ರಾಹುಲ್ ಗಾಂಧಿ 'ಸೈಕಲ್ ಸವಾರಿ' ಹಿಂದೆ ಸರ್ಕಾರಕ್ಕೆ ಹಲವು ಸಂದೇಶ!
ನವದೆಹಲಿ, ಆಗಸ್ಟ್ 3: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಿರ್ವಹಣೆ ಮತ್ತು ಪೆಗಾಸಸ್ ತಂತ್ರಾಂಶದ ಬಳಸಿ ಬೇಹುಗಾರಿಕೆ ನಡೆಸಿರುವ ಪ್ರಕರಣಗಳೇ ಸದ್ದು ಮಾಡುತ್ತಿವೆ. ಈ ಹಿನ್ನೆಲೆ ಒಂದು ವಾರದಲ್ಲಿ ಎರಡನೇ ಬಾರಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ ನಡೆಸಲಾಯಿತು.
ಸಂಸತ್ ಎದುರಿಗೆ ಅಣಕು ಪ್ರದರ್ಶನ ನಡೆಸಿದ ವಿರೋಧ ಪಕ್ಷಗಳ ನಾಯಕರು ಉಪಹಾರ ಕೂಟದಲ್ಲಿ ಭಾಗಿಯಾದರು. ತೃಣಮೂಲ ಕಾಂಗ್ರೆಸ್ ಪಕ್ಷದ ಮೆಹುವಾ ಮಿತ್ರಾ, ನ್ಯಾಷನಲ್ ಕಾನ್ಫರೆನ್ಸ್ ಪಾರ್ಟಿಯ ಸಂಸದೆ ಸುಪ್ರಿಯಾ ಸುಲೆ, ಶಿವಸೇನೆಯ ಸಂಸದ ಸಂಜಯ್ ರಾವತ್ ಮತ್ತು ಡಿಎಂಕೆಯ ಸಂಸದೆ ಕನಿಮೋಳಿ ಸಭೆಯಲ್ಲಿ ಹಾಜರಾಗಿದ್ದರು. 'ನಾವೆಲ್ಲರೂ ಸರ್ಕಾರದ ವಿರುದ್ಧದ ವಿಶೇಷ ಹೋರಾಟಕ್ಕಾಗಿ ಸೇರಿದ್ದೇವೆ,' ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.
ಪೆಗಾಸಸ್ ಬೇಹುಗಾರಿಗೆ ಬಗ್ಗೆ ಕೇಂದ್ರ ಸರ್ಕಾರಕ್ಕೆ ಚಿದಂಬರಂ 'ಸರಳ ಪ್ರಶ್ನೆ'
ದೇಶದ ಜನ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವುದಕ್ಕೆ ಸೈಕಲ್ ನಲ್ಲಿ ಸಂಸತ್ತಿಗೆ ತೆರಳುವುದು ಒಂದು ಪ್ರಯತ್ನ ಎಂದು ರಾಹುಲ್ ಗಾಂಧಿ ಈ ವೇಳೆ ಹೇಳಿದ್ದರು. ಇದೇ ಸಂದರ್ಭದಲ್ಲಿ ಪೆಗಾಸಸ್ ಬೇಹುಗಾರಿಕೆ, ತೈಲ ಬೆಲೆ ಏರಿಕೆ, ಅಡುಗೆ ಅನಿಲ ಬೆಲೆ ಏರಿಕೆ, ಕೊರೊನಾವೈರಸ್ ನಿರ್ವಹಣೆ, ವಿವಾದಿತ ಕೃಷಿ ಕಾಯ್ದೆಗಳ ರದ್ದು ಸಂಬಂಧ ಚರ್ಚಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ ವಿವಾದಿತ ಕೃಷಿ ಕಾಯ್ದೆ ವಿರುದ್ಧ ಟ್ರ್ಯಾಕ್ಟರ್ ಚಾಲನೆ ಮಾಡಿದ್ದ ರಾಹುಲ್ ಗಾಂಧಿ ಮಂಗಳವಾರ ಸಂಸತ್ತಿಗೆ ಸೈಕಲ್ ಏರಿ ಬಂದರು. ಆ ಮೂಲಕ ದೇಶದಲ್ಲಿ ಹೆಚ್ಚುತ್ತಿರುವ ತೈಲಬೆಲೆ ನಿಯಂತ್ರಿಸುವಂತೆ ಸರ್ಕಾರಕ್ಕೆ ಸಂದೇಶ ರವಾನಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ರಣತಂತ್ರ ಹೇಗಿದೆ?:
* "ವಿರೋಧ ಪಕ್ಷಗಳ ಉಪಹಾರ ಕೂಟದಲ್ಲಿ ಹಾಜರಿದ್ದೇವೆಯೇ ಇಲ್ಲವೇ ಎನ್ನುವುದು ಮುಖ್ಯವಲ್ಲ. ಆ ಸಭೆಯಲ್ಲಿ ಏನು ಚರ್ಚೆ ಆಯಿತು ಎನ್ನುವುದು ಮುಖ್ಯವಾಗುತ್ತದೆ. ರೈತರು ಮತ್ತು ಪೆಗಾಸಸ್ ಬೇಹುಗಾರಿಕೆ ವಿಷಯದಲ್ಲಿ ನಾವು ಪ್ರತಿಪಕ್ಷಗಳ ಜೊತೆಗೆ ನಿಲ್ಲುತ್ತೇವೆ," ಎಂದು ಆಮ್ ಅದ್ಮಿ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ.
