ನವದೆಹಲಿ ಗಲಭೆ; ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆ
ನವದೆಹಲಿ, ಫೆಬ್ರವರಿ 26 : ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ದೆಹಲಿಯಲ್ಲಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದಾರೆ.
ಭಾನುವಾರ ಸಂಜೆಯಿಂದ ಪೌರತ್ವ ತಿದ್ದುಪಡಿ ಕಾಯ್ದೆ ಪರ, ವಿರೋಧ ಹೋರಾಟಗಾರರ ನಡುವೆ ಈಶಾನ್ಯ ದೆಹಲಿಯಲ್ಲಿ ಘರ್ಷಣೆ ನಡೆಯುತ್ತಿತ್ತು. ಈಗ ಈ ಹಿಂಸಾಚಾರ ಕೋಮು ಗಲಭೆಯ ಸ್ವರೂಪ ಪಡೆದುಕೊಂಡಿದೆ.
ಹಿಂಸಾಚಾರದಲ್ಲಿ ಗಾಯಗೊಂಡು ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಇದರಿಂದಾಗಿ ದೆಹಲಿ ಹಿಂಸಾಚಾರದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಗುರು ತೇಜ್ ಬಹದ್ದೂರು ಆಸ್ಪತ್ರೆಯ ಮೆಡಿಕಲ್ ಸೂಪರಿಟೆಂಡೆಟ್ ಸುನೀಲ್ ಕುಮಾರ್ ಬುಧವಾರ ರಾತಿ ಮೂವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ದೆಹಲಿಯ ಡಿಸಿಪಿ ಕಚೇರಿಗೆ ಇಂದು ಭೇಟಿ ನೀಡಿದ್ದರು.
ಗಲಭೆ ಪೀಡಿತ ಪ್ರದೇಶಗಳಿಗೂ ಭೇಟಿ ನೀಡಿರುವ ಅಜಿತ್ ದೋವಲ್ ಪರಿಸ್ಥಿತಿಯನ್ನು ಅವಲೋಕಿಸಿದರು. ಸ್ಥಳೀಯ ಜನರ ಜೊತೆ ಮಾತುಕತೆ ನಡೆಸಿದರು. "ಪ್ರೀತಿಯ ವಾತಾವರಣ ಕಾಪಾಡಿಕೊಳ್ಳಿ. ನಾವೆಲ್ಲ ಒಂದೇ ದೇಶದವರು. ಒಗ್ಗಟ್ಟಿನಿಂದ ಬಾಳಬೇಕಿದೆ" ಎಂದು ಕರೆ ನೀಡಿದರು.
ದೆಹಲಿ ಗಲಭೆಯಲ್ಲಿ ಮೃತಪಟ್ಟ ಹೆಡ್ ಕಾನ್ಸ್ಟೇಬಲ್ ರತನ್ ಲಾಲ್ ಕುಟುಂಬಕ್ಕೆ 1 ಕೋಟಿ ರೂ. ನೆರವು ನೀಡುವುದಾಗಿ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಘೋಷಣೆ ಮಾಡಿದ್ದಾರೆ.












Click it and Unblock the Notifications