ನವದೆಹಲಿಯಲ್ಲಿ ಕೊವಿಡ್-19 ಪರೀಕ್ಷೆಗೂ ಆಧಾರ್ ಕಾರ್ಡ್!
ನವದೆಹಲಿ, ಸಪ್ಟೆಂಬರ್.08: ನೊವೆಲ್ ಕೊರೊನಾವೈರಸ್ ಸೋಂಕು ಪರೀಕ್ಷೆ ನಡೆಸುವುದಕ್ಕೆ ನವದೆಹಲಿಯಲ್ಲಿ ವೈದ್ಯರು ನೀಡುವ ಚೀಟಿ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಆದರೆ ಕೆಲವು ಪ್ರಕರಣಗಳಲ್ಲಿ ಈ ನಿಯಮ ಅನ್ವಯವಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ.
ಕೊರೊನಾವೈರಸ್ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳುವವರು ಆಧಾರ್ ಕಾರ್ಡ್ ನ್ನು ತೆಗೆದುಕೊಂಡು ಹೋಗಬೇಕಾಗಿರುವುದು ಕಡ್ಡಾಯ. ಇದರ ಜೊತೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಅರ್ಜಿಯನ್ನು ಭರ್ತಿ ಮಾಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ನವದೆಹಲಿಯಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆಯ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಈ ಬಗ್ಗೆ ಆರೋಗ್ಯ ಸಚಿವರಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಕೊವಿಡ್-19 ಪರೀಕ್ಷೆ ನಡೆಸುವುದಕ್ಕೆ ವೈದ್ಯರು ನೀಡುವ ಚೀಟಿಯ ಅಗತ್ಯವೇನಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ನವದೆಹಲಿಯಲ್ಲಿ ಕೊವಿಡ್-19 ಸಂಖ್ಯೆ ಏರಿಕೆ:
ಕೆಲವು ದಿನಗಳಿಂದ ನವದೆಹಲಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿವೆ. ಈ ವಾರ ಪ್ರತಿನಿತ್ಯ 3000ಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ದೃಢಪಡುತ್ತಿದ್ದು, ಆತಂಕ ಸೃಷ್ಟಿಸಿತ್ತು. ಆದರೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಗೆ ಹೆಚ್ಚು ಆದ್ಯತೆ ನೀಡುವ ಅಗತ್ಯವಿಲ್ಲ. ಕೊವಿಡ್-19 ಸೋಂಕಿನ ತಪಾಸಣೆ ವೇಗ ಹೆಚ್ಚಿಸಲಾಗಿದ್ದು, ಈ ಪ್ರಮಾಣದಲ್ಲಿ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದರು.
ನವದೆಹಲಿಯಲ್ಲಿ ಕೊರೊನಾವೈರಸ್ ಒಟ್ಟು ಪ್ರಕರಣಗಳ ಸಂಖ್ಯೆ 193526ರ ಗಡಿ ದಾಟಿದೆ. ಈ ಪೈಕಿ 168384 ಸೋಂಕಿತರು ಗುಣಮುಖರಾಗಿದ್ದು, 20543 ಸಕ್ರಿಯ ಪ್ರಕರಣಗಳಿವೆ. ಮಹಾಮಾರಿಗೆ 4599 ಜನರು ಪ್ರಾಣ ಬಿಟ್ಟಿದ್ದಾರೆ.












Click it and Unblock the Notifications