ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನ ಕೃಷಿ ಕಾಯ್ದೆ ವಿರೋಧಿಸಿ "ದೆಹಲಿ ಚಲೋ" ಪ್ರತಿಭಟನೆ
ನವದೆಹಲಿ, ಅಕ್ಟೋಬರ್ 20: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಇದೇ ವಾರ ಸುಪ್ರೀಂಕೋರ್ಟ್ ಆದೇಶ ಹೊರಡಿಸಲಿದೆ. ಇದಕ್ಕೂ ಮೊದಲು ಸರ್ಕಾರದ ವಿರುದ್ಧ ದೆಹಲಿ ಚಲೋ ಪ್ರತಿಭಟನೆ ನಡೆಸುವುದಕ್ಕೆ ರೈತ ಸಂಘಟನೆಗಳು ಕರೆ ನೀಡಿವೆ.
ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ಇತರೆ ರಾಜ್ಯಗಳಿಂದ ದೆಹಲಿ ಗಡಿಗೆ ಆಗಮಿಸುವಂತೆ ರೈತ ಸಂಘಟನೆ ಮುಖಂಡರು ರೈತರಿಗೆ ಕರೆ ನೀಡಿದ್ದಾರೆ. ಅಕ್ಟೋಬರ್ ತಿಂಗಳ ಆರಂಭದಲ್ಲಿ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಪ್ರಶ್ನಿಸಿರುವ ನಡುವೆ ವಿವಾದಿತ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ಮುಂದುವರಿಸಿರುವ ರೈತರ ನಡೆಗೆ ಸರ್ವೋಚ್ಚ ನ್ಯಾಯಾಲಯಲು ಆಕ್ಷೇಪ ವ್ಯಕ್ತಪಡಿಸಿತ್ತು.
"ಕೃಷಿ ಕಾಯ್ದೆಗಳ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿರುವಾಗ ಪ್ರತಿಭಟನೆ ನಡೆಸುವುದನ್ನು ಬಿಡಬೇಕು. ರೈತರು ತಮ್ಮ ಹೋರಾಟವನ್ನು ಮುಂದುವರೆಸುವ ಬದಲಿಗೆ ವ್ಯವಸ್ಥೆ ಹಾಗೂ ನ್ಯಾಯಾಲಯಗಳ ಮೇಲೆ ಹೆಚ್ಚಿನ ವಿಶ್ವಾಸವನ್ನು ಹೊಂದಿರಬೇಕು," ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿತ್ತು.

ಲಖೀಂಪುರ್ ಖೇರಿ ಘಟನೆ ಉಲ್ಲೇಖ:
ಕಳೆದ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಒಬ್ಬ ಪತ್ರಕರ್ತ ಸೇರಿದಂತೆ ಒಟ್ಟು ಎಂಟು ಮಂದಿ ಪ್ರಾಣ ಬಿಟ್ಟಿರುವ ಬಗ್ಗೆ ಕೋರ್ಟ್ ಪ್ರಶ್ನೆ ಮಾಡಿದೆ. ಈ ವೇಳೆ ಲಖೀಂಪುರ ಖೇರಿ ಘಟನೆಗಳು ಮರುಕಳಿಸದಿರಲು ಅಂಥ ರೈತ ಪ್ರತಿಭಟನೆಗೆ ಅವಕಾಶ ನೀಡಬಾರದು ಎಂದು ಕೇಂದ್ರ ಸರ್ಕಾರ ವಾದ ಮಂಡಿಸಿದೆ.
ಜಂತರ್ಮಂತರ್ನಲ್ಲಿ ಪ್ರತಿಭಟನೆಗೆ ಆಕ್ಷೇಪ:
ದೆಹಲಿಯ ಜಂತರ್ಮಂತರ್ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡುವಂತೆ ಕೋರಿ ಕಿಸಾನ್ ಮಹಾಪಂಚಾಯತ್ ಸರ್ವೋಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆದರೆ ಉತ್ತರ ಪ್ರದೇಶದ ಘಟನೆ ಉಲ್ಲೇಖಿಸಿದ ಕೇಂದ್ರ ಸರ್ಕಾರವು ರೈತರ ಪ್ರತಿಭಟನೆಗೆ ಅವಕಾಶ ನೀಡದಂತೆ ವಿರೋಧ ವ್ಯಕ್ತಪಡಿಸಿದೆ. "ಲಖಿಂಪುರ್ ಖೇರಿಯಲ್ಲಿ ನಡೆದ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಭಟನೆಗಳು ಈ ರೀತಿ ಆಗಲು ಸಾಧ್ಯವಿಲ್ಲ" ಎಂದು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಹೇಳಿದರು. "ಕೃಷಿ ಕಾನೂನುಗಳ ಬಗ್ಗೆ ಈಗಾಗಲೇ ಕೋರ್ಟಿನಲ್ಲಿರುವಾಗ ಪ್ರತಿಭಟನೆಗಳನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ದಯವಿಟ್ಟು ಹೇಳಿ. ಇಲ್ಲದಿದ್ದರೆ ಅದು ದುರದೃಷ್ಟಕರ ಘಟನೆಗಳಿಗೆ ಕಾರಣವಾಗುತ್ತದೆ," ಎಂದಿದ್ದಾರೆ.
"ಸಾವು-ನೋವು, ಆಸ್ತಿ ನಷ್ಟಕ್ಕೆ ಯಾರು ಹೊಣೆ?":
ಉತ್ತರ ಪ್ರದೇಶ ಲಖೀಂಪುರ್ ಖೇರಿ ಹಿಂಸಾಚಾರದಂತ ಘಟನೆಗಳು ನಡೆದಾಗ ಸಾವು-ನೋವು ಮತ್ತು ಆಸ್ತಿ ನಷ್ಟಕ್ಕೆ ಯಾರು ಹೊಣೆ ಎಂದು ಸುಪ್ರೀಂಕೋರ್ಟ್ ಪ್ರಶ್ನೆ ಮಾಡಿದೆ. "ನೀವು ಈಗಾಗಲೇ ಕಾನೂನಿಗೆ ಸವಾಲು ಹಾಕಿರುವಾಗ ನಿಮಗೆ ಪ್ರತಿಭಟಿಸಲು ಅವಕಾಶ ನೀಡಲಾಗುವುದಿಲ್ಲವೇ? ನೀವು ನ್ಯಾಯಾಲಯಕ್ಕೆ ಬರಲು ಸಾಧ್ಯವಿಲ್ಲ ಮತ್ತು ನಂತರ ಹೊರಗೆ ಪ್ರತಿಭಟಿಸಲು ಸಾಧ್ಯವಿಲ್ಲವೇ? ವಿಷಯವು ಈಗಾಗಲೇ ಉಪ ನ್ಯಾಯಾಧೀಶರ ಪ್ರತಿಭಟನೆಗೆ ಅವಕಾಶ ನೀಡಲಾಗುವುದಿಲ್ಲ" ಎಂದು ನ್ಯಾಯಾಲಯ ಹೇಳಿದೆ.
ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ಮುಂದುವರಿದ ಪ್ರತಿಭಟನೆ:
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 2020ರ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ.












Click it and Unblock the Notifications