ಅಹಂಕಾರದಿಂದ ದೇಶ ಮುನ್ನೆಡೆಸಲು ಆಗುತ್ತದೆಯೇ; ಸಂಜಯ್ ರಾವತ್
ನವದೆಹಲಿ, ಫೆಬ್ರವರಿ.02: ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಜೊತೆಗೆ ಕೇಂದ್ರ ಸರ್ಕಾರವು ಸರಿಯಾದ ರೀತಿಯಲ್ಲಿ ಸಂಧಾನ ಮಾತುಕತೆ ನಡೆಸಬೇಕು. ಅಹಂಕಾರದಿಂದ ಸರ್ಕಾರವನ್ನು ನಡೆಸುವುದಕ್ಕೆ ಆಗುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಕಿಡಿ ಕಾರಿದ್ದಾರೆ.
ಮಂಗಳವಾರ ಉತ್ತರ ಪ್ರದೇಶ ಮತ್ತು ದೆಹಲಿಯ ಗಡಿ ಪ್ರದೇಶ ಘಾಜಿಪುರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ತಿಕೈಟ್ ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಸಂಜಯ್ ರಾವತ್ ಮಾತನಾಡಿದ್ದಾರೆ.
ಬೆತ್ತ ಅಲ್ಲವೇ ಅಲ್ಲ; ದೆಹಲಿ ಪೊಲೀಸರ ಕೈಗೆ ಕಬ್ಬಿಣದ ಲಾಠಿ!
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ರೈತ ಸಂಘಟನೆಗಳಿಗೆ ಶಿವಸೇನೆಗೆ ಬೆಂಬಲಿಸಲಿದೆ. ಮಹಾ ವಿಕಾಸ್ ಅಘಾದಿ ಸರ್ಕಾರವು ರೈತರ ಹಿತದೃಷ್ಟಿಯಿಂದ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ರೈತರು ನೋವಿನಲ್ಲಿದ್ದಾಗ ಅವರಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಾದ್ದಾರೆ ಎಂದು ಸಂಜಯ್ ರಾವತ್ ಹೇಳಿದರು.
ರಾಕೇಶ್ ತಿಕೈಟ್ ಬಗ್ಗೆ ರಾವತ್ ಶ್ಲಾಘನೆ:
ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತ ಹೋರಾಟದಲ್ಲಿ ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ತಿಕೈಟ್ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಈ ಮೊದಲು ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅವರು, ನಂತರದಲ್ಲಿ ರಾಜಕಾರಣಕ್ಕೂ ಪ್ರವೇಶಿಸಿದ್ದರು. ರಾಜಕೀಯದಿಂದ ಬೇಸರಗೊಂಡು ಕೃಷಿ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಸಂಘಟನೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ. ಕಳೆದ ನವೆಂಬರ್.26ರಿಂದಲೂ ಕೇಂದ್ರ ಸರ್ಕಾರದ ಹೊಸ ಕಾಯ್ದೆಗಳ ವಿರುದ್ಧ ಹೋರಾಟ ನಡೆಸಲಾಗುತ್ತಿದೆ.