ನಿರ್ಭಯಾ ಅತ್ಯಾಚಾರ ದೋಷಿಗಳಿಗೆ ಫೆ.01ರಂದು ಗಲ್ಲುಶಿಕ್ಷೆ ಅನುಮಾನ?
ನವದೆಹಲಿ, ಜನವರಿ.29: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ದೋಷಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಇನ್ನೆರೆಡು ದಿನಗಳಷ್ಟೇ ಬಾಕಿ ಉಳಿದಿವೆ. ಇದರ ಮಧ್ಯೆ ಬುಧವಾರ ಅಪರಾಧಿ ವಿನಯ್ ಶರ್ಮಾ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ.
ಇದಕ್ಕೂ ಮೊದಲು ತನ್ನ ಕ್ಷಮಾದಾನದ ಮನವಿಯನ್ನು ತಿರಸ್ಕರಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಿರ್ಧಾರವನ್ನು ಪ್ರಶ್ನಿಸಿ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು.
ನಿರ್ಭಯಾ ಅತ್ಯಾಚಾರ: ಅಪರಾಧಿ ಮುಕೇಶ್ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ಗಲ್ಲುಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್, ಆದ್ಯತೆ ಮೇರೆಗೆ ವಿಚಾರಣೆಗೆ ಪರಿಗಣಿಸಿತ್ತು. ಬುಧವಾರ ಆತನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್. ಭಾನುಮತಿ, ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ಅವರನ್ನು ಒಳಗೊಂಡ ನ್ಯಾಯಪೀಠ, ಮನವಿಯನ್ನು ವಜಾಗಳಿಸಿತು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕ್ಷಮಾದಾನ:
ಅಪರಾಧಿ ವಿನಯ್ ಶರ್ಮಾ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದಾನೆ. ದೆಹಲಿ ಸರ್ಕಾರ ಮತ್ತು ಗೃಹ ಸಚಿವಾಲಯವು ಕಳುಹಿಸುವ ಶಿಫಾರಸ್ಸಿನ ನಂತರ ರಾಷ್ಟ್ರಪತಿ ತಮ್ಮ ತೀರ್ಮಾನವನ್ನು ತಿಳಿಸಲಿದ್ದಾರೆ. ಒಂದು ವೇಳೆ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದರೆ ಅದನ್ನು ಪ್ರಶ್ನಿಸಿ ವಿನಯ್ ಶರ್ಮಾ ಮತ್ತೊಮ್ಮೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವ ಅವಕಾಶ ಸಿಗಲಿದೆ. ಈ ಮೊದಲು ವಿನಯ್ ಶರ್ಮಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು.