ಇಡಿ ವಿಚಾರಣೆ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
ನವದೆಹಲಿ, ಸೆಪ್ಟೆಂಬರ್ 21: ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಎರಡು ದಿನ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಶುಕ್ರವಾರ ರಾತ್ರಿ ವೇಳೆಗೆ ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆ ಅಂತ್ಯವಾಗಿದೆ.
ಸೆಪ್ಟೆಂಬರ್ 19 ರಂದು ಗಂಟೆಗಳ ಕಾಲ ವಿಚಾರಣೆಗೆ ಒಳಪಟ್ಟಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೆ.20 ರಂದು 7 ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಡಿ.ಕೆ.ಶಿವಕುಮಾರ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಇಡಿ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ.
ವಿಚಾರಣೆ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, 'ಇಡಿ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ, ಎಲ್ಲ ದಾಖಲೆಗಳನ್ನು ನೀಡಿದ್ದೇನೆ' ಎಂದು ಹೇಳಿದ್ದಾರೆ.

'ನಾನು ಡಿ.ಕೆ.ಶಿವಕುಮಾರ್ ಅವರೊಟ್ಟಿಗೆ ಯಾವುದೇ ಹಣಕಾಸು ವ್ಯವಹಾರ ಇಟ್ಟುಕೊಂಡಿಲ್ಲ' ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ. 'ವಿಚಾರಣೆ ಮುಗಿದಿದ್ದು, ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಹೇಳಿಲ್ಲ' ಎಂದು ಅವರು ಮಾಹಿತಿ ನೀಡಿದ್ದಾರೆ.
ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಮಗಳನ್ನು ಕೆಲವು ದಿನಗಳ ಹಿಂದಷ್ಟೆ ವಿಚಾರಣೆಗೆ ಒಳಪಡಿಸಿದ್ದರು. ನಿನ್ನೆ ಮತ್ತು ಇಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಡಿ.ಕೆ.ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವರು ಪ್ರಮುಖರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.












Click it and Unblock the Notifications