ಮೂರು ದಿನದಲ್ಲಿ 2ನೇ ಬಾರಿ ಸೋನಿಯಾ ಗಾಂಧಿಯನ್ನು ಭೇಟಿಯಾದ ಚಾಣಕ್ಯ!
ನವದೆಹಲಿ, ಏಪ್ರಿಲ್ 19: ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವ ಸಾಧ್ಯತೆ ಇದೆ ಎಂಬ ಗುಸುಗುಸು ಸುದ್ದಿಗಳ ನಡುವೆ ಪ್ರಶಾಂತ್ ಕಿಶೋರ್ ಮೂರು ದಿನಗಳಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯನ್ನು ಭೇಟಿಯಾಗಿದ್ದಾರೆ.
ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯ ಮುಂದಿನ ಸುತ್ತಿನ ಮಾತುಕತೆಗಾಗಿ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಸೋಮವಾರ ಸಂಜೆ ಭೇಟಿಯಾಗಿದ್ದಾರೆ. ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಗುಮಾನಿಯ ನಡುವೆ ಈ ಭೇಟಿ ಮತ್ತೆ ನಡೆದಿದೆ.
ಕಾಂಗ್ರೆಸ್ ಸೇರ್ಪಡೆ ಗುಮಾನಿ ನಡುವೆ ಪ್ರಶಾಂತ್ ಕಿಶೋರ್ ಮತ್ತು ಗಾಂಧಿ ಭೇಟಿ
ಈ ಹಿಂದಿನಿಂದಲೇ ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವನ ಮಾಡಬೇಕಾಗಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿಕೊಂಡು ಬಂದಿದ್ದಾರೆ. 2024 ರ ಮೊದಲು ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವನ ಮಾಡುವ ಪ್ರಶಾಂತ್ ಕಿಶೋರ್ ಪ್ರಸ್ತಾಪವನ್ನು ಕಾಂಗ್ರೆಸ್ ಪರಿಗಣಿಸುತ್ತಿದೆ ಹಾಗೂ ಈ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗಳಲ್ಲಿ ಪ್ರಶಾಂತ್ ಸಹಾಯ ಪಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.
ಕಳೆದ ಮೂರು ದಿನಗಳಲ್ಲಿ ಇದು ಪ್ರಶಾಂತ್ ಕಿಶೋರ್ ಹಾಗೂ ಸೋನಿಯಾ ಗಾಂಧಿ ನಡುವಿನ ಎರಡನೇ ಭೇಟಿಯಾಗಿದೆ. ಪ್ರಶಾಂತ್ ಕಿಶೋರ್ ಶನಿವಾರದಂದು ಆಯ್ದ ಕಾಂಗ್ರೆಸ್ ನಾಯಕರ ಮುಂದೆ ಮಿಷನ್ 2024 ಕುರಿತು ವಿವರವಾದ ಪ್ರಸ್ತುತಿಯನ್ನು ನೀಡಿದ್ದರು.
ನರೇಶ್ ಪಟೇಲ್, ಪ್ರಶಾಂತ್ ಕಿಶೋರ್: ಗುಜರಾತ್ ಚುನಾವಣೆಗೆ ಕಾಂಗ್ರೆಸ್ ತಂತ್ರ
ಪ್ರಶಾಂತ್-ಸೋನಿಯಾ ಸಭೆಯಲ್ಲಿ ಯಾವೆಲ್ಲಾ ಮಾತುಕತೆ?
ಇಂದಿನ ಸಭೆಯಲ್ಲಿ, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಳ ಬಗ್ಗೆ ಚರ್ಚೆ ನಡೆದಿದೆ. ಹಾಗೆಯೇ ಕರ್ನಾಟಕ, ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮುಂದಿನ ವರ್ಷ ನಡೆಯಲಿರುವ ರಾಜ್ಯಗಳ ಚುನಾವಣೆಗಳ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ.
