"ಕೇಂದ್ರದ ಆಸ್ಪತ್ರೆಗಳಲ್ಲಿ ಕೊವಿಡ್-19 ರೋಗಿಗಳಿಗೆ ಹಾಸಿಗೆ ಮೀಸಲಿರಿಸಿ"
ನವದೆಹಲಿ, ನವೆಂಬರ್.24: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಮೂರನೇ ಅಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿ ಹೋಗಿದೆ. ಪ್ರತಿನಿತ್ಯ ಕೊವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜೊತೆಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಾಲೋಚನೆ ನಡೆಸಿದರು.
ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕೊವಿಡ್-19 ಸೋಂಕಿಗೆ ತತ್ತರಿಸಿದ ಪ್ರಮುಖ 8 ರಾಜ್ಯಗಳ ಸಿಎಂಗಳ ಜೊತೆಗೆ ಮೋದಿ ಚರ್ಚೆ ನಡೆಸಿದರು. ಮೊದಲ ಹಂತದ ಸಭೆಯಲ್ಲಿ ಪ್ರಧಾನಿ ಜೊತೆಗೆ ಚರ್ಚಿಸಿದ ಅರವಿಂದ್ ಕೇಜ್ರಿವಾಲ್ ಅವರು, ಸೋಂಕಿತರಿಗೆ ಕೇಂದ್ರ ಸರ್ಕಾರದ ಆಸ್ಪತ್ರೆಗಳಲ್ಲೂ ಹೆಚ್ಚುವರಿ ಮೀಸಲಾತಿ ನೀಡುವಂತೆ ಮನವಿ ಮಾಡಿಕೊಂಡರು.
ಕೊವಿಡ್-19 ಸ್ಫೋಟ: ಎಲ್ಲ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಚರ್ಚೆ
ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ 1000 ಹೆಚ್ಚುವರಿ ತುರ್ತು ನಿಗಾ ಘಟಕದ ಹಾಸಿಗೆಗಳನ್ನು ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಮೀಸಲು ಇರಿಸುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ್ದಾರೆ ಎಂದು ತಿಳಿದು ಬಂದಿದೆ.
ನವದೆಹಲಿಯಲ್ಲಿ ಕೊವಿಡ್-19 ಮೂರನೇ ಅಲೆ:
ಕೊರೊನಾವೈರಸ್ ಸೋಂಕಿನ ಮೂರನೇ ಅಲೆಯಲ್ಲಿ ನವದೆಹಲಿ ತತ್ತರಿಸಿ ಹೋಗಿರುವ ಬಗ್ಗೆ ಪ್ರಧಾನಿಯವರಿಗೆ ಸಿಎಂ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದರು. ಕೊವಿಡ್-19 ಪರಿಸ್ಥಿತಿಯು ಹತೋಟಿಗೆ ಬಂದಿತ್ತು ಎನ್ನುವಷ್ಟರಲ್ಲೇ ಮತ್ತೆ ಸೋಂಕಿತ ಪ್ರಕರಣಗಳ ಸಂಖ್ಯೆ ಮಿತಿ ಮೀರಿದೆ. ಕಳೆದ ನವೆಂಬರ್.10ರಂದು ಒಂದೇ ದಿನ 8600 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿಯವರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ವಾಯುಮಾಲಿನ್ಯ ನಿಯಂತ್ರಿಸುವ ಬಗ್ಗೆ ಲಕ್ಷ್ಯ:
ನವದೆಹಲಿಯಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಜೊತೆಗೆ ವಾಯುಮಾಲಿನ್ಯ ಸಮಸ್ಯೆ ಕೂಡಾ ಹೆಚ್ಚಾಗಿ ಕಾಡುತ್ತಿದೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಬೆಳೆಗಳನ್ನು ಸುಡುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯ ಹೆಚ್ಚುತ್ತಿದ್ದು, ಜನರು ಉಸಿರಾಡುವುದಕ್ಕೂ ಕಷ್ಟ ಎನ್ನುವಂತಾ ಸ್ಥಿತಿ ನಿರ್ಮಾಣವಾಗುತ್ತಿದೆ. ನೆರೆರಾಜ್ಯಗಳಲ್ಲಿ ಬೆಳೆಗಳನ್ನು ಸುಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪ್ರಧಾನಿಯವರಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೋರಿದ್ದಾರೆ ಎನ್ನಲಾಗಿದೆ.