ನ್ಯಾಯಾಂಗ ನಿಂದನೆ : ಸುಪ್ರೀಂನಿಂದ ಪ್ರಶಾಂತ್ ಭೂಷಣ್ ಅರ್ಜಿ ತಿರಸ್ಕೃತ
ನವದೆಹಲಿ, ಮಾರ್ಚ್ 07 : ಸಿಬಿಐನ ಹಂಗಾಮಿ ನಿರ್ದೇಶಕರಾಗಿ ಎಂ ನಾಗೇಶ್ವರ ರಾವ್ ಅವರ ಆಯ್ಕೆಯನ್ನು ಪ್ರಶ್ನಿಸಿ ನ್ಯಾಯಾಲಯವನ್ನು ಟೀಕಿಸಿದಕ್ಕಾಗಿ ಹೂಡಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ.
ಈ ನ್ಯಾಯಾಂಗ ನಿಂದನೆಯ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಮಾಡುತ್ತಿದ್ದುತನ್ನು ಆಕ್ಷೇಪಿಸಿ, ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರು ಅರ್ಜಿ ಸಲ್ಲಿಸಿದ್ದರು. ಈಗ ಆ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿರುವುದರಿಂದ ಪ್ರಶಾಂತ್ ಅವರು ವಿಚಾರಣೆ ಎದುರಿಸಲೇಬೇಕಾಗಿದೆ.
ನ್ಯಾಯಾಂಗ ನಿಂದನೆಯ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಸುಪ್ರೀಂ ಕೋರ್ಟ್ ಪ್ರಶಾಂತ್ ಭೂಷಣ್ ಅವರಿಗೆ ಫೆಬ್ರವರಿ 6ರಂದು ಮೂರು ವಾರಗಳ ಕಾಲಾವಕಾಶ ನೀಡಿತ್ತು. ನ್ಯಾಯಾಲಯವನ್ನೇ ನಿಂದಿಸುವುದು ನ್ಯಾಯದಾನ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದಂತಾಗುತ್ತದೆ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಮತ್ತು ನ್ಯಾ. ನವೀನ್ ಸಿನ್ಹಾ ಅವರು ಅಭಿಪ್ರಾಯ ಪಟ್ಟಿದ್ದರು.

ಸಿಬಿಐ ಹಂಗಾಮಿ ನಿರ್ದೇಶಕರಾಗಿ ಎಂ ನಾಗೇಶ್ವರ ರಾವ್ ಅವರನ್ನು ನೇಮಕ ಮಾಡುವಾಗ ಕೇಂದ್ರ ಸರಕಾರ, ಸರ್ವೋಚ್ಚ ನ್ಯಾಯಾಲಯದ ದಾರಿ ತಪ್ಪಿಸಿತ್ತು ಎಂದು ಪ್ರಶಾಂತ್ ಭೂಷಣ್ ಅವರು ಟ್ವಿಟ್ಟರ್ ನಲ್ಲಿ ಆರೋಪಿಸಿದ್ದರು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ, ನ್ಯಾಯಮೂರ್ತಿ ಎಕೆ ಸಿಕ್ರಿ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಡೆಸಿದ ಸಭೆಯ ಬಗ್ಗೆ ಸುಳ್ಳು ವರದಿ ನೀಡಿತ್ತು ಎಂದೂ ಫೆಬ್ರವರಿ 1ರಂದು ಆರೋಪಿಸಿದ್ದರು.












Click it and Unblock the Notifications