ಜಹಾಂಗೀರ್ಪುರಿ ಗಲಭೆ: ಮಸೀದಿಯಲ್ಲಿ ಕೇಸರಿ ಧ್ವಜ ಹಾರಿಸಲಾಗಿಲ್ಲ- ಪೊಲೀಸ್ ಕಮಿಷನರ್
ಹೊಸದಿಲ್ಲಿ ಏಪ್ರಿಲ್ 18: ದೆಹಲಿಯ ಜಾಹಿಂಗೀರ್ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ಮಸೀದಿಯಲ್ಲಿ ಕೇಸರಿ ಧ್ವಜಾರೋಹಣ ಮಾಡುವಂತ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನ ಸೋಮವಾರ ಹೇಳಿದ್ದಾರೆ.
ಕಳೆದ ವಾರ ಶನಿವಾರ (ಏಪ್ರಿಲ್ 16) ಸಂಜೆ ನಡೆದ ಧಾರ್ಮಿಕ ಮೆರವಣಿಗೆಯ ವೇಳೆ ಎರಡು ಗುಂಪುಗಳ ನಡುವೆ ಹಿಂಸಾಚಾರ ನಡೆದಿತ್ತು. ಜಹಾಂಗೀರ್ಪುರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 23 ಜನರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ(Rakesh Asthana) ತಿಳಿಸಿದ್ದಾರೆ. 23 ಜನರಲ್ಲಿ ಎಂಟು ಮಂದಿ ಈ ಹಿಂದೆ ಕ್ರಿಮಿನಲ್ ದಾಖಲೆಗಳನ್ನು ಹೊಂದಿದ್ದು, "ಹಿಂಸಾಚಾರದಲ್ಲಿ ಭಾಗಿಯಾಗಿದ್ದರೆ ಅಂಥವರ ವರ್ಗ ಮತ್ತು ಧರ್ಮ ಯಾವುದೇ ಆಗಿರಲಿ ಯಾರನ್ನೂ ಬಿಡಲಾಗುವುದಿಲ್ಲ" ಎಂದು ಅವರು ಹೇಳಿದ್ದಾರೆ. ಜೊತೆಗೆ ಹನುಮ ಜಯಂತಿ ಮೆರವಣಿಗೆ ವೇಳೆ ಯಾವುದೇ ಮಸೀದಿಯಲ್ಲಿ ಕೇಸರಿ ಧ್ವಜ ಹಾರಿಸುವ ಪ್ರಯತ್ನ ಮಾಡಿಲ್ಲ ಎಂದು ಅಸ್ತಾನಾ ಹೇಳಿದ್ದಾರೆ.
ಈ ಪ್ರಕರಣದಲ್ಲಿ ದೆಹಲಿ ಪೊಲೀಸರ ಪಕ್ಷಪಾತವನ್ನು ಆರೋಪಿಸಿ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅವರಿಗೆ ಪತ್ರ ಬರೆಯಲಾಗಿತ್ತು. ಇದರ ಬಳಿಕೆ ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಅವರ ಈ ಹೇಳಿಕೆಯು ನೀಡಿದ್ದಾರೆ. ಹಿಂಸಾಚಾರದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ಸೇರಿದಂತೆ ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ರಾಕೇಶ್ ಅಸ್ತಾನ ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಮತ್ತು ಡಿಜಿಟಲ್ ಮಾಧ್ಯಮವನ್ನು ವಿಶ್ಲೇಷಿಸಲಾಗುತ್ತಿದೆ. ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ (ಎಫ್ಎಸ್ಎಲ್) ತಂಡಗಳು ಇಂದು (ಏಪ್ರಿಲ್ 18) ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿವೆ.
ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ನ ತಂಡವೂ ಜಹಾಂಗೀರ್ಪುರಿಯಲ್ಲಿದೆ. ಏಪ್ರಿಲ್ 16 ರ ಸಂಜೆ ರಾಷ್ಟ್ರ ರಾಜಧಾನಿಯ ಜಹಾಂಗೀರ್ಪುರಿ ಪ್ರದೇಶದಲ್ಲಿ ಧಾರ್ಮಿಕ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ವಾಗ್ವಾದ ನಡೆಯಿತು. ಈ ಪ್ರಕರಣದಲ್ಲಿ ಇದುವರೆಗೆ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು 23 ಮಂದಿಯನ್ನು ಬಂಧಿಸಲಾಗಿದೆ.
ಭಾನುವಾರ (ಏಪ್ರಿಲ್ 17) 14 ಮಂದಿಯನ್ನು ರೋಹಿಣಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇಬ್ಬರು ಪ್ರಮುಖ ಆರೋಪಿಗಳಾದ ಅನ್ಸಾರ್ ಮತ್ತು ಅಸ್ಲಂ ಅವರನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಉಳಿದ 12 ಮಂದಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.