ಪ್ರತಿಭಟನಾ ನಿರತ ರೈತರಿಗೆ ಕೊವಿಡ್ ಪರೀಕ್ಷೆ ಮಾಡಿಸುವಂತೆ ವೈದ್ಯರ ಒತ್ತಾಯ
ನವದೆಹಲಿ, ನವೆಂಬರ್ 30: ಕೇಂದ್ರದ ಕೃಷಿ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಸಾವಿರಾರು ಮಂದಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಅವರಿಗೆ ಕೊವಿಡ್ 19 ಪರೀಕ್ಷೆ ಮಾಡಿಸುವಂತೆ ವೈದ್ಯರು ಒತ್ತಾಯಿಸುತ್ತಿದ್ದಾರೆ.
ರೈತರು ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ನಾವು ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲೇಬೇಕು. ಒಂದು ಕೊರೊನಾ ಪರೀಕ್ಷೆ ನಡೆಸದಿದ್ದರೆ ರೈತರು ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆ ಇದೆ. ಕೊರೊನಾ ರೈತರಿಂದ ಇತರರಿಗೂ ಹರಡಬಹುದು, ಅದು ಹಾನಿಕಾರಕ ಎಂದು ಡಾ. ಕರಣ್ ಅವರು ಹೇಳಿದ್ದಾರೆ.
ರೈತರಿಗೆ ತಮ್ಮ ಉತ್ಪನ್ನಗಳ ನೇರ ಮಾರಾಟ ಹಕ್ಕು ನೀಡುವುದು ತಪ್ಪೇ: ಮೋದಿ
ಈ ಮಧ್ಯೆ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಚಲೋ ಹೆಸರಿನಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆ ಸೋಮವಾರ 5ನೇ ದಿನಕ್ಕೆ ಕಾಲಿಟ್ಟಿದೆ.
ದೆಹಲಿ-ಹರಿಯಾಣ ಗಡಿ ಪ್ರದೇಶ ಸಿಂಘುವಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರವನ್ನು ಸ್ಥಾಪಿಸಲಾಗಿದ್ದು, ಪ್ರತಿಭಟನಾ ನಿರತ ಎಲ್ಲಾ ರೈತರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಬೇಕು ಎಂದು ವೈದ್ಯರು ಆಗ್ರಹಿಸಿದ್ದಾರೆ.
ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವೈದ್ಯರು ಪ್ರತಿಭಟನಾಕಾರರಿಗೆ ಸುರಕ್ಷತಾ ಮಾರ್ಗಸೂಚಿಗಳ ಬಗ್ಗೆ ಅರಿವು ಮೂಡಿಸುತ್ತಿದ್ದರೂ, ಅವರಲ್ಲಿ ಹೆಚ್ಚಿನವರು ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದಾರೆ ಮತ್ತು ರೈತರ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ.
ಹೀಗಾಗಿ ಕೇಂದ್ರ ಸರ್ಕಾರ ಎಲ್ಲಾ ಪ್ರತಿಭಟನಾ ನಿರತ ರೈತರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಬೇಕು ಎಂದು ವೈದ್ಯರು ಆಗ್ರಹಿಸಿದ್ದಾರೆ.