Breaking: ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ
ನವದೆಹಲಿ, ಜುಲೈ 20: ಫೋನ್ ಕದ್ದಾಲಿಕೆ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು 2019ರಲ್ಲಿ ಪೆಗಾಸಸ್ ಮೂಲಕ ಫೋನ್ ಕದ್ದಾಲಿಕೆ ಮಾಡಿ ಕೆಡವಲಾಗಿದೆ. ಕರ್ನಾಟಕ ರಾಜಕೀಯ ನಾಯಕರ ಫೋನ್ ಕೂಡಾ ಕದ್ದಾಲಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ ನಡೆಸಿದ್ದು, ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಉರುಳಿಸಲು ಗೂಢಾಚಾರಿಕೆ ಮಾಡಲಾಗಿದೆ, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮೋದಿ ಸರ್ಕಾರ ಬುಡಮೇಲು ಮಾಡಿದೆ,'' ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆರೋಪ ಮಾಡಿದರು.
ಕರ್ನಾಟಕದಲ್ಲಿ ಕುದುರೆ ವ್ಯಾಪಾರದ ಮೂಲಕ ಅಧಿಕಾರಕ್ಕೆ ಬಂದಿದ್ದು, ಅದೇ ರೀತಿ ಮಧ್ಯಪ್ರದೇಶದಲ್ಲಿಯೂ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ಅಂದು ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ವೆಂಕಟೇಶ್, ಡಿಸಿಎಂ ಆಗಿದ್ದ ಜಿ. ಪರಮೇಶ್ವರ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಗನ್ ಮ್ಯಾನ್ ಫೋನ್ ಕೂಡಾ ಕದ್ದಾಲಿಸಲಾಗಿದೆ ಎಂದು ಕೆ.ಸಿ. ವೇಣುಗೋಪಾಲ್ ದೂರಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಇತರರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.