ಬಂಧನದ ಸಮಯದಲ್ಲಿ ಕೊನೆಯದಾಗಿ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು?
Recommended Video
ನವದೆಹಲಿ, ಸೆಪ್ಟೆಂಬರ್ 4: ನಾನು ಹೇಡಿಯಲ್ಲ, ಎಲ್ಲವನ್ನೂ ಎದುರಿಸುತ್ತೇನೆ. ನಾನು ತಪ್ಪು ಮಾಡಿಲ್ಲ. ಮೋಸ ಮಾಡಿಲ್ಲ ಬಿಜೆಪಿ ಈಗ ಗೆಲುವು ಸಾಧಿಸಿದೆ. ಅವರಿಗೆ ಶುಭವಾಗಲಿ ಎಂದು ಬಂಧನದ ಸಮಯದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಜೊತೆಗೆ ಕೊನೆಯದಾಗಿ ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಆಸೆ ಈಡೇರಿದೆ, ಕೊನೆಗೂ ನನ್ನನ್ನು ಬಂಧಿಸುವಲ್ಲಿ ಕೊನೆಗೂ ಸಫಲರಾಗಿದ್ದಾರೆ. ಬಿಜೆಪಿಗೆ ಶುಭವಾಗಲಿ ಎಂದಿದ್ದಾರೆ.
ನಮ್ಮ ಪಕ್ಷದವರು ಯಾವುದೇ ಕಾರಣಕ್ಕೂ ಗಲಾಟೆ ಮಾಡದೆ ಶಾಂತ ರೀತಿಯಿಂದ ವರ್ತಿಸಬೇಕು. ನಾನೇನು ತಪ್ಪು ಮಾಡಿಲ್ಲ ಎಂದು ತಿಳಿಸಿದ್ದಾರೆ.
ನಿರೀಕ್ಷಣಾ ಜಾಮೀನು ಸಲ್ಲಿಸುವ ನಿರ್ಧಾರದಿಂದ ಸದ್ಯಕ್ಕೆ ಡಿಕೆ ಶಿವಕುಮಾರ್ ಹಿಂದೆ ಸರಿದಿದ್ದಾರೆ. ಡಿಕೆಶಿ ಹೊರತುಪಡಿಸಿ ಉಳಿದವರು, ಸಮನ್ಸ್ ರದ್ದು ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಆದರೆ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ. ವಿಚಾರಣೆ ನಡೆಯುತ್ತಾ ಇರುವಾಗ ತುರ್ತು ವಿಚಾರಣೆ ಅಗತ್ಯ ಇಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ..

ದಾಖಲೆ ಇಲ್ಲದ 8.59 ಕೋಟಿ ರೂ ಹಣ
ದೆಹಲಿ ಫ್ಲ್ಯಾಟ್ನಲ್ಲಿ ಪತ್ತೆಯಾದ ದಾಖಲೆ ಇಲ್ಲದ 8.59 ಕೋಟಿ ರೂ. ಹಣದ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ಸತತ 4 ದಿನಗಳಿಂದ ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು ಇಂದು ರಾತ್ರಿ 8.20ರ ವೇಳೆಗೆ ಬಂಧಿಸಿದರು.

ವಿಚಾರಣೆ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಸಮರ್ಪಕ ಉತ್ತರ ನೀಡಿಲ್ಲ
ವಿಚಾರಣೆಯ ಸಂದರ್ಭದಲ್ಲಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಅಕ್ರಮ ಹಣಕಾಸು ವ್ಯವಹಾರಗಳ ತಡೆ ಕಾಯ್ದೆ(ಪಿಎಂಎಲ್ಎ) ಅಡಿ ಡಿಕೆ ಶಿವಕುಮಾರ್ ಅವರನ್ನು ಇಡಿ ಬಂಧಿಸಿದೆ. ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆ ಮಾಡಿಸಲು ಮನೋಹರ್ ಲೋಹಿಯಾ (ಆರ್ ಎಂಎಲ್) ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಇಡಿ ಕಚೇರಿ ಎದುರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ
ಮಾಧ್ಯಮಗಳಲ್ಲಿ ಡಿಕೆಶಿ ಬಂಧನದ ಸುದ್ದಿ ಪ್ರಕಟವಾಗುತ್ತಿದ್ದಂತೆ ಇಡಿ ಕಚೇರಿ ಮುಂಭಾಗದಲ್ಲಿದ್ದ ಅಭಿಮಾನಿಗಳು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗತೊಡಗಿದರು. ರಾತ್ರಿ 9.05ರ ವೇಳೆಗೆ ಡಿಕೆಶಿ ಇಡಿ ಕಚೇರಿಯಿಂದ ಹೊರ ಬಂದು ಅಷ್ಟರಲ್ಲೇ ಇಡಿ ಅಧಿಕಾರಿಗಳು ಬಲವಂತವಾಗಿ ಡಿಕೆಶಿಯನ್ನು ಕಾರಿನಲ್ಲಿ ಕುಳ್ಳಿರಿಸಿದರು.

ಪ್ರಕರಣದ ಕುರಿತು ವಿವರ
2017ರ ಆಗಸ್ಟ್ 2 ರಂದು ದೆಹಲಿಯ ಡಿಕೆ ಶಿವಕುಮಾರ್ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ದಾಖಲೆ ಇಲ್ಲದ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು.
ವಿಚಾರಣೆ ವೇಳೆ ಡಿಕೆಶಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಐಟಿ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಅಪಾರ್ಟ್ ಮೆಂಟ್ನಲ್ಲಿ ಪತ್ತೆ ಹಣದ ಜತೆಗೆ ಹವಾಲಾ ಮೂಲಕ ಏಜೆಂಟ್ಗಳ ಸಹಾಯದಿಂದ ಡಿಕೆ ಶಿವಕುಮಾರ್ ಕೋಟ್ಯಂತರ ರೂ.ಗಳನ್ನು ಕಾಂಗ್ರೆಸ್ ಹೈಕಮಾಂಡ್ಗೆ ನೀಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ನೋಟು ನಿಷೇಧಗೊಂಡ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಸಾವಿರಾರು ಕೋಟಿ ರೂ.ಗಳನ್ನು ಬದಲಾಯಿಸಿದ್ದಾರೆ. ಆಪ್ತರ ಮೂಲಕ ಕಪ್ಪುಹಣವನ್ನು ಬಿಳಿಯಾಗಿ ಪರಿವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು.
ವಿದೇಶದಲ್ಲೂ ಡಿಕೆಶಿ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಈ ಸಮನ್ಸ್ ರದ್ದು ಪಡಿಸುವಂತೆ ಕೋರಿ ಡಿಕೆ ಶಿವಕುಮಾರ್ ಹೈ ಕೋರ್ಟ್ ಮೊರೆ ಹೋಗಿದ್ದರು.
ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಕಳೆದ ವಾರ ವಜಾಗೊಳಿಸಿದ ಹಿನ್ನೆಲೆಯಲ್ಲಿ ಇಡಿ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿತ್ತು.











Click it and Unblock the Notifications