* ಬಿಜೆಪಿ ಸಂಸದೀಯ ಸಭೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರೋಧ ಪಕ್ಷಗಳ ನಡವಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ಪ್ರತಿಪಕ್ಷಗಳು ಸಂಸತ್ ಕಲಾಪ ನಡೆಸುವುದಕ್ಕೆ ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದ ಪ್ರಜಾಪ್ರಭುತ್ವ ಮತ್ತು ಪ್ರಜೆಗಳಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
* ಕೇಂದ್ರ ಸಚಿವ ರಾಜನಾಥ್ ಸಿಂಗ್ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆಗೆ ಸೋಮವಾರ ಮಧ್ಯಾಹ್ನ ಕರೆ ಮಾಡಿ ಸುಲಭ ಕಲಾಪಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೇಲ್ಮನೆ ಕಲಾಪವನ್ನು ಸುಲಭ ಮತ್ತು ಆರೋಗ್ಯಕರ ಚರ್ಚೆಗೆ ಮೀಸಲಿಡುವ ಬಗ್ಗೆ ಖರ್ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
* ಕಳೆದ ಜುಲೈ 19ರಿಂದ ಮುಂಗಾರು ಅಧಿವೇಶನ ಆರಂಭವಾಗಿದ್ದು, ಎರಡು ವಾರಗಳಲ್ಲಿ ಒಂದೇ ಒಂದು ದಿನ ಸುಗಮ ಕಲಾಪ ನಡೆದಿಲ್ಲ. ಒಟ್ಟು 107 ಗಂಟೆಗಳಲ್ಲಿ ಕೇವಲ 18 ಗಂಟೆ ಮಾತ್ರ ಸಂಸತ್ ಕಲಾಪ ನಡೆದಿದೆ. ಇದರ ಹೊರತಾಗಿ ಸಂಸತ್ತಿನಲ್ಲಿ ನಡೆದ ಗದ್ದಲ ಗಲಾಟೆಯಿಂದ ದೇಶದ 133 ಕೋಟಿ ತೆರಿಗೆದಾರರ ಹಣ ವ್ಯರ್ಥವಾಗಿ ಪೋಲಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಪೆಗಾಸಸ್ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ಆಗಬಾರದೇ?:
"ನಾನು ಸಾರ್ವಜನಿಕರಿಗೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನಿಮ್ಮ ಫೋನಿನಲ್ಲಿ ಆಯುಧವೊಂದನ್ನು ಇರಿಸಿದ್ದಾರೆ. ಅದನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರು, ಪತ್ರಕರ್ತರು ಹಾಗೂ ಸಾಮಾಜಿಕ ಹೋರಾಟಗಾರರ ಮೇಲೆ ಬಳಸಲಾಗುತ್ತಿದೆ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಬಾರದೇ," ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೇಳಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನ
