'ಕುಮಾರಸ್ವಾಮಿ ಹಾಗೂ ರಾಹುಲ್ ನಡುವೆ ರಾಜಕೀಯ ವಿಚಾರ ಬಂದಿಲ್ಲ'
ನವದೆಹಲಿ, ಆಗಸ್ಟ್ 30: ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಹುಲ್ ಗಾಂಧಿ ದೂರು ನೀಡಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ವಿವಾದಕ್ಕೆ ತೇಪೆ ಸವರುವ ಪ್ರಯತ್ನ ಮಾಡಿದ್ದಾರೆ.
ಕುಮಾರಸ್ವಾಮಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ಕೆಲವೇ ನಿಮಿಷಗಳ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಅವರು ಸರ್ಕಾರಕ್ಕೆ ನೂರು ದಿನಗಳು ಸಂದಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದಿದ್ದಾರೆ.
ಅಲ್ಲದೆ ಸಮ್ಮಿಶ್ರ ಸರ್ಕಾರದ ಕಾರ್ಯಕ್ರಮಗಳು ಹಾಗೂ ಸರ್ಕಾರದ ಕಾರ್ಯವೈಖರಿ ಕುರಿತು ರಾಹುಲ್ ಗಾಂಧಿಯವರಿಗೆ ಕುಮಾರಸ್ವಾಮಿ ವಿವರಣೆ ನೀಡಿದ್ದಾರೆ. ಆಗಸ್ಟ್ 31ರಂದು ಬೆಂಗಳೂರಿನಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಸರ್ಕಾರದ ಮುಂದಿನ ಕಾರ್ಯಕ್ರಮ್ಳ ಕುರಿತಂತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದರೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿಕೆ ನೀಡಿದ್ದು ಭಾರಿ ಕೋಲಾಹಲಕ್ಕೆ ಕಾರಣವಾಗಿತ್ತು ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ರಾಹುಲ್ ಎದುರು ದೂರು ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಡ್ಯಾನಿಶ್ ಅಲಿ ಈ ವದಂತಿಯನ್ನು ಅಲ್ಲಗಳೆದಿದ್ದು ಆದರೆ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ, ಸಿದ್ದರಾಮಯ್ಯ ನಡುವಿನ ಬಾಂಧವ್ಯ ಸುಧಾರಿಸುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.












Click it and Unblock the Notifications