ಸೋಮವಾರ ಸಂಜೆ ಸೋನಿಯಾ ಗಾಂಧಿಯವರು ತಮ್ಮ ಮನೆಯಲ್ಲಿ ಮಿಷನ್ 2024 ಯೋಜನೆಯನ್ನು ಮೌಲ್ಯಮಾಪನ ಮಾಡಲು ನಿಯೋಜಿಸಲಾದ ಪಕ್ಷದ ತಂಡದೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಸೋನಿಯಾ ಪುತ್ರಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಹಿರಿಯ ನಾಯಕರಾದ ಮುಕುಲ್ ವಾಸ್ನಿಕ್, ರಣದೀಪ್ ಸಿಂಗ್ ಸುರ್ಜೆವಾಲಾ, ಕೆಸಿ ವೇಣುಗೋಪಾಲ್ ಮತ್ತು ಅಂಬಿಕಾ ಸೋನಿ ಅವರು ಭಾಗವಹಿಸಿದ್ದರು. ಗುಂಪು ಒಂದು ವಾರದೊಳಗೆ ಈ ವಿಷಯದ ಬಗ್ಗೆ ವರದಿಯನ್ನು ನೀಡುವ ನಿರೀಕ್ಷೆಯಿದೆ.
ಪ್ರಶಾಂತ್ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಲು ಗಡುವು!
ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವು 370 ಸ್ಥಾನಗಳಲ್ಲಿ ಸ್ಪರ್ಧಿಸುವ ಯೋಜನೆಯನ್ನು ಮತ್ತು ಕೆಲವು ರಾಜ್ಯಗಳಲ್ಲಿ ಕಾರ್ಯತಂತ್ರದ ಪಾಲುದಾರಿಕೆಯನ್ನು ರೂಪಿಸುವ ಯೋಜನೆಯನ್ನು ಒಳಗೊಂಡಿರುವ ಪ್ರಶಾಂತ್ ಕಿಶೋರ್ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಲು ಕಾಂಗ್ರೆಸ್ಗೆ ಈ ತಿಂಗಳ ಉಳಿದ ಸಮಯವನ್ನು ನೀಡಲಾಗಿದೆ.
ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಬೇಕು. ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ಮೈತ್ರಿ ಮಾಡಿಕೊಳ್ಳಬೇಕು ಎಂದು ಕಿಶೋರ್ ಸಲಹೆ ನೀಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಒಪ್ಪಿದ್ದಾರೆ ಎಂದು ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ರಾಜ್ಯ ಚುನಾವಣೆಗಳಲ್ಲಿ ಪ್ರಬಲ ಪ್ರಾದೇಶಿಕ ನಾಯಕರಾದ ಮಮತಾ ಬ್ಯಾನರ್ಜಿ, ಜಗನ್ ಮೋಹನ್ ರೆಡ್ಡಿ ಮತ್ತು ಕೆ ಚಂದ್ರಶೇಖರ ರಾವ್ಗೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪ್ರಶಾಂತ್ ಕಿಶೋರ್ ಸಹಾಯ ಮಾಡಿದ ಕಾರಣದಿಂದಾಗಿ ಈಗ ಕಾಂಗ್ರೆಸ್ ಕೂಡಾ ಪ್ರಶಾಂತ್ ಕಿಶೋರ್ ಸಹಾಯವನ್ನು ಪಡೆಯುವುದು ಕಾಂಗ್ರೆಸ್ನ ಕೆಲವು ನಾಯಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿದೆ. ಮಮತಾ ಬ್ಯಾನರ್ಜಿ ಹಾಗೂ ಜಗನ್ ಮೋಹನ್ ರೆಡ್ಡಿ ಪಶ್ಚಿಮ ಬಂಗಾಳ ಹಾಗೂ ಆಂಧ್ರಪ್ರದೇಶದಲ್ಲಿ ಗೆದ್ದಾಗ ಆ ರಾಜ್ಯದಲ್ಲಿ ಕಾಂಗ್ರೆಸ್ ನಿರ್ಣಾಮವನ್ನು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದೊಳಗೆ ಅಸಮಾಧಾನವಿದೆ.