ಭಾರತದಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿದರೆ ಜೈಲು ಊಟ ಫಿಕ್ಸ್!
ನವದೆಹಲಿ, ಮಾರ್ಚ್.23: ಕೊರೊನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ಭಾರತದಲ್ಲಿ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು 75 ಜಿಲ್ಲೆಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡುವಂತೆ ಘೋಷಿಸಿದೆ.
ಕೇಂದ್ರ ಸರ್ಕಾರ ಲಾಕ್ ಡೌನ್ ಮಾಡುವಂತೆ ಘೋಷಿಸಿದ ಮರುದಿನವೇ ಕೆಲವು ಜಿಲ್ಲೆಗಳಲ್ಲಿ ಪರಿಸ್ಥಿತಿ ಯಥಾವತ್ತಾಗಿ ಮುಂದುವರಿದಿದೆ. ಶೇ.40ರಷ್ಟು ಜನರು ಮತ್ತೆ ರಸ್ತೆಗೆ ಇಳಿದಿದ್ದಾರೆ. ಸಣ್ಣ-ಪುಟ್ಟ ಅಂಗಡಿ, ಹೋಟೆಲ್ ಗಳು ಎಂದಿನಂತೆ ಕಾರ್ಯಾರಂಭ ಮಾಡಿವೆ.
ಕೊರೊನಾ ವೈರಸ್ ಭೀತಿಯ ನಡುವೆಯೂ ಕೇಂದ್ರ ಸರ್ಕಾರದ ಆದೇಶಕ್ಕೆ ಜನರು ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲ ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವಂತೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಆಯಾ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯ ಸರ್ಕಾರಗಳಿಗೆ ನರೇಂದ್ರ ಮೋದಿ ಮನವಿ
ಕೇಂದ್ರ ಸರ್ಕಾರ ಕರೆ ನೀಡಿರುವ ಲಾಕ್ ಡೌನ್ ನಿರ್ಧಾರವನ್ನು ಇಂದಿಗೂ ಕೆಲವರು ಗಂಭೀರವಾಗಿ ತೆಗೆದುಕೊಂಡಿಲ್ಲ. ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು, ನಿಮ್ಮ ಕುಟುಂಬವನ್ನು ರಕ್ಷಿಸಲು ನಿಯಮಗಳನ್ನು ಪಾಲಿಸಿರಿ. ರಾಜ್ಯ ಸರ್ಕಾರಗಳು ಕಾನೂನು ಮತ್ತು ನಿಯಮಗಳನ್ನು ಜನರು ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿಕೊಂಡಿದ್ದಾರೆ.

75 ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವಂತೆ ಆದೇಶ
ಭಾನುವಾರ ಜನತಾ ಕರ್ಫ್ಯೂ ಅಂತ್ಯವಾಗುತ್ತಿದ್ದಂತೆ ಪ್ರಧಾನಿ ಮೋದಿ ಹೊಸ ಆದೇಶವನ್ನು ಹೊರಡಿಸಿದರು. ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ದೇಶದ 75 ಜಿಲ್ಲೆಗಳನ್ನು ಮಾರ್ಚ್.31ರವರೆಗೂ ಲಾಕ್ ಡೌನ್ ಮಾಡುವಂತೆ ಕೇಂದ್ರ ಸರ್ಕಾರವು ಪ್ರಕಟಣೆಯನ್ನು ಹೊರಡಿಸಿತು.

ಈ ರಾಜ್ಯದ ಅತಿಹೆಚ್ಚು ಜಿಲ್ಲೆಗಳು ಲಾಕ್ ಡೌನ್ ಗೆ ಆದೇಶ
ಅತಿಹೆಚ್ಚು ಕೊರೊನಾ ವೈರಸ್ ಸೋಂಕಿತರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವಂತೆ ಆದೇಶಿಸಲಾಗಿದೆ. ಇದರ ಜೊತೆಗೆ ಆಂಧ್ರಪ್ರದೇಶ, ಉತ್ತರ ಪ್ರದೇಶ, ಪಂಜಾಬ್, ಕೇರಳ, ತಮಿಳುನಾಡು ಮತ್ತು ಕರ್ನಾಟಕದಲ್ಲೂ ಕೆಲವು ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವಂತೆ ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ 9 ಜಿಲ್ಲೆಗಳು ಸಂಪೂರ್ಣ ಸ್ತಬ್ಧ
ಕರ್ನಾಟಕದಲ್ಲಿ ಇದುವರೆಗೂ 26ಕ್ಕೂ ಹೆಚ್ಚು ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ರಾಜ್ಯದ 9 ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವಂತೆ ಸೂಚನೆ ನೀಡಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಬೆಳಗಾವಿ, ಚಿಕ್ಕಬಳ್ಳಾಪುರ, ಮೈಸೂರು, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಮಾರ್ಚ್.31ರವರೆಗೂ ಲಾಕ್ ಡೌನ್ ಮಾಡುವುದಾಗಿ ರಾಜ್ಯ ಸರ್ಕಾರ ಕೂಡಾ ಘೋಷಣೆ ಮಾಡಿದೆ. ಮೈಸೂರಿನಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿದರೆ ಎರಡು ವರ್ಷ ಜೈಲುಶಿಕ್ಷೆ ವಿಧಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ರಿಶಃಯಂತ್ ಆದೇಶಿಸಿದ್ದಾರೆ.












Click it and Unblock the Notifications