ಜೂ.17ರಂದು ದೆಹಲಿ ಗಲಭೆ ಆರೋಪಿಗಳ ಬಿಡುಗಡೆ ಭವಿಷ್ಯ
ನವದೆಹಲಿ, ಜೂನ್ 16: ದೆಹಲಿ ಗಲಭೆ ಆರೋಪಿಗಳಾದ ದೇವಾಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕೋರಿದ್ದ ಅರ್ಜಿಯ ವಿಚಾರಣೆಯನ್ನು ನಾಳೆ(ಜೂನ್ 17)ರಂದು ಕೈಗೆತ್ತಿಕೊಳ್ಳುವುದಾಗಿ ದೆಹಲಿಯ ಕಡ್ಕಡ್ಡೂಮಾ ನ್ಯಾಯಾಲಯ ತಿಳಿಸಿದೆ.
ಇತರೆ ಜಾಮೀನು ಅರ್ಜಿಗಳು ಭಾರಿ ಸಂಖ್ಯೆಯಲ್ಲಿದ್ದು, ಹಲವು ಅರ್ಜಿಗಳ ವಿಚಾರಣೆ ಬಾಕಿ ಇರುವುದರಿಂದ ದೆಹಲಿ ಗಲಭೆ ಆರೋಪಿಗಳ ತಕ್ಷಣ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಲು ನ್ಯಾಯಾಲಯ ಮುಂದಾಗಿದೆ.
ಆಸೀಫ್, ಕಲಿತಾ, ನತಾಶಾಗೆ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ದೆಹಲಿ ಪೊಲೀಸರು
ಗುರುವಾರ ಬೆಳಿಗ್ಗೆ 11 ಗಂಟೆ ವೇಳೆಗೆ ನ್ಯಾಯಾಲಯದಿಂದ ಆದೇಶ ಹೊರ ಬೀಳುವ ಸಾಧ್ಯತೆಯಿದ್ದು, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಿವಿಂದರ್ ಬೇಡಿ ಕೂಡಾ ಈ ಬಗ್ಗೆ ದೃಢಪಡಿಸಿದ್ದಾರೆ.
ದೇವಾಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಇಬ್ಬರಿಗೂ ಮಂಗಳವಾರದಂದು ಜಾಮೀನು ಸಿಕ್ಕಿದ್ದರೂ, ವಿಳಾಸ ಮತ್ತು ಶ್ಯೂರಿಟಿಗಳನ್ನು ಪರಿಶೀಲನೆಯಾಗದ ಕಾರಣ ಬಿಡುಗಡೆ ಸಾಧ್ಯವಾಗಿರಲಿಲ್ಲ. ಇಂದು ಅರ್ಜಿ ವಿಚಾರಣೆ ನಡೆಸುವ ವೇಳೆ ಪರಿಶೀಲನಾ ವರದಿ ಸಲ್ಲಿಸಲು ಪೊಲೀಸರಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಆದೇಶ ಹೊರಡಿಸದೆ ಗುರುವಾರಕ್ಕೆ ವಿಚಾರಣೆ ಮುಂದೂಡಲಾಗಿದೆ.
ಈ ನಡುವೆ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಕಠಿಣ ನಿಬಂಧನೆಗಳ ಅಡಿಯಲ್ಲಿ ಬಂಧನದಲ್ಲಿದ್ದ ಪಿಂಜ್ರಾ ತೋಡ್ ಕಾರ್ಯಕರ್ತೆಯರಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಹಾಗೂ ಜಾಮಿಯಾ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾಗೆ ಸಿಕ್ಕಿರುವ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದಾರೆ.