ಭಾರತ್ ಬಂದ್ನ "Picture": ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟ ಹೇಗಿದೆ?
ನವದೆಹಲಿ, ಮಾರ್ಚ್ 26: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮಾರ್ಚ್ 26ರಂದು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ನಡೆಸುವುದ ಕರೆ ನೀಡಿರುವ ಭಾರತ್ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಾರ್ಚ್ 26ರ ಭಾರತ್ ಬಂದ್: ನೀವು ತಿಳಿದುಕೊಳ್ಳಬೇಕಾದ ವಿಷಯ
ದೆಹಲಿಯ ಗಡಿಯಲ್ಲಿ ಕಳೆದ ನವೆಂಬರ್.26ರಿಂದ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ 121ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಸಾವಿರಾರು ರೈತರು ಈ ಹೋರಾಟದಲ್ಲಿ ನಿರಂತರವಾಗಿ ಭಾಗಿಯಾಗಿದ್ದಾರೆ. ರೈತರ ಹೋರಾಟಕ್ಕೆ 4 ತಿಂಗಳು ಪೂರ್ಣಗೊಂಡ ಹಿನ್ನೆಲೆ ದೇಶಾದ್ಯಂತ ಭಾರತ್ ಬಂದ್ ನಡೆಸುವುದಕ್ಕೆ ಕರೆ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ದೇಶವ್ಯಾಪ್ತಿ ಬಂದ್ ನಡೆಯಲಿದ್ದು, ಗಡಿಯಲ್ಲಿ ರೈತರ ಹೋರಾಟದ ಪರಿ ಹೇಗಿದೆ ಎನ್ನುವುದರ ಕುರಿತು ಒಂದು ವರದಿ ಇಲ್ಲಿದೆ ನೋಡಿ.
|
ಘಾಜಿಪುರ್ ಗಡಿಯಲ್ಲಿ ರೈತರ ಪ್ರತಿಭಟನೆಯ ಪರಿ
ವಿವಾದಿತ ಕೃಷಿ ಕಾಯ್ದೆ ವಿರುದ್ಧ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆ ದೆಹಲಿಯ ಗಡಿಗಳಲ್ಲಿ ರೈತರ ಹೋರಾಟ ಮುಂದುವರಿದಿದೆ. ಉತ್ತರ ಪ್ರದೇಶ ಮತ್ತು ದೆಹಲಿಗೆ ಹೊಂದಿಕೊಂಡಿರುವ ಘಾಜಿಪುರ್ ಗಡಿ ಪ್ರದೇಶದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಕಾರ್ಯಕರ್ತರು ಗಡಿ ಬಂದ್ ನಡೆಸಿದರು.
|
ಶಹಾಪುರ್ ಬಳಿ ರೈಲ್ವೆ ಹಳಿ ಮೇಲೆ ಕುಳಿತ ರೈತರು
ಭಾರತ್ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಶಹಾಪುರ್ ಬಳಿ ರೈಲ್ವೆ ಹಳಿಗಳ ಮೇಲೆ ಕುಳಿತು ರೈತರು ಪ್ರತಿಭಟನೆ ನಡೆಸಿದರು. ಇನ್ನೊಂದು ಕಡೆಯಲ್ಲಿ ಜಿ.ಟಿ. ರಸ್ತೆಯ ಬ್ಲಾಕ್ ಬಳಿ ರಸ್ತೆಗೆ ಅಡ್ಡಕಟ್ಟಿದ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರೈತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
|
ರೈತರ ಹೋರಾಟಕ್ಕೆ ಸಾಕ್ಷಿಯಾದ ಸಿಂಘು ಗಡಿ
ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆ ನವದೆಹಲಿ ಪ್ರಮುಖ ಗಡಿ ಪ್ರದೇಶಗಳಲ್ಲಿ ರೈತರ ಹೋರಾಟದ ತೀವ್ರತೆ ಹೆಚ್ಚಿದೆ. ಸಿಂಘು ಗಡಿಯಲ್ಲಿ ರಸ್ತೆಗೆ ಅಡ್ಡಲಾಗಿ ಕುಳಿತ ರೈತರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿದರು.
|
ಘಾಜಿಪುರ್ ಗಡಿಯಲ್ಲಿ ಗಾನಾ ಬಜಾನಾ
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ಮುಂದುವರಿದಿದೆ. ನವದೆಹಲಿಯ ಘಾಜಿಪುರ್ ಗಡಿ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಕಾರ್ಯಕರ್ತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ನಡುರಸ್ತೆಯಲ್ಲಿ ಹಾಡಿಗೆ ತಕ್ಕದಾಗಿ ಹೆಜ್ಜೆ ಹಾಕಿದರು.
|
ಪಂಜಾಬ್ನಲ್ಲಿ ಕೃಷಿ ಕಾಯ್ದೆ ವಿರುದ್ಧ ರಸ್ತೆತಡೆ
ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆ ಪಂಜಾಬ್ನ ಅಮೃತಸರ್ ಬಳಿ ಸಂಯುಕ್ತ ಕಿಸಾನ್ ಮೋರ್ಚಾ ಕಾರ್ಯಕರ್ತರು ರೈಲ್ವೆ ತಡೆ ನಡೆಸಿದರು. ರೈಲ್ವೆ ಹಳಿಗಳ ಮೇಲೆ ಕುಳಿತು ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಕೂಗಿದರು. ಪಂಜಾಬ್, ಹರಿಯಾಣ, ದೆಹಲಿ, ಅಂಬಾಲಾ ಮತ್ತು ಪಿರೋಜಪುರ್ ವಿಭಾಗದ 31 ಕಡೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, 32 ಪ್ರದೇಶಗಳಲ್ಲಿ ರೈಲ್ವೆ ಸಂಚಾರಕ್ಕೆ ಅಡ್ಡಿಯಾಗಿದೆ. 4 ಶತಾಬ್ದಿ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.