ಮೂರು ರಾಜ್ಯಗಳ 7 ಕಿಸಾನ್ ಮಹಾಪಂಚಾಯತ್ ನಲ್ಲಿ ರಾಕೇಶ್ ತಿಕೈಟ್
ನವದೆಹಲಿ, ಫೆಬ್ರವರಿ.12: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮೂರು ರಾಜ್ಯಗಳಲ್ಲಿ ನಡೆಯುವ 7 ಕಿಸಾನ್ ಮಹಾ ಪಂಚಾಯತ್ ಸಭೆಗಳಲ್ಲಿ ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ತಿಕೈಟ್ ಭಾಗವಹಿಸಲಿದ್ದಾರೆ.
ಫೆಬ್ರವರಿ.14ರಿಂದ ಹರಿಯಾಣ, ಮಹಾರಾಷ್ಟ್ರ ಮತ್ತು ರಾಜಸ್ಥಾನದಲ್ಲಿ ಕಿಸಾನ್ ಮಹಾ ಪಂಚಾಯತ್ ನಡೆಸುವುದಕ್ಕೆ ನಿರ್ಧರಿಸಲಾಗಿದೆ. ಕಿಸಾನ್ ಮಹಾ ಪಂಚಾಯತ್ ಸಭೆಗಳು ಸಂಯುಕ್ತ ಕಿಸಾನ್ ಮೋರ್ಚಾದ ಭಾಗವಾಗಿದ್ದು, ಫೆಬ್ರವರಿ.23ರವರೆಗೂ ಮೂರು ರಾಜ್ಯದ ವಿವಿಧ ಕಡೆಯಲ್ಲಿ ಈ ಸಭೆಗಳನ್ನು ನಡೆಸಲಾಗುತ್ತದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲ್ಲಿಕ್ ತಿಳಿಸಿದ್ದಾರೆ.
ಹರಿಯಾಣದ ಕರ್ನಾಲ್, ರೋಹ್ಟಕ್, ಸಿರ್ಸಾ ಮತ್ತು ಹಿಸಾರ್ ಜಿಲ್ಲೆಗಳು, ಮಹಾರಾಷ್ಟ್ರದ ಅಕೋಲಾ ಹಾಗೂ ರಾಜಸ್ಥಾನದ ಸಿಕಾರ್ ಜಿಲ್ಲೆಗಳಲ್ಲಿ ಕಿಸಾನ್ ಮಹಾ ಪಂಚಾಯತ್ ಸಭೆಗಳನ್ನು ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ.

ನವದೆಹಲಿಯಲ್ಲಿ ಕೃಷಿ ಕಾಯ್ದೆ ವಿರುದ್ಧ ಹೋರಾಟ:
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿಯಲ್ಲಿ ಸಾವಿರಾರು ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ರೈತ ಸಂಘಟನೆ ಮತ್ತು ಕೇಂದ್ರದ ನಡುವೆ ಸಂಧಾನ ಸಭೆ:
ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳ ಮುಖಂಡರು ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳ ನಡುವೆ ಇದುವರೆಗೂ 11 ಸುತ್ತಿನ ಸಂಧಾನ ಮಾತುಕತೆ ನಡೆಸಲಾಗಿದೆ. ಆದರೆ ಎರಡು ಕಡೆಗಳಲ್ಲಿ ಹೊಂದಾಣಿಕೆಯಾಗದೇ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿರುವ ಹಿನ್ನೆಲೆ ರೈತರ ಹೋರಾಟವು 79ನೇ ದಿನವೂ ಮುಂದುವರಿದಿದೆ.












Click it and Unblock the Notifications