ದೆಹಲಿಯಲ್ಲಿ ಪಟಾಕಿ ನಿಷೇಧ; ತುರ್ತು ವಿಚಾರಣೆಗೆ ಒಪ್ಪದ ಸುಪ್ರೀಂ ಕೋರ್ಟ್
ನವದೆಹಲಿ, ಅ. 13: ಜನವರಿ 1, 2023 ರವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ರೀತಿಯ ಪಟಾಕಿಗಳ ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಆದೇಶದ ವಿರುದ್ಧದ ಅರ್ಜಿಯನ್ನು ತುರ್ತು ವಿಚಾರಣೆಗೆ ಒಪ್ಪಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರ ಪೀಠವು ತುರ್ತು ವಿಚಾರಣೆಯನ್ನು ಕೋರಿ ವಿಷಯವನ್ನು ಪ್ರಸ್ತಾಪಿಸಿದ ವಕೀಲರಿಗೆ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ತಿಳಿಸಿದೆ.
ದೆಹಲಿ ಹೈಕೋರ್ಟ್ ಈ ಬಗ್ಗೆ ತೀರ್ಮಾನಿಸಲಿ, ನಾವು ಈ ವಿಷಯಕ್ಕೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.
ತುರ್ತು ವಿಚಾರಣೆಯನ್ನು ಕೋರಿದ ವಕೀಲರು, ಈ ವಿಷಯವು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಮತ್ತು ಅಕ್ಟೋಬರ್ 18 ರಂದು ವಿಚಾರಣೆಗೆ ಪಟ್ಟಿ ಮಾಡಿದೆ ಎಂದು ಸುಪ್ರೀಂ ಕೋರ್ಟ್ ಪೀಠದ ಮುಂದೆ ವರದಿ ಸಲ್ಲಿಸಿದರು.
ಅತ್ತ ಮಾಲಿನ್ಯ ಇತ್ತ, ಜೀವನೋಪಾಯ; ಅರವಿಂದ್ ಕೇಜ್ರಿವಾಲ್ಗೆ ಸ್ಟಾಲಿನ್ ಪತ್ರ
ದೆಹಲಿಯಲ್ಲಿ ಎಲ್ಲಾ ರೀತಿಯ ಪಟಾಕಿಗಳ ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಆದೇಶದ ವಿರುದ್ಧ ಹಸಿರು ಪಟಾಕಿ ವ್ಯಾಪಾರಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಜನವರಿ 1 ರವರೆಗೆ ಮುಂದೂಡಿದೆ.
ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯ ಪಟಾಕಿಗಳ ಸಂಪೂರ್ಣ ನಿಷೇಧ ಆದೇಶವು, ಸುಪ್ರೀಂ ಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಇಂತಹ ಸಂಪೂರ್ಣ ನಿಷೇಧ ಎಂದಿಗೂ ಹಾಕಿರಲಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯ ಮಟ್ಟವನ್ನು ಪರಿಶೀಲಿಸಲು ಜನವರಿ 1 ರವರೆಗೆ ಎಲ್ಲಾ ರೀತಿಯ ಪಟಾಕಿಗಳ ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ದೆಹಲಿ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿತ್ತು. ಈ ವೇಳೆ ವಾಯುಮಾಲಿನ್ಯವನ್ನು ಹೆಚ್ಚಿಸಲು ಬಯಸುವುದಿಲ್ಲ ಎಂದು ಹೇಳಿತ್ತು.
ಪಟಾಕಿ ಬಳಕೆಗೆ ಯಾವುದೇ ಸಂಪೂರ್ಣ ನಿಷೇಧವಿಲ್ಲ ಮತ್ತು ಬೇರಿಯಂ ಲವಣಗಳನ್ನು ಹೊಂದಿರುವ ಪಟಾಕಿಗಳನ್ನು ಮಾತ್ರ ನಿಷೇಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಕಳೆದ ವರ್ಷ ಸ್ಪಷ್ಟಪಡಿಸಿತ್ತು.
ಇನ್ನು, ಪಟಾಕಿ ಸಂಪೂರ್ಣ ನಿಷೇಧ ಮಾಡಿರುವುದಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಪತ್ರ ಬರೆದಿದ್ದಾರೆ. ತಮಿಳುನಾಡು ರಾಜ್ಯದಲ್ಲಿ ಪಟಾಕಿ ತಯಾರಿಕಾ ಉದ್ಯಮದಲ್ಲಿರುವ ಲಕ್ಷಾಂತರ ಕಾರ್ಮಿಕರ ಜೀವನೋಪಾಯಕ್ಕಾಗಿ ಮಿತಿಯಲ್ಲಿಯೇ ಪಟಾಕಿ ಮಾರಾಟಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.