Coronavirus: ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ ಎಂದ ಪ್ರಧಾನಿ ಮೋದಿ
ನವದೆಹಲಿ, ಮಾರ್ಚ್.12: ಮಾರಣಾಂತಿಕ ಕೊರೊನಾ ವೈರಸ್ ಗೆ ಭಾರತಕ್ಕೆ ಭಾರತವೇ ನಲುಗಿ ಹೋಗುತ್ತಿದೆ. ದಿನ ಬೆಳಗಾದರೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಜೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಸಂದೇಶ ರವಾನಿಸಿದ್ದಾರೆ.
ಕೊರೊನಾ ವೈರಸ್ ಬಗ್ಗೆ ಆತಂಕ ಬೇಕಾಗಿಲ್ಲ, ಮುನ್ನೆಚ್ಚರಿಕೆ ವಹಿಸಿ ಎಂದು ಕರೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರದ ಯಾವುದೇ ಸಚಿವರು ವಿದೇಶಗಳಿಗೆ ಪ್ರಯಾಣ ಮಾಡುವುದಿಲ್ಲ. ಸೋಂಕು ನಿಯಂತ್ರಣಕ್ಕೆ ಹೆಚ್ಚಿನ ಗಮನ ಕೊಡಲಾಗುತ್ತದೆ ಎಂದು ಪ್ರಧಾನಿ ತಿಳಿಸಿದ್ದಾರೆ.
Breaking: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ಸಂಖ್ಯೆ 5ಕ್ಕೆ ಏರಿಕೆ
ವಿಶ್ವವನ್ನೆಲ್ಲ ಹರಡುತ್ತಿರುವ ಕೊರೊನಾ ವೈರಸ್ ಸರಪಳಿಯನ್ನು ನಾವು ತುಂಡರಿಸಬೇಕಿದೆ. ಸಾರ್ವಜನಿಕ ಸಭೆ ಸಮಾರಂಭಗಳನ್ನು ಆದಷ್ಟು ಮಟ್ಟಿಗೆ ದೂರ ಉಳಿಯೋಣ. ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸೋಣ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ:
ದೇಶದಲ್ಲಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಆಯಾ ರಾಜ್ಯ ಸರ್ಕಾರಗಳು ಮತ್ತು ಸಚಿವರಿಗೆ ಪ್ರಧಾನಮಂತ್ರಿ ಸಲಹೆ ನೀಡಿದ್ದಾರೆ. ಮಾರಕ ಸೋಂಕಿನಿಂದ ದೇಶವನ್ನು ಮತ್ತು ದೇಶದ ಪ್ರಜೆಗಳನ್ನು ಸುರಕ್ಷಿತವಾಗಿ ನೋಡಿಕೊಳ್ಳಬೇಕಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.