ಉ.ಪ್ರದೇಶ ಚುನಾವಣೆ: ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿ ರಚಿಸಿದ ಸೋನಿಯಾ
ನವದೆಹಲಿ, ಸೆಪ್ಟೆಂಬರ್ 17: ಮುಂಬರಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ಸ್ಕ್ರೀನಿಂಗ್ ಸಮಿತಿಯನ್ನು ರಚಿಸಿದೆ.
ಸೋನಿಯಾ ಗಾಂಧಿ ನೇತೃತ್ವದಲ್ಲಿ ಸ್ಕ್ರೀನಿಂಗ್ ಸಮಿತಿ ರಚಿಸಲಾಗಿದ್ದು, ಜಿತೇಂದ್ರ ಸಿಂಗ್ ಅವರನ್ನು ಅಧ್ಯಕ್ಷರಾಗಿ, ದೀಪೇಂದರ್ ಹೂಡ ಮತ್ತು ವೈಶಾಲಿ ಗಾಯಕ್ ವಾಡ್ ಅವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ಉತ್ತರ ಪ್ರದೇಶ: ರೈತರ ವಿರುದ್ಧದ ಕೇಸ್ ಹಿಂಪಡೆಯಲು ಸರ್ಕಾರ ನಿರ್ಧಾರ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು, ಸಿಎಲ್ ಪಿ ನಾಯಕ ಆರಾಧನ ಮಿಶ್ರ ಮೊನ ಮತ್ತು ಉತ್ತರ ಪ್ರದೇಶದ ಎಲ್ಲಾ ಎಐಸಿಸಿ ಕಾರ್ಯದರ್ಶಿಗಳು ಪದನಿಮಿತ್ತ ಸದಸ್ಯರಾಗಿದ್ದಾರೆ.
ಮುಂದಿನ ವರ್ಷ 2022ರ ಉತ್ತರ ಪ್ರದೇಶ ಚುನಾವಣೆಗೆ ಪಕ್ಷಗಳು ಸಜ್ಜಾಗುತ್ತಿವೆ. ಮುಂಬರುವ ಚುನಾವಣೆಯನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಕಾಂಗ್ರೆಸ್ ಈಗಾಗಲೇ ಪ್ರಕಟಿಸಿದೆ.
ಈ ಸಂದರ್ಭದಲ್ಲಿ ಸ್ಕ್ರೀನಿಂಗ್ ಕಮಿಟಿಯನ್ನು ರಚಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಸಮಿತಿಯಲ್ಲಿ ಮೂವರು ಸದಸ್ಯರು ಮತ್ತು ಮೂವರು ಪದನಿಮಿತ್ತ ಸದಸ್ಯರಿದ್ದಾರೆ.
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾರೋಂದಿಗೂ ಮೈತ್ರಿ ಮಾಡಿಕೊಳ್ಳದೇ ಪ್ರಿಯಾಂಕಾ ಗಾಂಧಿಯವರ ನೇತೃತ್ವದಲ್ಲಿ ನಡೆಯಲಿದೆ.
ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇನ್ನೂ ನಿರ್ಧರಿಸಿಲ್ಲ. ಆದರೆ ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ.
ನಾವು ದೃಢ ನಂಬಿಕೆಯಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಯಲು ಪಕ್ಷ ಕಾರ್ಯಕರ್ತರು ಪ್ರತಿ ಕ್ಷೇತ್ರಕ್ಕೂ ಭೇಟಿ ನೀಡುತ್ತಾರೆ ಎಂದು ಕೇಂದ್ರ ಸಚಿವ ಖುರ್ಷಿದ್ ತಿಳಿಸಿದ್ದರು.
ಮುಂಬರುವ ಚುನಾವಣೆಗಳ ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಮಾತನಾಡಿದ ಅವರು, ನಾವು ಸಾಮಾನ್ಯ ಜನರೊಂದಿಗೆ ಸಂವಹನ ನಡೆಸುತ್ತಿದ್ದೇವೆ. ಇದಕ್ಕಾಗಿ ನಾವು ಉತ್ತಮ ಕಾರ್ಯತಂತ್ರವನ್ನು ರೂಪಿಸಿದ್ದೇವೆ. ಪ್ರಣಾಳಿಕೆಯಲ್ಲಿ ಸಾಮಾನ್ಯ ಜನರ ಧ್ವನಿಯು ಇರುತ್ತದೆ. ರೈತರು ಮತ್ತು ಮಹಿಳೆಯರ ಭದ್ರತೆ ನಮ್ಮ ಪ್ರಥಮ ಆದ್ಯತೆ. ನಾವು ಇಂದು ಆಗ್ರಾ ಜನರನ್ನು ಭೇಟಿ ಮಾಡಿದ್ದೇವೆ ಮತ್ತು ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇವೆ.
ಅಯೋಧ್ಯೆ, ಜಾನ್ಸಿ, ಗೋರಖ್ಪುರ ಇತ್ಯಾದಿಗಳಿಗೆ ಭೇಟಿ ನೀಡಿದ್ದೇವೆ ಮತ್ತು ಆಗ್ರಾದ ತೋರಾ ಹಳ್ಳಿಯ ಸ್ಥಳೀಯರೊಂದಿಗೆ ಸಂವಾದ ನಡೆಸಿದ್ದೇವೆ. ಅಲ್ಲಿನ ಜನರು, ವಿಧವೆಯರು ಮತ್ತು ವೃದ್ಧರು ಪಿಂಚಣಿ ಹಣ ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತಂತೆ ದೂರು ನೀಡಿದ್ದಾರೆ ಎಂದು ಹೇಳಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ.