ವಿದ್ಯುತ್ ತಿದ್ದುಪಡಿ ಮಸೂದೆ: ಇಂದು ಸಂಸತ್ತಿನಲ್ಲಿ ಮಂಡನೆ ಸಾಧ್ಯತೆ
ದೇಶದ ವಿದ್ಯುತ್ ಕ್ಷೇತ್ರದಲ್ಲಿ ಪ್ರಮುಖ ಸುಧಾರಣೆಗಳನ್ನು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ವಿದ್ಯುತ್ ತಿದ್ದುಪಡಿ ಮಸೂದೆ ಮಂಡನೆ ಮಾಡಲಿದೆ. ಈ ಮಸೂದೆಯು ದೇಶದ ಅಸ್ತಿತ್ವದಲ್ಲಿರುವ ವಿದ್ಯುತ್ ವಿತರಣಾ ವಲಯದಲ್ಲಿ ಪ್ರಮುಖ ಬದಲಾವಣೆಗಳನ್ನು ತರುತ್ತದೆ. ಇದರೊಂದಿಗೆ ಇಡೀ ವಿದ್ಯುತ್ ವಲಯದಲ್ಲಿ ಖಾಸಗಿ ವಲಯದ ಪಾಲನ್ನು ಹೆಚ್ಚಿಸಲು ದಾರಿ ತೆರೆಯಬಹುದು. ಇಡೀ ದೇಶದಲ್ಲಿ ಮೊದಲ ಬಾರಿಗೆ, ವಿದ್ಯುತ್ ಗ್ರಾಹಕರು ಒಂದಕ್ಕಿಂತ ಹೆಚ್ಚು ವಿದ್ಯುತ್ ವಿತರಣಾ ಕಂಪನಿಗಳನ್ನು ಆಯ್ಕೆ ಮಾಡುವ ಆಯ್ಕೆಯನ್ನು ತೆರೆಯಬಹುದು. ಮಾತ್ರವಲ್ಲದೆ ಮಸೂದೆಯ ಮೂಲಕ ಕೇಂದ್ರ ಮತ್ತು ರಾಜ್ಯಗಳ ಸರ್ಕಾರದ ವಿದ್ಯುತ್ ನಿಯಂತ್ರಣ ಆಯೋಗದ ರಚನೆಯಲ್ಲೂ ಕೆಲವು ಪ್ರಮುಖ ಬದಲಾವಣೆಗಳನ್ನು ತರಲಾಗುವುದು.
ಆದರೆ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಲು ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ವಿದ್ಯುತ್ ನೌಕರರು ಮತ್ತು ಎಂಜಿನಿಯರ್ಗಳು ಮಸೂದೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದು ಬಂಡವಾಳಶಾಹಿಗಳಿಗೆ ಮಾತ್ರ ಅನುಕೂಲ ಮಾಡಿಕೊಡುತ್ತದೆ ಎಂದು ವಿರೋಧ ವ್ಯಕ್ತವಾಗಿದೆ. ಇದರೊಂದಿಗೆ ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳಿಂದ ಈ ಮಸೂದೆಯ ವಿರುದ್ಧ ಹೇಳಿಕೆಗಳನ್ನು ನೀಡಲಾಗಿದೆ.
ಕಳೆದ ಶುಕ್ರವಾರ ವಿದ್ಯುತ್ ಸಚಿವ ಆರ್.ಕೆ.ಸಿಂಗ್ ಅವರ ಅಧ್ಯಕ್ಷತೆಯಲ್ಲಿ ದೇಶದ ವಿದ್ಯುತ್ ಪರಿಸ್ಥಿತಿ ಕುರಿತು ರಾಜ್ಯಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಉದ್ದೇಶಿತ ವಿದ್ಯುತ್ ತಿದ್ದುಪಡಿ ಮಸೂದೆಯ ಕೆಲವು ಪ್ರಸ್ತಾಪಗಳ ಬಗ್ಗೆಯೂ ಚರ್ಚಿಸಲಾಗಿದೆ. ಒಂದಷ್ಟು ರಾಜಕೀಯ ವಿರೋಧವಿದ್ದರೂ ಸಂಖ್ಯಾಬಲದ ಆಧಾರದಲ್ಲಿ ಸರ್ಕಾರ ಮಸೂದೆ ಅಂಗೀಕಾರದ ಬಗ್ಗೆ ವಿಶ್ವಾಸ ಹೊಂದಿದೆ.
ಖಾಸಗಿ ವಿದ್ಯುತ್ ವಿತರಣಾ ಕಂಪನಿಗಳು ಮುಕ್ತವಾಗಿ ಕಾರ್ಯನಿರ್ವಹಿಸಲು, ಸರ್ಕಾರಿ ಸ್ವಾಮ್ಯದ ವಿತರಣಾ ಕಂಪನಿಗಳೊಂದಿಗೆ ಸ್ಪರ್ಧಿಸಲು ಈ ಮಸೂದೆ ಅವಕಾಶ ನೀಡುತ್ತದೆ. ಈ ಮಸೂದೆಗೆ ಸಂಸತ್ತಿನ ಅನುಮೋದನೆ ದೊರೆತು, ಕಾಯ್ದೆಯ ಸ್ವರೂಪ ದೊರೆತರೆ ಗ್ರಾಹಕರು ತಮಗೆ ಬೇಕಾದ ವಿತರಣಾ ಕಂಪನಿಗಳಿಂದ ವಿದ್ಯುತ್ ಸಂಪರ್ಕ ಪಡೆದುಕೊಳ್ಳುವ ಸ್ವಾತಂತ್ರ್ಯ ಲಭಿಸುತ್ತದೆ.
ವಿದ್ಯುತ್ ವಿತರಣೆಯನ್ನು ಖಾಸಗಿ ಕಂಪನಿಗಳಿಗೆ ಮುಕ್ತಗೊಳಿಸಬಾರದೆಂಬ ಆಕ್ಷೇಪವಿದೆ. ವಿದ್ಯುತ್ ವಿತರಣೆಗೆ ಖಾಸಗಿ ಕಂಪನಿಗಳ ಮುಕ್ತಪ್ರವೇಶಕ್ಕೆ ಅವಕಾಶ ಮಾಡಿಕೊಡುವುದು ಸರ್ಕಾರಿ ಸ್ವಾಮ್ಯದ ವಿತರಣಾ ಕಂಪನಿಗಳ ನಷ್ಟದ ಪ್ರಮಾಣ ಹೆಚ್ಚಾಗಲು ಕಾರಣವಾಗುತ್ತದೆ ಎಂಬುದು ರಾಜ್ಯ ಸರ್ಕಾರಗಳ ಆಕ್ಷೇಪವಾಗಿದೆ. ಈ ನಿಯಮಗಳು ಯಥಾವತ್ತಾಗಿ ಜಾರಿಯಾದರೆ ಕೇಂದ್ರೀಕೃತ ವ್ಯವಸ್ಥೆ ಜಾರಿಗೆ ಬರಲಿದ್ದು, ರಾಜ್ಯಗಳು ತಮ್ಮ ಸ್ವಾತಂತ್ರ್ಯ ಕಳೆದುಕೊಳ್ಳುತ್ತವೆ ಎಂದು ಮಮತಾ ಬ್ಯಾನರ್ಜಿ ತಮ್ಮ ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
Recommended Video