ನವದೆಹಲಿ ಎಲ್ಎನ್ ಜೆಪಿ ಆಸ್ಪತ್ರೆಗೆ ಡಿಸಿಎಂ ಮನೀಶ್ ಸಿಸೋಡಿಯಾ ದಾಖಲು
ನವದೆಹಲಿ, ಸಪ್ಟೆಂಬರ್.23: ನವದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ವಾರ ಮನೀಶ್ ಸಿಸೋಡಿಯಾ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು.
ತಮಗೆ ಕೊವಿಡ್-19 ಸೋಂಕು ಖಾತ್ರಿಯಾಗಿರುವ ಬಗ್ಗೆ ಸ್ವತಃ ಡಿಸಿಎಂ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದರು. "ಅಲ್ಪ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೊರೊನಾವೈರಸ್ ಸೋಂಕಿತ ತಪಾಸಣೆಯನ್ನು ಮಾಡಿಸಿಕೊಂಡಿದ್ದೆನು. ಈ ವೇಳೆ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ನಾನು ಸೆಲ್ಫ್ ಐಸೋಲೇಷನ್ ನಲ್ಲಿದ್ದೇನೆ" ಎಂದು ಮನೀಶ್ ಸಿಸೋಡಿಯಾ ಬರೆದುಕೊಂಡಿದ್ದರು.
ಹಿಂದಿಯಲ್ಲಿ ಟ್ವೀಟ್ ಮಾಡಿದ್ದ ಡಿಸಿಎಂ ಮನೀಶ್ ಸಿಸೋಡಿಯಾ, ವೈದ್ಯಕೀಯ ತಪಾಸಣೆ ವೇಳೆಯಲ್ಲಿ ಜ್ವರದ ಹೊರತಾಗಿ ಯಾವುದೇ ಸೋಂಕಿನ ಲಕ್ಷಣಗಳು ಇರಲಿಲ್ಲ. ಬೇರೆ ಯಾವುದೇ ರೀತಿ ಆರೋಗ್ಯ ಸಮಸ್ಯೆಗಳಿಲ್ಲ. ಸಾಧ್ಯವಾದಷ್ಟು ಬೇಗ ನಿಮ್ಮೆಲ್ಲರ ಆಶೀರ್ವಾದದಿಂದ ಗುಣಮುಖನಾಗಿ ಕರ್ತವ್ಯಕ್ಕೆ ಹಾಜರಾಗುತ್ತೇನೆ" ಎಂದು ಟ್ವೀಟ್ ಮಾಡಿದ್ದರು.

ಜ್ವರ ಹೆಚ್ಚಾದ ಹಿನ್ನೆಲೆ ಆಸ್ಪತ್ರೆಗೆ ದಾಖಲು:
ಕಳೆದ ಸಪ್ಟೆಂಬರ್.14ರಂದು ಕೊರೊನಾವೈರಸ್ ಸೋಂಕು ತಗುಲಿದ್ದ ಡಿಸಿಎಂ ಮನೀಶ್ ಸಿಸೋಡಿಯಾ ಅವರಲ್ಲಿ ಸಾಧಾರಣ ಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಆದರೆ ಬುಧವಾರ ಜ್ವರದ ತೀವ್ರತೆ ಹೆಚ್ಚಾದ ಹಿನ್ನೆಲೆ ಅವರನ್ನು ನವದೆಹಲಿಯ ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.












Click it and Unblock the Notifications