Breaking: ಸತ್ಯೇಂದ್ರ ಜೈನ್ ನಿವಾಸದ ಮೇಲೆ ಇಡಿ ದಾಳಿ
ನವದೆಹಲಿ, ಜೂ.6: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಬಂಧಿಸಿದ್ದರು. ಅವರ ಮನೆ ಮೇಲೆ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ.
ಕಳೆದ 2015-16ನೇ ಸಾಲಿನಲ್ಲಿ ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವ್ಯವಹಾರದಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಸಿದ್ದರು.
ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಅವರ ಕುಟುಂಬದ ಒಡೆತನದಲ್ಲಿ ಇರುವ ಒಟ್ಟು 4.81 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡ ಸುಮಾರು ಎರಡು ತಿಂಗಳ ನಂತರದಲ್ಲಿ ಅವರನ್ನು ಬಂಧಿಸಲಾಗಿತ್ತು.

ಸಚಿವ ಜೈನ್ ಅವರ ಮನೆ ಸೇರಿದಂತೆ ಇತರ ಕೆಲವು ಸ್ಥಳಗಳಲ್ಲಿ ದಾಳಿ ಮಾಡಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಚಿವ ಜೈನ್ರನ್ನು ಜೂನ್ 9 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ.
ಮೇ 30 ರಂದು ಜೈನ್ ಬಂಧನದ ಬಳಿಕ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವೆ ವಾಗ್ವದ ಆರಂಭವಾಗಿದೆ. ಸಚಿವ ಜೈನ್ ಬಂಧನದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಕರಣವು ಸಂಪೂರ್ಣ ಸುಳ್ಳು ಎಂದು ಆರೋಪಿಸಿದ್ದರು.
"ನಮ್ಮದು ಅತ್ಯಂತ ಕಟ್ಟುನಿಟ್ಟಾದ ಮತ್ತು ಪ್ರಾಮಾಣಿಕ ಸರ್ಕಾರ. ನಾವು ಕಠಿಣ ದೇಶಭಕ್ತರು. ದೇಶಕ್ಕೆ ಎಂದಿಗೂ ದ್ರೋಹ ಮಾಡಲು ಸಾಧ್ಯವಿಲ್ಲ. ಜೈನ್ ಅವರ ಬಂಧನವು ರಾಜಕೀಯ ಪ್ರೇರಿತವಾಗಿದೆ" ಎಂದು ಕೇಜ್ರಿವಾಲ್ ಹೇಳಿದ್ದರು.

ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 4.81 ಕೋಟಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಈ ವರ್ಷದ ಏಪ್ರಿಲ್ನಲ್ಲಿ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದ ನಂತರ ಜೈನ್ ಅವರನ್ನು ಬಂಧಿಸಲಾಗಿದೆ.
ಸಿಬಿಐ ದಾಖಲಿಸಿದ ಎಫ್ಐಆರ್ ಆಧರಿಸಿ ತನಿಖಾ ಸಂಸ್ಥೆ ಎಎಪಿ ನಾಯಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ. ಇದರಲ್ಲಿ ಜೈನ್ ಅವರು ಷೇರುದಾರರಾಗಿರುವ ನಾಲ್ಕು ಕಂಪನಿಗಳಿಂದ ಪಡೆದ ಹಣದ ಮೂಲವನ್ನು ವಿವರಿಸಲು ಸಾಧ್ಯವಿಲ್ಲ ಎಂಬುದು ಆರೋಪ.
ಜೈನ್ ದೆಹಲಿಯಲ್ಲಿ ಹಲವಾರು ಶೆಲ್ ಕಂಪನಿಗಳನ್ನು ಖರೀದಿಸಿದ್ದಾರೆ ಮತ್ತು ಅವುಗಳ ಮೂಲಕ 16.39 ಕೋಟಿ ಮೌಲ್ಯದ ಕಪ್ಪು ಹಣವನ್ನು ಬಿಳಿ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ. ಜೈನ್ ಅವರು ದೆಹಲಿ ಸರ್ಕಾರದಲ್ಲಿ ಗೃಹ ಮತ್ತು ಆರೋಗ್ಯ, ಇಂಧನ ಮತ್ತು ಲೋಕೋಪಯೋಗಿ ಖಾತೆಗಳನ್ನು ಹೊಂದಿದ್ದಾರೆ.












Click it and Unblock the Notifications