ಡ್ರಗ್ಸ್ ಪ್ರಕರಣ: ರಾಗಿಣಿ ದ್ವಿವೇದಿ ಭವಿಷ್ಯ ಇಂದು ತೀರ್ಮಾನ ಸಾಧ್ಯತೆ
ನವದೆಹಲಿ, ಜನವರಿ 8: ಮಾದಕವಸ್ತು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯ ವಿಚಾರಣೆ ಶುಕ್ರವಾರ ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ. ರಾಗಿಣಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ರಾಗಿಣಿ ಅವರ ಅರ್ಜಿ ಸುಪ್ರೀಂಕೋರ್ಟ್ನ ತ್ರಿಸದಸ್ಯ ನ್ಯಾಯಪೀಠದ ಮುಂದೆ ಬೆಳಿಗ್ಗೆ 11.30ರ ವೇಳೆ ವಿಚಾರಣೆಗೆ ಬರಲಿದೆ. ಹಲವು ತಿಂಗಳಿನಿಂದ ಜೈಲು ವಾಸ ಅನುಭವಿಸುತ್ತಿರುವ ರಾಗಿಣಿ ಅವರಿಗೆ ಜೈಲಿನಿಂದ ಮುಕ್ತಿ ಸಿಗಲಿದೆಯೇ ಎನ್ನುವುದು ಕುತೂಹಲ ಮೂಡಿಸಿದೆ.
ಆದರೆ ರಾಗಿಣಿ ಅವರ ಜಾಮೀನು ಅರ್ಜಿಗೆ ಬೆಂಗಳೂರು ಸಿಸಿಬಿ ಪರ ವಕೀಲರು ಈಗಾಗಲೇ ಆಕ್ಷೇಪಣೆ ಸಲ್ಲಿಸಿದ್ದಾರೆ. ರಾಗಿಣಿ ಅವರು ಮಾದಕವಸ್ತು ಸೇವನೆ ಮತ್ತು ಮಾರಾಟದಲ್ಲಿ ಭಾಗಿಯಾಗಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು, ಅವರಿಗೆ ಜಾಮೀನು ನೀಡದಂತೆ ವಕೀಲ ತುಷಾರ್ ಮೆಹ್ತಾ ಮನವಿ ಮಾಡಿದ್ದಾರೆ.

2020ರ ಸೆ. 4ರಂದು ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಎನ್ಡಿಪಿಎಸ್ ಮತ್ತು ಐಪಿಸಿ ಕಾಯ್ದೆಗಳ ಅಡಿ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ರಾಗಿಣಿ ನವೆಂಬರ್ ಅಂತ್ಯದಲ್ಲಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಡಿ. 4ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಆರ್ ಎಫ್ ನಾರಿಮನ್, ನವೀನ್ ಸಿನ್ಹಾ ಮತ್ತು ಕೆಎಂ ಜೋಸೆಫ್ ಅವರ ಪೀಠ ರಾಜ್ಯ ಸರ್ಕಾರ ಮತ್ತು ಸಿಸಿಬಿ ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಮುಂದೂಡಿತ್ತು.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ. ರಾಗಿಣಿ ಬಂಧನದ ಬಳಿಕ ಬಂಧನಕ್ಕೆ ಒಳಗಾಗಿದ್ದ ನಟಿ ಸಂಜನಾ ಗಲ್ರಾನಿ ಅನಾರೋಗ್ಯದ ಕಾರಣದಿಂದ ಜಾಮೀನು ಪಡೆದು ಹೊರಬರಲು ಯಶಸ್ವಿಯಾಗಿದ್ದರು.












Click it and Unblock the Notifications