ಕರ್ನಾಟಕದಲ್ಲಿ ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಕಾಂಗ್ರೆಸ್
Recommended Video
ನವದೆಹಲಿ, ಜುಲೈ 19: ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ವಿಳಂಬ, ರಾಜಕೀಯ ಬಿಕ್ಕಟ್ಟು ಉಂಟಾಗಿರುವ ಬಗ್ಗೆ ಲೋಕಸಭೆಯ ಮುಂಗಾರು ಅಧಿವೇಶನದಲ್ಲಿ ಮತ್ತೊಮ್ಮೆ ಚರ್ಚೆಯಾಗಿದೆ. ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧುರಿ ಅವರು,'ಕರ್ನಾಟಕದಲ್ಲಿ ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ' ಎಂದರು.
"ಬಿಜೆಪಿಯೇತರ ಸರ್ಕಾರ ಇರುವ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ತನ್ನ ಪ್ರಭಾವ ಬಳಸಿ, ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ" ಎಂದು ಆರೋಪಿಸಿದರು. "ರಾಜಕೀಯ ಬೆಳವಣಿಗೆ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಬಹುದು, ಆದರೆ, ಸಾಂವಿಧಾನಿಕ ಹುದ್ದೆಯಲ್ಲಿರುವವರು ಅಥವಾ ರಾಜ್ಯದ ವಿಧಾನಸಭೆಯ ಬಗ್ಗೆ ಇಲ್ಲಿ ಪ್ರಸ್ತಾಪಿಸುವಂತಿಲ್ಲ' ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವಿಪಕ್ಷ ನಾಯಕರಿಗೆ ಸೂಚಿಸಿದರು.
ಕರ್ನಾಟಕದಲ್ಲಿ ಬಿಕ್ಕಟ್ಟು: ಕೇಂದ್ರ ಗೃಹ ಇಲಾಖೆಗೆ ರಾಜ್ಯಪಾಲರ ವರದಿ
ಇದಕ್ಕೂ ಮುನ್ನ ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಲು ಅವಕಾಶ ಕೋರಿ, ಬಿಜೆಪಿ ವಿರುದ್ಧ ಕಾಂಗ್ರೆಸ್ ಸಂಸದರು ಘೋಷಣೆಗಳನ್ನು ಕೂಗಿದರು. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದರು, ಕಾಂಗ್ರೆಸ್ ಸಂಸದರಿಗೆ ಡಿಎಂಕೆ ಕೂಡಾ ಬೆಂಬಲ ವ್ಯಕ್ತಪಡಿಸಿತು.
ಸುಮಾರು 15 ನಿಮಿಷಗಳ ಕಾಲ ಕೆಳಮನೆಯ ಬಾವಿಯಲ್ಲಿ ಪ್ರತಿಭಟನೆಯ ಕಾವೇರಿತ್ತು. "ಪ್ರಜಾಪ್ರಭುತ್ವ ಉಳಿಸಿ" ಎಂಬ ಪ್ಲೆಕಾರ್ಡ್ ಹಿಡಿದ ಸುಮಾರು 30 ಮಂದಿ, 'ನ್ಯಾಯ ಬೇಕು' ಎಂದು ಆಗ್ರಹಿಸಿದರು. ಈ ವಿಷಯದ ಬಗ್ಗೆ ಮಾತನಾಡಲು ಅವಕಾಶ ನೀಡುವುದಾಗಿ ಸ್ಪೀಕರ್ ಓಂ ಬಿರ್ಲಾ ಭರವಸೆ ನೀಡಿದ ಬಳಿಕ ಕೊನೆಗೆ ಪ್ರತಿಭಟನೆ ಹಿಂದಕ್ಕೆ ಪಡೆದರು.
ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ -ಜೆಡಿಎಸ್ಸಿಗೆ ಸೇರಿದ 15 ಶಾಸಕರು ಹಾಗೂ ಸರ್ಕಾರಕ್ಕೆ ಬೆಂಬಲ ನೀಡಿದ್ದ 2 ಪಕ್ಷೇತರರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸ್ವಪ್ರೇರಣೆಯಿಂದ ವಿಶ್ವಾಸಮತಯಾಚನೆಗೆ ಮುಂದಾಗಿದ್ದಾರೆ. (ಪಿಟಿಐ)