ರಾಷ್ಟ್ರ ರಾಜಧಾನಿ ಹಿಂಸಾಚಾರದ ಬಗ್ಗೆ ದೆಹಲಿ ಹೈಕೋರ್ಟ್ ಹೇಳಿದ್ದೇನು?
ನವದೆಹಲಿ, ಫೆಬ್ರವರಿ.26: ದೆಹಲಿ ಹಿಂಸಾಚಾರಕ್ಕೆ ಪ್ರಚೋದಿಸುವಂತಾ ಹೇಳಿಕೆಗಳನ್ನು ನೀಡಿದ ಮೂವರು ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲು ಸ್ಯಾಲಿಸಿಟರಿ ಜನರಲ್ ತುಷಾರ್ ಮೆಹ್ತಾಗೆ ಹೈಕೋರ್ಟ್ ಸೂಚನೆ ನೀಡಿದೆ.
ಬುಧವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಮುರಳೀಧರ್ ಮತ್ತು ತಲ್ವಂತ್ ಸಿಂಗ್ ನೇತೃತ್ವದ ದ್ವಿಸದಸ್ಯ ಪೀಠ ದೆಹಲಿಯಲ್ಲಿನ ದುಸ್ಥಿತಿಯ ಬಗ್ಗೆ ಬೇಸರ ವ್ಯಕ್ತಪಡಿಸಿತು.
ದೆಹಲಿ ಹಿಂಸಾಚಾರ: ಟಿ.ವಿ. ವಾಹಿನಿಗಳಿಗೆ ಸೂಚನೆ ನೀಡಿದ ಕೇಂದ್ರ ಸರ್ಕಾರ
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿಗೆ ಸಂಬಂಧಿಸಿದಂತೆ ಪರ ವಿರೋಧ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆಯಲು ಪ್ರಚೋದನೆ ನೀಡಿದ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.
ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ಗೆ ಸೂಚನೆ
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿಚಾರದಲ್ಲಿ ಪ್ರಯೋದನಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ಮೂವರು ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲು ಸ್ಯಾಲಿಸಿಟರಿ ಜನರಲ್ ತುಷಾರ್ ಮೆಹ್ತಾರಿಗೆ ಹೈಕೋರ್ಟ್ ತಿಳಿಸಿದೆ.
ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾದ ನಾಯಕರು ಯಾರು?
ಕೇಂದ್ರ ಸಚಿವ ಅನುರಾಗ್ ಠಾಕೂರ್, ಬಿಜೆಪಿ ಶಾಸಕ ಕಪಿಲ್ ಮಿಶ್ರಾ ಮತ್ತು ಬಿಜೆಪಿ ಮುಖಂಡ ಪರ್ವೇಜ್ ವರ್ಮಾ ವಿರುದ್ಧ ಹೈಕೋರ್ಟ್ ಕಿಡಿ ಕಾರಿದೆ. ಮೂವರ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿದ್ದು, ಈ ಹಿಂದೆ ನಾಯಕರು ಬಹಿರಂಗವಾಗಿ ಪ್ರಚೋದನೆ ನೀಡುವಂತಾ ಮಾತನ್ನು ಆಡಿದ್ದಾರೆ. ಆ ಹೇಳಿಕೆಗಳ ವಿಡಿಯೋವನ್ನು ಹೈಕೋರ್ಟ್ ನಲ್ಲಿ ಪ್ರಸಾರ ಮಾಡುವಂತೆ ಸೂಚನೆ ನೀಡಿತ್ತು.
ದೆಹಲಿ ಹಿಂಸಾಚಾರ: ಮೂರು ದಿನಗಳ ನಂತರ ಪ್ರಧಾನಮಂತ್ರಿ ಮೋದಿ ಟ್ವೀಟ್
1984ರ ಸಿಖ್ ದಂಗೆ ಬಗ್ಗೆ ಹೈಕೋರ್ಟ್ ಉಲ್ಲೇಖ
ದೆಹಲಿ ಹಿಂಸಾಚಾರದಲ್ಲಿ ಈವರೆಗೂ 22 ಮಂದಿ ಪ್ರಾಣ ಬಿಟ್ಟಿದ್ದು, 190ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 1984ರಲ್ಲಿ ನಡೆದ ಸಿಖ್ ದಂಗೆಯಂತಾ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರ ಮತ್ತು ಪೊಲೀಸರು ಈ ನಿಟ್ಟಿನಲ್ಲಿ ಕಠಿಣ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.
ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಸಾವಿಗೆ ಸಂತಾಪ
ದೆಹಲಿಯ ಈಶಾನ್ಯ ಜಿಲ್ಲೆಯ ಚಾಂದ್ ಬಾಗ್ ಪ್ರದೇಶದಲ್ಲಿ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಮೃತಪಟ್ಟಿದ್ದಾರೆ. ಈ ಬಗ್ಗೆ ಹೈಕೋರ್ಟ್ ಸಂತಾಪ ವ್ಯಕ್ತಪಡಿಸಿತು. ಮೃತರ ಕುಟುಂಬಕ್ಕೆ ನಾಯಕರು ಸಾಂತ್ವನ ಹೇಳಬೇಕು ಎಂದು ಸೂಚನೆ ನೀಡಿತು. ಇದರ ಜೊತೆಗೆ ಹಿಂಸಾಚಾರ ನಡೆದ ಪ್ರತಿಯೊಂದು ಪ್ರದೇಶಕ್ಕೂ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಸಬೇಕು ಎಂದು ಕೋರ್ಟ್ ತಿಳಿಸಿದೆ.