ದೆಹಲಿ ವಿಧಾನಸಭೆ ಚುನಾವಣೆ; ಹೆಚ್ಚಿದ ಬಿಜೆಪಿ ಶಕ್ತಿ!
ನವದೆಹಲಿ, ಜನವರಿ 29 : ದೆಹಲಿ ವಿಧಾನಸಭೆ ಚುನಾವಣೆ ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಚುನಾವಣೆ ಗೆಲ್ಲಲೇಬೇಕು ಎಂದು ಹೊರಟಿರುವ ಬಿಜೆಪಿಯ ಬಲ ಹೆಚ್ಚಿದೆ. ಫೆಬ್ರವರಿ 8ರಂದು ಚುನಾವಣೆ ನಡೆಯಲಿದ್ದು, ಫೆ.11ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಬುಧವಾರ ಶಿರೋಮಣಿ ಅಕಾಲಿ ದಳ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದೆ. ಪಕ್ಷದ ಅಧ್ಯಕ್ಷ ಸುಖ್ಬೀರ್ ಬಾದಲ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.
ಶಿರೋಮಣಿ ಅಕಾಲಿ ದಳದ ನಾಯಕರ ಜೊತೆ ಜೆ. ಪಿ. ನಡ್ಡಾ ಸರಣಿ ಸಭೆಗಳನ್ನು ನಡೆಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ, "ಬಿಜೆಪಿ ನಮಗೆ ವಿಧಾನಸಭೆ ಚುನಾವಣೆಯಲ್ಲಿ ಬೆಂಬಲ ನೀಡಲಿದೆ" ಎಂದು ಜೆ. ಪಿ. ನಡ್ಡಾ ಘೋಷಣೆ ಮಾಡಿದರು.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ದೆಹಲಿಯಲ್ಲಿ ಅಧಿಕಾರದಲ್ಲಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಸಹ ಎಎಪಿ ಮರಳಿ ಅಧಿಕಾರ ಹಿಡಿಯಲಿದೆ ಎಂದು ಹೇಳಿವೆ. ಜೆ. ಪಿ. ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ.

ಶಿರೋಮಣಿ ಅಕಾಲಿ ದಳ
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿಚಾರದಲ್ಲಿ ತನ್ನ ನಿಲುವು ಬದಲಾಯಿಸಿಕೊಳ್ಳುವಂತೆ ಮಿತ್ರಪಕ್ಷ ಬಿಜೆಪಿ ಕೇಳಿದ ಹಿನ್ನಲೆಯಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಶಿರೋಮಣಿ ಅಕಾಲಿ ದಳ ಹೇಳಿತ್ತು. ಸಿಎಎ ವಿಚಾರದಲ್ಲಿ ಹಲವು ಭಿನ್ನಾಭಿಪ್ರಾಯವನ್ನು ಹೊಂದಿದ್ದರೂ ಮುಸ್ಲಿಂಮರನ್ನು ಸಿಎಎ ಹೊರಗುಳಿಯಲು ಸಾಧ್ಯವಿಲ್ಲ ಎಂಬ ದೃಢ ನಿಲುವನ್ನು ಪಕ್ಷ ಹೊಂದಿದೆ.

ಜೆ. ಪಿ. ನಡ್ಡಾ ಜೊತೆ ಸಭೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಜೊತೆ ಶಿರೋಮಣಿ ಅಕಾಲಿ ದಳದ ನಾಯಕರು ಬುಧವಾರ ಸಭೆ ನಡೆಸಿದರು. ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ದೆಹಲಿ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಶಿರೋಮಣಿ ಅಕಾಲಿ ದಳ ಘೋಷಣೆ ಮಾಡಿತು.

ಅರವಿಂದ್ ಕೇಜ್ರಿವಾಲ್
ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರವಿದೆ. 2015ರ ಚುನಾವಣೆಯಲ್ಲಿ ಪಕ್ಷ 67 ಸ್ಥಾನಗಳಲ್ಲಿ ಜಯಗಳಿಸಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿದಿತ್ತು. ಈ ಬಾರಿಯ ಚುನಾವಣೆಯಲ್ಲಿಯೂ ಪಕ್ಷ ಅಧಿಕಾರ ಹಿಡಿಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

ದೆಹಲಿಯಲ್ಲಿ ಬಿಜೆಪಿ ಗೆಲುವು
1993ರಿಂದ ಇದುವರೆಗೂ ದೆಹಲಿಯಲ್ಲಿ 6 ಚುನಾವಣೆಗಳು ನಡೆದಿವೆ. ಮೊದಲ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರ ಹಿಡಿದಿತ್ತು. ನಂತರ ನಡೆದ ಮೂರು ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿತ್ತು. ನಂತರದ ಎರಡು ಚುನಾವಣೆಯಲ್ಲಿ ಎಎಪಿ ಅಧಿಕಾರ ಹಿಡಿದಿದೆ.












Click it and Unblock the Notifications