ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕರ್ನಾಟಕದ ಇಂದಿರಾ ಕ್ಯಾಂಟೀನ್ ಸದ್ದು
ನವದೆಹಲಿ, ಫೆಬ್ರವರಿ 03: ದೆಹಲಿ ವಿಧಾನಸಭೆ ಚುನಾವಣೆಗಾಗಿ ಭರಪೂರ ಆಶ್ವಾಸನೆಯೊಂದಿಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಪ್ರಣಾಳಿಕೆ ಹೊರ ತಂದಿದ್ದರೆ, ಕಾಂಗ್ರೆಸ್ ಪಕ್ಷವು ಸಿಎಎ, ಎನ್ ಪಿಆರ್, ಎನ್ ಆರ್ ಸಿಯನ್ನು ಪ್ರಮುಖ ಅಂಶವನ್ನಾಗಿಸಿದೆ. ಜೊತೆಗೆ ಕರ್ನಾಟಕದಲ್ಲಿ ಯಶಸ್ಸು ಕಂಡಿರುವ ಇಂದಿರಾ ಕ್ಯಾಂಟೀನ್ ಕೂಡಾ ದೆಹಲಿ ತಲುಪಿದೆ.
ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ನಾಗರಿಕ ನೋಂದಣಿ(ಎನ್ ಆರ್ ಸಿ), ರಾಷ್ಟ್ರೀಯ ಜನಸಂಖ್ಯಾ ನೋಂದಣಿ( ಎನ್ ಪಿಆರ್) ಈಗಿರುವ ಮಾದರಿಯಲ್ಲಿ ಜಾರಿಗೆ ತರುವುದಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಅವಿಶ್ವಾಸ ನಿರ್ಣಯ ಹೊರಡಿಸಲಾಗುವುದು ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.
ಪದವೀಧರರಿಗೆ ನಿರುದ್ಯೋಗ ಭತ್ಯೆ ರೂಪದಲ್ಲಿ 5000 ರು ಹಾಗೂ ಸ್ನಾತಕೋತ್ತರ ಪದವೀಧರರಿಗೆ 7,500 ರು ನೀಡಲಾಗುತ್ತದೆ. ಸಿಎಎ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ವಾದಿಸುವುದಾಗಿ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಸುಭಾಷ್ ಛೋಪ್ರಾ ತಿಳಿಸಿದರು.
ಬಿಜೆಪಿ ಪ್ರಣಾಳಿಕೆ: 2 ರುಗೆ ಗೋಧಿ ಹಿಟ್ಟು, 10 ಲಕ್ಷ ಉದ್ಯೋಗ ಸೃಷ್ಟಿ
ಇದಲ್ಲದೆ, 300 ಯೂನಿಟ್ ತನಕ ಉಚಿತ ವಿದ್ಯುತ್ ಪೂರೈಕೆ, ಶುದ್ಧ ಕುಡಿಯುವ ನೀರು ಪೂರೈಕೆ, ಅಲ್ಲದೆ, ಕರ್ನಾಟಕ ಮಾದರಿಯಲ್ಲಿ 100 ಇಂದಿರಾ ಕ್ಯಾಂಟೀನ್ ನಿರ್ಮಿಸಿ 15 ರು ಗೆ ಸಬ್ಸಿಡಿ ದರದಲ್ಲಿ ಊಟ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.
ಸಾರಿಗೆ ವ್ಯವಸ್ಥೆ ಉತ್ತಮಗೊಳಿಸುವುದು, ಮಾಲಿನ್ಯ ನಿಯಂತ್ರಣಕ್ಕಾಗಿ ಬಜೆಟ್ ನಲ್ಲಿ ಶೇ 25 ಮೊತ್ತ ಮೀಸಲಿಡಲಾಗುತ್ತದೆ. ಹಿರಿಯ ನಾಗರೀಕರಿಗೆ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತ ಪ್ರಯಾಣ, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಹೀಗೆ ಆಶ್ವಾಸನೆಗಳನ್ನು ಕಾಂಗ್ರೆಸ್ ಪ್ರಣಾಳಿಕೆ ಹೊಂದಿದೆ.
ಗ್ಯಾಲರಿ: ದಿಲ್ಲಿ ಗಲ್ಲಿಗಲ್ಲಿಗಳಲ್ಲಿ ಚುನಾವಣೆ ರಂಗೋ ರಂಗು
2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಆದರೆ 2017ರಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಲಯಕ್ಕೆ ಮರಳಿದೆ.
ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಮುರಿದಿರುವುದರಿಂದ ಮತದಾರರನ್ನು ಸೆಳೆಯುವುದು ಬಿಜೆಪಿಗೆ ಸುಲಭವಾಗಲಿದೆ.70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರಬರಲಿದೆ.