Breaking: ದೆಹಲಿಗೆ ಬರುತ್ತಿದ್ದ ರೈತ ಮುಖಂಡ ಟಿಕಾಯತ್ ಪೊಲೀಸ್ ವಶಕ್ಕೆ
ನವದೆಹಲಿ, ಆಗಸ್ಟ್ 21: ದೇಶದಲ್ಲಿ ಹೆಚ್ಚಾಗುತ್ತಿರುವ ನಿರುದ್ಯೋಗದ ವಿರುದ್ಧ ರೈತರು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಗೆ ಬರುತ್ತಿದ್ದ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸಲು ದೆಹಲಿಗೆ ಪ್ರವೇಶಿಸುತ್ತಿದ್ದಾಗ ತನ್ನನ್ನು ಬಂಧಿಸಲಾಯಿತು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಭಾನುವಾರ ಟ್ವೀಟ್ ಮಾಡಿದ್ದಾರೆ. ದೆಹಲಿ ಪೊಲೀಸರು ಕೇಂದ್ರ ಸರಕಾರದ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ" ಎಂದು ಆಕ್ರೋಶ ಹೊರಹಾಕಿದ್ದಾರೆ.
"ಸರ್ಕಾರದ ಆದೇಶದ ಮೇರೆಗೆ ಕೆಲಸ ಮಾಡುತ್ತಿರುವ ದೆಹಲಿ ಪೊಲೀಸರು ರೈತರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಈ ಬಂಧನ ಹೊಸ ಕ್ರಾಂತಿಯನ್ನು ಉಂಡು ಮಾಡಲಿದೆ. ಕೊನೆಯ ಉಸಿರು ಇರುವವರೆಗೂ ಈ ಹೋರಾಟ ಮುಂದುವರಿಯಲಿದೆ. ನಾವು ನಿಲ್ಲುವುದಿಲ್ಲ, ನಾವು ತಲೆಬಾಗುವುದಿಲ್ಲ" ಎಂದು ಟಿಕಾಯತ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಪೊಲೀಸ್ ಠಾಣೆಯಲ್ಲಿನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ದೇಶದಲ್ಲಿ ನಿರುದ್ಯೋಗದ ವಿರುದ್ಧ ರೈತರು ಜಂತರ್ ಮಂತರ್ನಲ್ಲಿ ಸೋಮವಾರ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಅವರ ಪುತ್ರ ಆಶಿಶ್ ವಿರುದ್ಧ ಪ್ರತಿಭಟನೆ ನಡೆಸಿದ ಕೆಲವು ದಿನಗಳ ನಂತರ ಸೋಮವಾರ ದೆಹಲಿಯಲ್ಲಿಯೂ ಪ್ರತಿಭಟನೆ ನಡೆಯಲಿದೆ. ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರ ರಾಕೇಶ್ ಟಿಕಾಯತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಬರುತ್ತಿದ್ದರು.

ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಗೋಪಾಲ್ ರೈ ಅವರು ಟಿಕಾಯತ್ ಬಂಧನವನ್ನು ಖಂಡಿಸಿ, ಟ್ವಿಟರ್ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. "ರೈತ ನಾಯಕ ರಾಕೇಶ್ ಟಿಕಾಯತ್ ಅವರು ನಿರುದ್ಯೋಗದ ವಿರುದ್ಧದ ಆಂದೋಲನಕ್ಕೆ ತೆರಳುತ್ತಿದ್ದರು. ಆದರೆ, ಗಡಿಯಲ್ಲಿಯೇ ಪೊಲೀಸರು ಅವರನ್ನು ತಡೆದರು. ಇದು ಅತ್ಯಂತ ಹೇಯ ಕೃತ್ಯವಾಗಿದೆ" ಎಂದು ಖಂಡಿಸಿದ್ದಾರೆ.
ಸೋಮವಾರದಂದು ಜಂತರ್ ಮಂತರ್ನಲ್ಲಿ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಇತರ ಸಂಘಟನೆಗಳು ಮಹಾಪಂಚಾಯತ್ ಆಯೋಜಿಸಿವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಟಿಕ್ರಿ ಗಡಿ, ಪ್ರಮುಖ ವೃತ್ತಗಳು, ರೈಲ್ವೆ ಹಳಿಗಳು ಮತ್ತು ಮೆಟ್ರೋ ನಿಲ್ದಾಣಗಳ ಬಳಿ ಭದ್ರತೆ ನಿಯೋಜಿಸಲಾಗಿದೆ.












Click it and Unblock the Notifications