ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರಾಯ್ಗೆ ಕೊರೊನಾ ಸೋಂಕು
ನವದೆಹಲಿ,ನವೆಂಬರ್ 26: ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರಾಯ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ತಮಗೆ ಸೋಂಕು ತಗುಲಿರುವುದನ್ನು ಸ್ವತಃ ಗೋಪಾಲ್ ಅವರೇ ತಿಳಿಸಿದ್ದು, ತಮ್ಮೊಂದಿಗೆ ಸಂಪರ್ಕದಲ್ಲಿದ್ದವರು ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸರ್ವಪಕ್ಷ ಸಭೆಯನ್ನು ನಡೆಸಿದ್ದರು. ಈ ಸಭೆಯಲ್ಲಿ ಗೋಪಾಲ್ ರಾಯ್ ಅವರು ಪಾಲ್ಗೊಂಡಿರಲಿಲ್ಲ.

ಕೆಲ ದಿನಗಳ ಹಿಂದಷ್ಟೇ ಜ್ವರ ಹಾಗೂ ಕೊರೊನಾ ಸೋಂಕು ತಗುಲಿದ ಸೋಂಕುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಯ್ ಅವರು ಕೊರೋನಾ ಪರೀಕ್ಷೆಗೊಳಗಾಗಿದ್ದು, ಈ ವೇಳೆ ವೈರಸ್ ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ದೆಹಲಿಯಲ್ಲಿ ಕೊರೊನಾ ಸೋಂಕು ವಿಪರೀತವಾಗುತ್ತಿದೆ. ಹೀಗಾಗಿ ಶಾಲೆಗಳನ್ನು ಶೀಘ್ರ ತೆರೆಯುವುದಿಲ್ಲ ಎಂದು ಸರ್ಕಾರ ಹೇಳಿದೆ.
ದೇಶದಲ್ಲಿ ಸತತ ಎರಡು ವಾರದಿಂದ ದೈನಂದಿನ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ ಕಡಿಮೆ ಇದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಕಳವಳ ಮೂಡಿಸಿದೆ. ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರದ ಆಸುಪಾಸಿನಲ್ಲಿರುತ್ತಿದ್ದು, ಚೇತರಿಕೆ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44,489 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 92,66,706ಕ್ಕೆ ತಲುಪಿದೆ. ಹಾಗೆಯೇ 24 ಗಂಟೆಗಳಲ್ಲಿ 524 ಮಂದಿ ಸಾವುಗಳು ವರದಿಯಾಗಿವೆ. ಇದರಿಂದ ಒಟ್ಟು ಸಾವಿನ ಸಂಖ್ಯೆ 1,35,223ಕ್ಕೆ ಏರಿಕೆಯಾಗಿದೆ.












Click it and Unblock the Notifications