ರಾಹುಲ್ ಗಾಂಧಿ ಭೇಟಿ ಮಾಡಿದ ಡಿಕೆಎಸ್ ಸಹೋದರರು: ಏನೇನೋ ಊಹಾಪೋಹ
Recommended Video
ನವದೆಹಲಿ, ಜೂನ್ 19: ಕಳೆದ ಕೆಲವು ದಿನಗಳಿಂದ ನವದೆಹಲಿಯಲ್ಲಿಯೇ ಬೀಡು ಬಿಟ್ಟಿರುವ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ತಮ್ಮ ಸಹೋದರ, ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಆದರು.
ಇಂದು ರಾಹುಲ್ ಗಾಂಧಿ ಹುಟ್ಟುಹಬ್ಬ ಆಗಿದ್ದು, ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಜೊತೆಗೆ ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದರಾದ ಡಿ.ಕೆ.ಸುರೇಶ್ ಅವರಿಗೆ ರಾಹುಲ್ ಗಾಂಧಿ ಅಭಿನಂದನೆಗಳನ್ನು ಸಲ್ಲಿಸಿದರು.
ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ಗೆ ನಾವು ನಿಷ್ಠರು: ಡಿ.ಕೆ.ಶಿವಕುಮಾರ್
ಇದೇ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ಬಗ್ಗೆಯೂ ಈ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಚರ್ಚೆಯ ಫಲಿತಾಂಶವಾಗಿಯೇ ಕೆಪಿಸಿಸಿ ಪದಾಧಿಕಾರಿಗಳ ವಿಸರ್ಜನೆಯ ನಿರ್ಣಯ ಹೊರಬಿದ್ದಿದೆ ಎನ್ನಲಾಗುತ್ತಿದೆ.
ಮೂಲಗಳ ಪ್ರಕಾರ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಪ್ರಸ್ತಾವ ರಾಹುಲ್ ಬಳಿಗೆ ಒಯ್ಯಲಾಗಿತ್ತು, ಅದೇ ಕಾರಣದಿಂದಲೇ ಡಿ.ಕೆ.ಶಿವಕುಮಾರ್ ಸಹ ಮೂರು ದಿನಗಳಿಂದ ನವದೆಹಲಿಯಲ್ಲಿ ಇದ್ದಾರೆ. ಆದರೆ ರಾಹುಲ್ ಗಾಂಧಿ ಸದ್ಯಕ್ಕೆ ಕೆಪಿಸಿಸಿ ಪದಾಧಿಕಾರಿಗಳನ್ನು ಮಾತ್ರವೇ ಬದಲಾಯಿಸಿದ್ದಾರೆ.
ಕೇಂದ್ರ ಸಚಿವರನ್ನು ಭೇಟಿ ಆಗಿ ಮನವಿ ನೀಡಿದ ಡಿಕೆಶಿ ಬ್ರದರ್ಸ್
ಡಿ.ಕೆ.ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಅವರಿಂದ ಗಟ್ಟಿ ಭರವಸೆ ದೊರೆತಿದ್ದು, ಕೆಲ ಕಾಲ ಕಾದು ನೋಡುವಂತೆ ರಾಹುಲ್ ತಿಳಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ರಾಜ್ಯ ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಉಳಿಸಿಕೊಳ್ಳುವ ಜವಾಬ್ದಾರಿಯನ್ನೂ ಡಿ.ಕೆ.ಶಿವಕುಮಾರ್ ಅವರ ಹೆಗಲಿಗೆ ವರ್ಗಾಯಿಸಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಅವರು ಸಹ ದೆಹಲಿಯಲ್ಲಿಯೇ ಬೀಡು ಬಿಟ್ಟಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಮಹತ್ವದ ಬದಲಾವಣೆಗೆ ಕಾಲ ಸನ್ನಿಹಿತವಾಗಿದೆಯೆಂಬ ಅನುಮಾನ ಕಾಡುತ್ತಿದೆ.