ ಮಾಡುವಂತೆ ಇದೇ ವೇಳೆ ಕೇಳಿಕೊಂಡರು. ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಬಗ್ಗೆ ಈಗಾಗಲೇ ಕೇಂದ್ರ ತಂಡ ಪರಿಶೀಲಿಸಿದ್ದು, ಸ್ವಯಂ ಮುಖ್ಯಮಂತ್ರಿಗಳು ಈ ಬಗ್ಗೆ ಅಧ್ಯಯನ ನಡೆಸಿದ್ದು, ಹಾನಿ, ಪ್ರವಾಹದಿಂದಾಗಿರುವ ಹಾನಿ ಕುರಿತು ರಾಜನಾಥ್ ಸಿಂಗ್ ಅವರೊಂದಿಗೆ ಸಿಎಂ ಸಮಾಲೋಚನೆ ನಡೆಸಿದರು.[ತುಮಕೂರಿನ ಬರಪೀಡಿತ ತಾಲ್ಲೂಕುಗಳಿಗೆ ಸಿಎಂ ಭೇಟಿ]
ಬರ ಪರಿಸ್ಥಿತಿಯಿಂದಾಗಿ ರು 17,193 ಕೋಟಿ ಹಾನಿ ಸಂಭವಿಸಿದೆ. ಬರ ಪರಿಹಾರ ಕಾಮಗಾರಿಗಳನ್ನು ಸರ್ಕಾರ ಸಮರೋಪಾದಿಯಲ್ಲಿ ಕೈಗೊಂಡಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತು ಕೂಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸುವ ವಿಚಾರದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಕೇಂದ್ರ ಗೃಹ ಸಚಿವರಿಗೆ ವಿವರಿಸಿದರು.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಕುರಿತು ಚರ್ಚಿಸಿದ್ದೇನೆ. pic.twitter.com/U8gzmxUoaU
— CM of Karnataka (@CMofKarnataka) December 9, 2016
139 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ. ಪರಿಹಾರ ಕಾಮಗಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ವರೆಗೆ ರು 204.00 ಕೋಟಿ ಗಳನ್ನು 2016-17ನೇ ಸಾಲಿನಲ್ಲಿ ವೆಚ್ಚ ಮಾಡಿದೆ ಎಂದರು. ಸಿಎಂ ಜೊತೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ರಾಜ್ಯದ ದೆಹಲಿ ಪ್ರತಿನಿಧಿ ಅಪ್ಪಾಜಿ ನಾಡಗೌಡ ಉಪಸ್ಥಿತರಿದ್ದರು.