ರಾಹುಲ್ ಗಾಂಧಿ ಪ್ರಚಾರ ಸಮಿತಿ ಮುಖ್ಯಸ್ಥ
ನವದೆಹಲಿ, ಜ.17 : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಬಹುದು ಎಂಬ ಕುತೂಹಲಗಳಿಗೆ ಕಾಂಗ್ರೆಸ್ ತೆರೆ ಎಳೆದಿದೆ. 2014ರ ಲೋಕಸಭೆ ಚುನಾವಣಾ ಪ್ರಚಾರ ಸಮಿತಿ ಮುಖ್ಯಸ್ಥರಾಗಿ ರಾಹುಲ್ ಗಾಂಧಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅಧಿಕೃತ ಪ್ರಟಕಣೆ ಹೊರಡಿಸಿದ್ದಾರೆ.
ಶುಕ್ರವಾರ ತಾಲಕಟೋರ ಮೈದಾನದಲ್ಲಿ ಕಾಂಗ್ರೆಸ್ ಮಹಾಧಿವೇಶನದಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಬಗ್ಗೆ ಕಾರ್ಯಕಾರಿ ಸಮಿತಿಯಲ್ಲಿ ತೆಗೆದುಕೊಂಡ ತೀರ್ಮಾನವೇ ಅಂತಿಮ ಎಂದು ಹೇಳಿದರು. ಈ ಮೂಲಕ ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಬಹುದು ಎಂಬ ಕುತೂಹಲಗಳಿಗೆ ತೆರೆ ಎಳೆದರು. [ಯುವರಾಜನಿಗೆ ಪ್ರಧಾನಿ ಪಟ್ಟಿವಿಲ್ಲ]
ಗುರುವಾರ ಸಂಜೆ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರವೇ ಅಂತಿಮ ಎಂದು ಸೋನಿಯಾ ಗಾಂಧಿ ಹೇಳಿದರು. ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರಚಾರ ಸಮಿತಿ ಮುಖ್ಯಸ್ಥರಾಗಿ ನೇಮಕ ಮಾಡುವ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
ಕಾಂಗ್ರೆಸ್ ಹಲವಾರು ಸಂಕಷ್ಟಗಳನ್ನು ಎದುರಿಸಿ ಈ ಮಟ್ಟಕ್ಕೆ ಬೆಳೆದಿದೆ. ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಸೋಲಿನಿಂದ ಪಕ್ಷ ಕಂಗೆಟ್ಟಿಲ್ಲ. ಎಲ್ಲರೂ ಒಗ್ಗಟ್ಟಾಗಿ ಲೋಕಸಭೆ ಚುನಾವಣೆಯಲ್ಲಿ ಎದುರಿಸುತ್ತೇವೆ ಎಂದು ಸೋನಿಯಾ ಗಾಂಧಿ ಹೇಳಿದರು. 2014ರ ಚುನಾವಣೆ ತತ್ವ, ಸಿದ್ಧಾಂತಗಳ ಆಧಾರದ ಮೇಲೆ ನಡೆಯುತ್ತದೆ. ಜಾತ್ಯಾತೀತ ತತ್ವಕ್ಕೆ ನಾವು ಬೆಲೆ ಕೊಡುತ್ತೇವೆ ಎಂದು ಸೋನಿಯಾ ಹೇಳಿದರು.
ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಸಿಸಬೇಕು ಎಂಬ ಕಾಂಗ್ರೆಸ್ ಪ್ರತಿನಿಧಿಗಳ ಆಗ್ರಹವನ್ನು ತಳ್ಳಿಹಾಕಿದ ಕಾಂಗ್ರೆಸ್ ವರಿಷ್ಠೆ, ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡುವುದಿಲ್ಲ. ರಾಹುಲ್ರನ್ನು 2014ರ ಲೋಕಸಭಾ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಆಯ್ಕೆ ಮಾಡಿದ್ದು, ಅವರ ನೇತೃತ್ವದಲ್ಲಿ ತತ್ವ, ಸಿದ್ಧಾಂತಗಳನ್ನಿಟ್ಟುಕೊಂಡು ನಾವು ಚುನಾವಣೆ ಎದುರಿಸುತ್ತೇವೆ ಎಂದರು.
ಕೇಂದ್ರ ಯುಪಿಎ ಸರ್ಕಾರ ಜಾರಿಗೆ ತಂದ ಮಾಹಿತಿ ಹಕ್ಕು ಕಾಯ್ದೆ ಜನಸಾಮಾನ್ಯರಿಗೆ ದೊರೆತ ದೊಡ್ಡ ಶಕ್ತಿಯಾಗಿದೆ. ಆಹಾರ ಭದ್ರತಾ ಕಾಯಿದೆ ಮತ್ತು ಭೂ ವಿಧೇಯಕ ಕಾಯ್ದೆ ಮೂಲಕ ಜನರಿಗೆ ಸಹಾಯಕವಾಗಿದೆ. ಇದು ಬಡ ಜನರಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಎಂದು ಸೋನಿಯಾ ಗಾಂಧಿ ಸರ್ಕಾರದ ಸಾಧನೆಗಳನ್ನು ವಿವರಿಸಿದರು.
ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸೋನಿಯಾ ಗಾಂಧಿ, ಪ್ರಬಲ ಲೋಕಪಾಲ ಮಸೂದೆ ಜಾರಿ ನಮ್ಮ ಬದ್ಧತೆಯಾಗಿತ್ತು. ಅದರಂತೆ ಭ್ರಷ್ಟಚಾರ ಮಟ್ಟಹಾಕಲು ನಾವು ಲೋಕಪಾಲ ಮಸೂದೆಯನ್ನು ಜಾರಿಗೊಳಿಸಿದ್ದೇವೆ. ಅಲ್ಲದೆ ಭ್ರಷ್ಟಾಚಾರ ತಡೆಯಲು ಇನ್ನಷ್ಟು ಕಾನೂನು ರೂಪಿಸುತ್ತೇವೆ ಎಂದು ತಿಳಿಸಿದರು.