Breaking:ಸಚಿವರ ವಜಾಗೆ ಆಗ್ರಹ; ಮಮತಾ ಬ್ಯಾನರ್ಜಿಗೆ ಕಾಂಗ್ರೆಸ್ ಪತ್ರ
ನವದೆಹಲಿ, ಜುಲೈ 26: ಶಾಲಾ ಸೇವಾ ಆಯೋಗದ (ಎಸ್ಎಸ್ಸಿ) ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕಾಂಗ್ರೆಸ್ ಒತ್ತಾಯಿಸಿದೆ.
ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಪಾರ್ಥ ಚಟರ್ಜಿ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.
ಪತ್ರದಲ್ಲಿ "ಪ್ರಸ್ತುತ ನಿಮ್ಮ ಸರ್ಕಾರದ ಅಡಿಯಲ್ಲಿ ಕೈಗಾರಿಕೆ ಮತ್ತು ರಾಜ್ಯ ಸಂಸದೀಯ ವ್ಯವಹಾರಗಳ ಖಾತೆಯನ್ನು ಹೊಂದಿರುವ ಪಾರ್ಥ ಚಟರ್ಜಿ ಅವರ ಕಟ್ಟ ಕೆಲಸಗಳ ಬಗ್ಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಅವರು 2014-2021 ರ ಅವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದರು, ಈ ಸಮಯದಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮಗಳು ನಡೆದಿವೆ. ಈ ಶಿಕ್ಷಕರ ನೇಮಕಾತಿ ಹಗರಣವು ಬಹಿರಂಗ ರಹಸ್ಯವಾಗಿತ್ತು ಮತ್ತು ಬಂಗಾಳದ ಎಲ್ಲರಿಗೂ ಇದು ತಿಳಿದಿತ್ತು. ಆದರೆ, ನ್ಯಾಯಾಲಯದ ಮಧ್ಯಸ್ಥಿಕೆಯ ನಂತರವೇ ತನಿಖಾ ಸಂಸ್ಥೆಗಳು ಅದರ ಮೇಲೆ ಕಾರ್ಯನಿರ್ವಹಿಸಲು ಪ್ರಾರಂಭಿಸಿದವು. ಇದು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಬಹುದೊಡ್ಡ ಕಳಂಕವಾಗಿದೆ. ಪಾರ್ಥ ಚಟರ್ಜಿ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ನಾನು ಒತ್ತಾಯಿಸುತ್ತೇನೆ" ಎಂದಿದ್ದಾರೆ.

ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಟರ್ಜಿ ಮತ್ತು ಅವರ ಸಹಾಯಕರನ್ನು ಶನಿವಾರ ಬಂಧಿಸಲಾಗಿದೆ. ಸಚಿವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರಿಂದ 20 ಕೋಟಿ ರೂಪಾಯಿ ವಶಪಡಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಬಂಧನ ನಡೆದಿದೆ. ಶಿಕ್ಷಕರ ನೇಮಕಾತಿ ಹಗರಣ ಹಿನ್ನೆಲೆ ಬಂಧನಕ್ಕೊಳಗಾಗಿರುವ ಸಚಿವ ಪಾರ್ಥ ಚಟರ್ಜಿ ಸಂಬಂಧ ತೃಣಮೂಲ ಕಾಂಗ್ರೆಸ್ ಬಿಜೆಪಿ ರಾಜಕೀಯ ಸೇಡಿಗಾಗಿ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಆರೋಪಿಸಿದೆ. ಸಚಿವರ ಆರೋಪ ಸಾಬೀತಾದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿಯೂ ಟಿಎಂಸಿ ಹೇಳಿದೆ.
ಪಾರ್ಥ ಚಟರ್ಜಿ ಅವರನ್ನು ಆಗಸ್ಟ್ 3 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗಿದೆ.












Click it and Unblock the Notifications