ಕೇಂದ್ರ ಗೃಹ ಸಚಿವ ಸ್ಥಾನದಿಂದ ಅಮಿತ್ ಶಾರನ್ನು ವಜಾಗೊಳಿಸುವಂತೆ ಮನವಿ
ನವದೆಹಲಿ, ಫೆಬ್ರವರಿ.27: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರನ್ನು ಭೇಟಿ ಮಾಡಿತು.
Recommended Video
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿಚಾರದಲ್ಲಿ ನಡೆದ ಎರಡು ಗುಂಪುಗಳ ನಡುವಿನ ಘರ್ಷಣೆಗೆ ದೆಹಲಿ ನಲುಗಿ ಹೋಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ವಿಫಲರಾಗಿರುವ ಕೇಂದ್ರ ಸಚಿವ ಅಮಿತ್ ಶಾರನ್ನು ಆ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಿಕೊಂಡರು.
ರಾಷ್ಟ್ರಪತಿ ಭೇಟಿ ಬಳಿಕ ಮಾತನಾಡಿದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಕಳೆದ ನಾಲ್ಕು ದಿನಗಳಲ್ಲಿ ನಡೆದ ಹಿಂಸಾಚಾರದಿಂದ ಇಡೀ ರಾಷ್ಟ್ರವೇ ತಲೆ ತಗ್ಗಿಸುವಂತಾಗಿದೆ ಎಂದರು. ಈವರೆಗೂ 34 ಮಂದಿ ಪ್ರಾಣ ಬಿಟ್ಟಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದು ಕೇಂದ್ರ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಅವರು ದೂರಿದರು.

ದೆಹಲಿ ಹಿಂಸಾಚಾರ ನಿಯಂತ್ರಿಸುವಲ್ಲಿ ವೈಫಲ್ಯ:
ಕೇಂದ್ರ ಸರ್ಕಾರವು ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದರು. ದೆಹಲಿಯ ರಾಷ್ಟ್ರಪತಿ ಭವನಕ್ಕೆ ತೆರಳಿದ ಕಾಂಗ್ರೆಸ್ ನಿಯೋಗವು ಈ ಬಗ್ಗೆ ಮನವಿ ಮಾಡಿಕೊಂಡಿತು. ದೇಶದಲ್ಲಿ ಸ್ವಾತಂತ್ರ್ಯ, ಸಮಾನತೆಯನ್ನು ಕಾಪಾಡುವುದು ಮತ್ತು ಬಡತನ ಹೋಗಲಾಡಿಸುವಲ್ಲಿ ಸರ್ಕಾರವು ಸೋತಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾರನ್ನು ಗೃಹ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿತು.












Click it and Unblock the Notifications