ನವದೆಹಲಿಯಲ್ಲಿ 14 ವಿರೋಧ ಪಕ್ಷಗಳ ನಾಯಕರು ಇದೇ ಪೆಗಾಸಸ್ ಬಗ್ಗೆ ಚರ್ಚಿಸಿದ್ದು ಕೇಂದ್ರ ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಅಣಿಯಾಗಿವೆ. ಈ ಸಂಬಂಧ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ, ರಾಷ್ಟ್ರೀಯ ಕಾಂಗ್ರೆಸ್ ಪಾರ್ಟಿ, ಶಿವಸೇನೆ, ರಾಷ್ಟ್ರೀಯ ಜನತಾ ದಳ, ಸಮಾಜವಾದಿ, ಭಾರತೀಯ ಕಮ್ಯುನಿಸ್ಟ್ ಪಾರ್ಟಿ(ಸಿಪಿಐ), ಸಿಪಿಐ(ಎಂ), ನ್ಯಾಷನಲ್ ಕಾನ್ಫರೆನ್ಸ್, ಆಮ್ ಆದ್ಮಿ ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಆರ್ಎಸ್ ಪಿ, ಕೇರಳ ಕಾಂಗ್ರೆಸ್(ಎಂ) ಮತ್ತು ವಿಸಿಕೆ ಪಕ್ಷದ ನಾಯಕರು ಸಭೆ ನಡೆಸಿದ್ದು ಪರವಾನಗಿ ಪಡೆಯದ ಇಸ್ರೇಲ್ ಬೇಹುಗಾರಿಕೆ ತಂತ್ರಾಂಶಕ್ಕೆ ನಿರ್ಬಂಧ ವಿಧಿಸುವಂತೆ ಆಗ್ರಹಿಸುತ್ತಿದ್ದಾರೆ.
ಇಸ್ರೇಲ್ ತಂತ್ರಾಂಶದ ದುರ್ಬಳಕೆ ಬಗ್ಗೆ ತನಿಖಾ ವರದಿ
ಜಾಗತಿಕ ತನಿಖಾ ಸಂಸ್ಥೆಗಳು ಮಾಡಿರುವ ವರದಿಯ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ. ದೇಶದ ಪ್ರಮುಖ 142ಕ್ಕೂ ಹೆಚ್ಚು ರಾಜಕೀಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಯ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ, ದೇಶದ 300ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗುತ್ತಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.
ಪೆಗಾಸಸ್ ಬಗ್ಗೆ ಜಾಗತಿಕ ಮಾಧ್ಯಮಗಳ ವರದಿ
ಜಾಗತಿಕ ಸುದ್ದಿ ಸಂಸ್ಥೆಗಳಾಗಿರುವ ವಾಶಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್, ಲೇ ಮೊಂಡೆ ಜೊತೆ ಸಹಯೋಗ ಹೊಂದಿರುವ 'ದಿ ವೈರ್' ಪೆಗಾಸಸ್ ಬೇಹುಗಾರಿಕೆ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಮಾಧ್ಯಮ ಪಾಲುದಾರ ಸಂಸ್ಥೆ ಆಗಿರುವ ಪ್ಯಾರಿಸ್ ಮೂಲದ 'ನಾನ್ ಪ್ರಾಫಿಟ್ ಆರ್ಗನೈಸೇಷನ್ ಫಾರ್ಬಿಡನ್ ಸ್ಟೋರೀಸ್ ಮತ್ತು ರೈಟ್ಸ್ ಗ್ರೂಪ್ ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಸ್ಥೆಗಳು ಈ ಕುರಿತು ತನಿಖೆ ನಡೆಸಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಿವೆ. ಇಸ್ರೇಲ್ ಕಣ್ಗಾವಲು ಕಂಪನಿ ಎನ್ಎಸ್ಒ ಗ್ರೂಪ್ನ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಜಗತ್ತಿನಾದ್ಯಂತ ಸಾವಿರಾರು ಗಣ್ಯರ ಮೊಬೈಲ್ ಸಂಖ್ಯೆಯನ್ನು ಕದಿಯಲಾಗಿದೆ ಎಂದು ತನಿಖಾ ವರದಿಯಿಂದ ಗೊತ್ತಾಗಿದೆ. ವಿಶ್ವದಲ್ಲಿ ಒಟ್ಟು 50,000ಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಕದ್ದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.