"ಕೃಷಿ ಕಾಯ್ದೆ ವಿರುದ್ಧ ಹೋರಾಡುತ್ತಿರುವ ರೈತರಿಗೂ ಕೊರೊನಾ ಲಸಿಕೆ"
ನವದೆಹಲಿ, ಮಾರ್ಚ್ 18: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಸಹ ಜಾಗೃತರಾಗಬೇಕು ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ನವದೆಹಲಿಯ ಘಾಜಿಪುರ್ ಗಡಿಯಲ್ಲಿ ಮಾತನಾಡಿದ ಅವರು, ಕೊವಿಡ್-19 ಸೋಂಕಿನಿಂದ ರಕ್ಷಿಸಿಕೊಳ್ಳುವುದಕ್ಕಾಗಿ ನಾನು ಲಸಿಕೆಯನ್ನು ಹಾಕಿಸಿಕೊಂಡಿದ್ದೇನೆ ಎಂದರು. ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಎಲ್ಲ ರೈತರು ಕೊರೊನಾವೈರಸ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಕೇಂದ್ರಕ್ಕೆ ಎಚ್ಚರಿಕೆ: ಕಾಮಣ್ಣನ ಮೂರ್ತಿ ಜೊತೆ ಕೃಷಿ ಕಾಯ್ದೆಗೂ ಬೆಂಕಿ!
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ 113ನೇ ದಿನಕ್ಕೆ ಕಾಲಿಟ್ಟಿದೆ.
ಭಾರತದಲ್ಲಿ 3.71 ಕೋಟಿ ಜನರಿಗೆ ಕೊರೊನಾ ಲಸಿಕೆ:
ದೇಶದಲ್ಲಿ ಒಂದೇ ದಿನ 35871 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,14,74,605ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 172 ಜನರು ಬಲಿಯಾಗಿದ್ದು, ಈವರೆಗೂ 1,59,216 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದಾರೆ. ಕಳೆದೊಂದು ದಿನದಲ್ಲಿ 17,741 ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ ಇಲ್ಲಿಯತನಕ 1,10,63,025 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 2,52,364 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.
ಕೊರೊನಾವೈರಸ್ ಸೋಂಕಿಗೆ ಲಸಿಕೆ:
ದೇಶದಲ್ಲಿ ಈವರೆಗೂ 3,71,43,255 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.