ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡಿಕೆ: ಹೆಚ್ಚಿದ ಆತಂಕ
Recommended Video
ನವದೆಹಲಿ, ಸೆಪ್ಟೆಂಬರ್ 23: ಉಪಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸ್ಪಷ್ಟ ಚಿತ್ರಣ ಬರುತ್ತದೆಯೆಂಬ ನಿರೀಕ್ಷೆಯಲ್ಲಿದ್ದ ಹದಿನೇಳು ಅನರ್ಹ ಶಾಸಕರಿಗೆ ಭಾರಿ ನಿರಾಸೆ ಎದುರಾಗಿದೆ.
ಅನರ್ಹತೆ ಪ್ರಶ್ನಿಸಿ ಹದಿನೇಳು ಅನರ್ಹ ಶಾಸಕರು ಹಾಕಿದ್ದ ಅರ್ಜಿ ಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್, ಯಾವುದೇ ಮಧ್ಯಂತರ ಆದೇಶ ನೀಡದೆ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ಉಪಚುನಾವಣೆ ದಿನಾಂಕ ಘೋಷಣೆ ಆಗಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಹಾಗಾಗಿ ಇಂದಿನ ವಿಚಾರಣೆಯು ಭಾರಿ ಕುತೂಹಲ ಕೆರಳಿಸಿತ್ತು. ಅನರ್ಹ ಶಾಸಕರ ಪರ ವಾದ ಮಂಡಿಸಿದ ಮುಕುಲ್ ರೊಹ್ಟಗಿ ಅವರು, ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಮನವಿ ಮಾಡಿ ಹಲವು ವಾದವನ್ನು ತ್ರಿಸದಸ್ಯ ಪೀಠದ ಮುಂದಿಟ್ಟರು.

ಅನರ್ಹ ಶಾಸಕರ ಪರ ವಾದಕ್ಕೆ ಪ್ರತಿಯಾಗಿ ವಾದ ಮಂಡಿಸಿದ ಕಪಿಲ್ ಸಿಬಲ್ ಅವರು, ಸ್ಪೀಕರ್ ಅವರ ಅನರ್ಹತೆಯ ತೀರ್ಪನ್ನು ಎತ್ತಿಹಿಡಿಯಬೇಕೆಂದು ವಾದಿಸಿದರು. ಉಪಚುನಾವಣೆಗೆ ತಡೆಯಾಜ್ಞೆ ನೀಡಬಾರದೆಂದೂ ಮನವಿ ಮಾಡಿದರು.
ಎರಡೂ ಕಡೆಯ ವಾದ ಆಲಿಸಿದ ತ್ರಿಸದಸ್ಯ ಪೀಠವು, ಯಾವುದೇ ಮಧ್ಯಂತರ ಆದೇಶವನ್ನು ನೀಡದೆ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಇದರ ಜೊತೆಗೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ನೊಟೀಸ್ ನೀಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷರಿಗೂ ನೊಟೀಸ್ ನೀಡಿದೆ.
ಶಾಸಕಾಂಗ ಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ರು ಅನರ್ಹ ಶಾಸಕರ ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಯಾಗಿ ಪರಿಗಣಿಸುವಂತೆ ಈ ಹಿಂದೆ ಕೇವಿಯಟ್ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಈ ಮೂವರಿಗೂ ನೊಟೀಸ್ ನೀಡಿ ಪ್ರತಿವಾದಿ ಆಗಲು ಅವಕಾಶ ನೀಡಲಾಗಿದೆ.
ಬುಧವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಪರಿಣಾಮ ಅನರ್ಹ ಶಾಸಕರ ಆತಂಕ ಮತ್ತಷ್ಟು ಹೆಚ್ಚಾಗಿದೆ. ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದ್ದು, ಸೆಪ್ಟೆಂಬರ್ 30 ಕ್ಕೆ ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದೆ. ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷರನ್ನೂ ಪ್ರತಿವಾದಿ ಮಾಡಿರುವ ಕಾರಣ ಬುಧವಾರವೂ ಸ್ಪಷ್ಟ ಆದೇಶ ಹೊರಬೀಳುವ ಸಾಧ್ಯತೆ ಬಹಳ ಅಲ್ಪ ಎನ್ನಲಾಗುತ್ತಿದೆ.












Click it and Unblock the Notifications