ದೆಹಲಿ ಹಿಂಸಾಚಾರ: 37 ರೈತ ಮುಖಂಡರ ವಿರುದ್ಧ ಎಫ್ಐಆರ್
ನವದೆಹಲಿ, ಜನವರಿ.28: ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ತಾವುಗಳು ಯಾವುದೇ ಕಾರಣಕ್ಕೂ ಪೊಲೀಸರ ಎದುರಿಗೆ ಶರಣಾಗುವುದಕ್ಕೆ ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಒಕ್ಕೂಟದ ವಕ್ತಾರ ರಾಕೇಶ್ ತಿಕೈಟ್ ಹೇಳಿದ್ದಾರೆ.
ಘಜಿಪುರ್ ಗಡಿ ಪ್ರದೇಶದಲ್ಲಿ ಪ್ರತಿಭಟನಾನಿರತ ರೈತರು ಜಾಗ ಖಾಲಿ ಮಾಡುವಂತೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವು ಅಂತಿಮ ಗಡುವು ವಿಧಿಸಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ರೈತರು ಕೆಂಡಾಮಂಡಲರಾಗಿದ್ದಾರೆ.
ದೆಹಲಿ ಹಿಂಸಾಚಾರ ಪರಿಣಾಮ: ಬಜೆಟ್ ದಿನದ ಸಂಸತ್ ಕಡೆಗೆ ರೈತರ ಮೆರವಣಿಗೆ ರದ್ದು
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.
ರೈತ ಮುಖಂಡ ರಾಕೇಶ್ ತಿಕೈಟ್ ವಿರುದ್ಧ ಎಫ್ಐಆರ್
ಮಂಗಳವಾರ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಭಾರತ್ ಕಿಸಾನ್ ಒಕ್ಕೂಟದ ವಕ್ತಾರ ರಾಕೇಶ್ ತಿಕೈಟ್ ವಿರುದ್ಧ ಗಂಭೀರ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 307 ಅಡಿ ಕೊಲೆ ಯತ್ನ ಪ್ರಕರಣ, ಸೆಕ್ಷನ್ 147 ಅಡಿ ಗಲಭೆಗೆ ಕುಮ್ಮಕ್ಕು, ಸೆಕ್ಷನ್ 353 ಅಡಿ ಸಾರ್ವಜನಿಕ ಸೇವೆಗೆ ಅಡ್ಡಿ ಹಾಗೂ ಹಲ್ಲೆಗೆ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ.
ರೈತ ಮುಖಂಡರ ವಿರುದ್ಧ ಕೇಸ್ ದಾಖಲಿಸಿದ ಪೊಲೀಸರು
ಗಣರಾಜ್ಯೋತ್ಸವದ ದಿನವೇ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 37 ರೈತ ಮುಖಂಡರ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ರಾಕೇಶ್ ತಿಕೈಟ್, ಯೋಗೇಂದ್ರ ಯಾದವ್, ಮೇಧಾ ಪಾಟ್ಕರ್, ದರ್ಶನ್ ಪಾಲ್, ಗುರ್ನಾಮ್ ಸಿಂಗ್ ಚಾಂದುನಿ, ಕುಲ್ವಂತ್ ಸಿಂಗ್ ಸಂಧು, ಸತ್ನಾಮ್ ಸಿಂಗ್ ಪನ್ನು, ಜೋಗಿಂದರ್ ಸಿಂಗ್ ಉಗ್ರಹಾ, ಸರ್ಜಿತ್ ಸಿಂಗ್ ಫೂಲ್, ಜಗಜೀತ್ ಸಿಂಗ್ ದಾಲೇವಾಲ್, ಬಲ್ಬೀರ್ ಸಿಂಗ್ ರಾಜೇವಾಲ್, ಹರೀಂದರ್ ಸಿಂಗ್ ಲಖೇವಾಲ್ ಎಂಬ ರೈತ ಮುಖಂಡರ ಹೆಸರು ಸೇರಿಸಲಾಗಿದೆ. ಒಟ್ಟು 37 ರೈತ ಮುಖಂಡರ ವಿರುದ್ಧ ಕೊಲೆ ಯತ್ನ, ಗಲಭೆ ಮತ್ತು ಪಿತೂರಿ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
"ರೈತ ಮುಖಂಡ ವಿರುದ್ಧ ಪ್ರಚೋದನಕಾರಿ ಭಾಷಣ"
ನವದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ಜಾಥಾ ಸಂದರ್ಭದಲ್ಲಿ ಕೆಲವು ರೈತ ಮುಖಂಡರು ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾರೆ ಎಂದು ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ್ ಆರೋಪಿಸಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
394 ಪೊಲೀಸರಿಗೆ ಗಾಯ, ಒಬ್ಬ ಪ್ರತಿಭಟನಾನಿರತ ರೈತ ಸಾವು
ದೆಹಲಿಯ ಕೆಂಪುಕೋಟೆಗೆ ನುಗ್ಗಿದ ರೈತರು ತ್ರಿವರ್ಣ ಧ್ವಜದ ಎದುರಿಗೆ ನಿಶಾನ್ ಸಾಹೇಬ್ ಧ್ವಜವನ್ನು ಹಾರಿಸಿದರು. ಇದಕ್ಕೂ ಮೊದಲು ಪೊಲೀಸರು ಮತ್ತು ಪ್ರತಿಭಟನಾನಿರತ ರೈತರ ನಡುವೆ ಸಂಘರ್ಷ ನಡೆಯಿತು. ಈ ವೇಳೆ 394 ಪೊಲೀಸರು ಗಾಯಗೊಂಡಿದ್ದು, ಟ್ರ್ಯಾಕ್ಟರ್ ಪಲ್ಟಿಯಾಗಿ ಪ್ರತಿಭಟನಾನಿರತ ರೈತರೊಬ್ಬರು ಮೃತಪಟ್ಟಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರೀಯ ಕಿಸಾನ್ ಮಜದೂರ್ ಸಂಘಟನೆ ಮತ್ತು ಭಾರತೀಯ ಕಿಸಾನ್ ಒಕ್ಕೂಟಗಳು ಕೃಷಿ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದವು.