ರೈತರ ಹೋರಾಟ: 3 ಗಂಟೆಗಳವರೆಗೂ ರಾಷ್ಟ್ರೀಯ ಹೆದ್ದಾರಿ ಬಂದ್!
ನವದೆಹಲಿ, ಫೆಬ್ರವರಿ.02: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರಾಷ್ಟ್ರವ್ಯಾಪ್ತಿ "ಛಕ್ಕಾ ಜಾಮ್" (ರಾಷ್ಟ್ರೀಯ ಹೆದ್ದಾರಿ ತಡೆ) ನಡೆಸುವುದಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಕರೆ ಕೊಟ್ಟಿದೆ.
ಭಾರತದಾದ್ಯಂತ ಫೆಬ್ರವರಿ.06ರ ಶನಿವಾರ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೂ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸುವುದುದಾಗಿ ಘೋಷಿಸಲಾಗಿದೆ. ಸಂಸತ್ ಚಲೋ ಪ್ರತಿಭಟನೆ ಕೈಬಿಟ್ಟ ಬೆನ್ನಲ್ಲೇ ವಿನೂತನ ರೀತಿ ಹೋರಾಟಕ್ಕೆ ರೈತ ಸಂಘಟನೆಗಳು ಮುಂದಾಗಿವೆ.
ಕೇಂದ್ರ ಬಜೆಟ್; ಟ್ರ್ಯಾಕ್ಟರ್ ಜಾಥಾಗೆ ಮುಂದಾದ 125 ಮಂದಿ ಮೇಲೆ FIR
ಕೇಂದ್ರ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವ ಪ್ರದೇಶದಲ್ಲಿ ಇಂಟರ್ ನೆಟ್ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದೆ. ಇದರ ಜೊತೆಗೆ ಪ್ರತಿಭಟನಾಕಾರರಿಗೆ ಕುಡಿಯುವ ನೀರು, ವಿದ್ಯುತ್, ಶೌಚಾಲಯ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳೂ ಕೂಡಾ ಸಿಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ. ಈ ವ್ಯವಸ್ಥೆ ವಿರುದ್ಧ ರೈತರು ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.
ಕೇಂದ್ರ ಬಜೆಟ್-2021ರ ವಿರುದ್ಧ ಖಂಡನೆ:
ಸಂಸತ್ ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಮಂಡಿಸಿದ ಕೇಂದ್ರ ಬಜೆಟ್-202122ಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಬಜೆಟ್ ಯಾವುದೇ ತೃಪ್ತಿದಾಯಕವಾಗಿಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ. ಕಳೆದ ನವೆಂಬರ್.26ರಿಂದಲೂ ಕೇಂದ್ರ ಸರ್ಕಾರದ ಹೊಸ ಕಾಯ್ದೆಗಳ ವಿರುದ್ಧ ಹೋರಾಟ ನಡೆಸಲಾಗುತ್ತಿದೆ.
ಕಳೆದ ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ನಡೆಯುತ್ತಿದ್ದ ರೈತರ ಹೋರಾಟವು ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರು ಮತ್ತು ಪೊಲೀಸರ ನಡುವೆ ಸಂಘರ್ಷ ನಡೆಯಿತು. ಪ್ರತಿಭಟನಾನಿರತರಲ್ಲಿ ಕೆಲವರು ಖಡ್ಗ, ಕತ್ತಿ ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದು ಓಡಾಡಿದ ಘಟನೆ ನಡೆದಿತ್ತು. ಪ್ರತಿಭಟನಾಕಾರರ ಇನ್ನೊಂದು ಗುಂಪು ದೆಹಲಿ ಕೆಂಪುಕೋಟೆಯನ್ನು ನುಗ್ಗಿ ರಾಷ್ಟ್ರ ಧ್ವಜದ ಎದುರಿಗೆ ಸಿಖ್ ಧ್ವಜವನ್ನು ಹಾರಿಸಿತ್ತು.