ದೆಹಲಿ ಹಿಂಸಾಚಾರ: ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ
ನವದೆಹಲಿ, ಫೆಬ್ರವರಿ.26: ರಾಷ್ಟ್ರ ರಾಜಧಾನಿಯಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತುಕ್ರಮ ತೆಗೆದುಕೊಳ್ಳುವಂತೆ ಸುಪ್ರೀಂಕೋರ್ಟ್ ಖಡಕ್ ಸಂದೇಶ ರವಾನಿಸಿದೆ. ನ್ಯಾಯಮೂರ್ತಿ ಎಸ್ ಕೆ ಕೌಲ್ ಮತ್ತು ಕೆ ಎಂ ಜೋಸೆಫ್ ನೇತೃತ್ವದ ದ್ವಿಸದಸ್ಯ ಪೀಠ ಸೂಚನೆ ನೀಡಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಸಂಬಂಧ ಪರ ವಿರೋಧ ಪ್ರತಿಭಟನೆಯು ಹಿಂಸಾಚಾರಕ್ಕೆ ಎಡೆಮಾಡಿ ಕೊಟ್ಟಿದೆ. ಸಿಎಎ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡುವವರನ್ನು ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಪೊಲೀಸರಿಗೆ ಸೂಚಿಸಿದೆ.
ದೆಹಲಿಯಲ್ಲಿ ನಡೆದ ಹಿಂಸಾಚಾರದ ಸಂಬಂಧ ಸುಪ್ರೀಂಕೋರ್ಟ್ ಗೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ. ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವ ಹೋರಾಟ ಮತ್ತು ಈಗ ನಡೆದಿರುವ ಹಿಂಸಾಚಾರದ ಹಿಂದೆ ಒಂದೇ ಉದ್ದೇಶವಿರುವ ಹಿನ್ನೆಲೆ ಎಚ್ಚರಿಕೆ ವಹಿಸುವಂತೆ ಕೋರ್ಟ್ ತಿಳಿಸಿದೆ.
ದೆಹಲಿ ಹಿಂಸಾಚಾರ ಹೈಕೋರ್ಟ್ ವ್ಯಾಪ್ತಿಗೆ ಎಂದ ಸುಪ್ರೀಂ:
ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ಹೈಕೋರ್ಟ್ ವ್ಯಾಪ್ತಿಗೆ ಬರಲಿದ್ದು ಅಲ್ಲಿಯೇ ವಿಚಾರಣೆ ನಡೆಸಲಿದೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ದ್ವಿಸದಸ್ಯ ಪೀಠವು ತಿಳಿಸಿದೆ. ಈಗಾಗಲೇ ದೆಹಲಿಯ ಈಶಾನ್ಯ ಭಾಗದಲ್ಲಿ ನಡೆದ ಹಿಂಸಾಚಾರದಲ್ಲಿ 22 ಮಂದಿ ಪ್ರಾಣ ಬಿಟ್ಟಿದ್ದು, 190ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.