ಒಂದು ತಿಂಗಳ ನಂತರ ಕರ್ತವ್ಯಕ್ಕೆ ಆರೋಗ್ಯ ಸಚಿವರು ಹಾಜರ್!
ನವದೆಹಲಿ, ಜುಲೈ.20: ರಾಜ್ಯ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೊರೊನಾವೈರಸ್ ಸೋಂಕಿನಿಂದ ಗುಣಮುಖರಾಗಿದ್ದು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ನವದೆಹಲಿಯಲ್ಲಿ ಕೊರೊನಾವೈರಸ್ ಸೋಂಕು ಹರಡುತ್ತಿದ್ದ ಸಂದರ್ಭದಲ್ಲಿ ನಿರಂತರ ಕಾರ್ಯೋನ್ಮುಖರಾಗಿದ್ದ ಆರೋಗ್ಯ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದರು. ಆರೋಗ್ಯಾಧಿಕಾರಿಗಳು ಮತ್ತು ವೈದ್ಯರ ಜೊತೆಗೆ ಸಭೆಗಳನ್ನು ನಡೆಸುತ್ತಿದ್ದರು.
ಕೊವಿಡ್ ಕೇರ್ ಸೆಂಟರ್ ಗಳಿಗೂ ಭೇಟಿ ನೀಡಿದ್ದ ಸತ್ಯೇಂದರ್ ಜೈನ್, ಸೋಂಕಿತರಿಗೆ ನೀಡುತ್ತಿದ್ದ ಚಿಕಿತ್ಸಾ ವಿಧಾನದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಆರೋಗ್ಯ ಸಚಿವರಿಗೇ ಕೊರೊನಾವೈರಸ್ ಸೋಂಕು ತಗಲಿತ್ತು. ಆರೋಗ್ಯದಲ್ಲಿ ಚೇತರಿಸಿಕೊಂಡು ಕರ್ತವ್ಯಕ್ಕೆ ಹಾಜರಾಗುತ್ತಿರುವ ಆರೋಗ್ಯ ಸಚಿವರಿಗೆ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವಿಟರ್ ನಲ್ಲಿ ಸ್ವಾಗತ ಕೋರಿದ್ದಾರೆ.

ಒಂದು ತಿಂಗಳ ನಂತರ ಕರ್ತವ್ಯಕ್ಕೆ ಹಾಜರು:
ಕೊರೊನಾವೈರಸ್ ಸೋಂಕಿತ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ರನ್ನು ಕೊವಿಡ್-19 ಸೋಂಕಿನ ತಪಾಸಣೆಗೆ ಒಳಪಡಿಸಲಾಗಿತ್ತು. ರಕ್ತ ಮತ್ತು ಗಂಟಲು ದ್ರವದ ಮಾದರಿ ಪರೀಕ್ಷಿಸಿದ ಸಂದರ್ಭದಲ್ಲಿ ಸಚಿವರಿಗೆ ಸೋಂಕು ತಗಲಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆೆ ಪಡೆಯುತ್ತಿದ್ದ ಸಚಿವರು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.












Click it and Unblock the Notifications