ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ಡಿಕೆ ಶಿವಕುಮಾರ್
ನವದೆಹಲಿ, ಸೆಪ್ಟೆಂಬರ್ 20 : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಿ. ಕೆ. ಶಿವಕುಮಾರ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ.
ಡಿ. ಕೆ. ಶಿವಕುಮಾರ್ ಪರ ವಕೀಲರು ದೆಹಲಿ ಹೈಕೋರ್ಟ್ಗೆ ಶುಕ್ರವಾರ ಅರ್ಜಿಯನ್ನು ಸಲ್ಲಿಸಿದ್ದಾರೆ. ಡಿ. ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯದ ವಿಚಾರಣೆ ವೇಳೆ ನೀಡಿದ ಹೇಳಿಕೆಗಳ ಪ್ರತಿಯನ್ನು ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಪಿಎಂಎಲ್ ಕಾಯ್ದೆ 50ರ ಅಡಿ ವಿಚಾರಣೆ ವೇಳೆ ನೀಡಿದ ಹೇಳಿಕೆಗಳ ಪ್ರತಿಯನ್ನು ನೀಡಬೇಕು ಎಂದು ಡಿ. ಕೆ. ಶಿವಕುಮಾರ್ ಪರ ವಕೀಲರು ಮನವಿ ಮಾಡಿದ್ದಾರೆ. ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 20ಕ್ಕೆ ಮುಂದೂಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ರನ್ನು ನಾಲ್ಕು ದಿನಗಳ ಕಾಲ ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ಸೆಪ್ಟೆಂಬರ್ 3ರಂದು ಬಂಧಿಸಿದ್ದರು. ಬಳಿಕ 14 ದಿನಗಳ ಕಾಲ ಅವರ ವಿಚಾರಣೆ ನಡೆಸಿದ್ದಾರೆ.
ಡಿ. ಕೆ. ಶಿವಕುಮಾರ್ರನ್ನು ಜಾರಿ ನಿರ್ದೇಶನಾಲಯ ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸದ್ಯ, ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದು, ಶನಿವಾರ ಜಾಮೀನು ಅರ್ಜಿಯ ವಿಚಾರಣೆ ಜಾರಿ ನಿರ್ದೇಶನಾಲಯದ ವಿಶೇಷ ಕೋರ್ಟ್ನಲ್ಲಿ ನಡೆಯಲಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಡಿ. ಕೆ. ಶಿವಕುಮಾರ್, ಡಿ. ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ವಿಚಾರಣೆ ನಡೆಸಿದೆ.












Click it and Unblock the Notifications