ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್: ಆದೇಶ ಕಾಯ್ದಿರಿಸಿದ ಕೋರ್ಟ್
ನವದೆಹಲಿ, ಮೇ 23: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಸಾವಿನ ದಲ್ಲಾಳಿ' ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೇಲೆ ಎಫ್ಐಆರ್ ದಾಖಲು ಮಾಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ಕುರಿತಾದ ಆದೇಶವನ್ನು ದೆಹಲಿ ನ್ಯಾಯಾಲಯ ಜೂನ್ 7ಕ್ಕೆ ಕಾಯ್ದಿರಿಸಿದೆ.
2016ರಲ್ಲಿ ನರೇಂದ್ರ ಮೋದಿ ವಿರುದ್ಧ ಅವಹೇಳನಾಕಾರಿ ಪದ ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ವಕೀಲ ಜೋಗಿಂದರ್ ತುಲಿ ಅವರು ಅರ್ಜಿ ಸಲ್ಲಿಸಿದ್ದರು. ಇದರ ಆದೇಶವನ್ನು ಸಿಟಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಕಾಯ್ದಿರಿಸಿದರು.
ಮೋದಿ ಅವರು ರೈತರ ರಕ್ತದ ಹಿಂದೆ ಅಡಗಿಕೊಳ್ಳುತ್ತಿದ್ದಾರೆ ಮತ್ತು ಅವರ ತ್ಯಾಗದ ಲಾಭವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಿಸಬಹುದು ಎಂದು ದೆಹಲಿ ಪೊಲೀಸರು ಮೇ 15ರಂದು ನ್ಯಾಯಾಲಯಕ್ಕೆ ಆಕ್ಷನ್ ಟೇಕನ್ ರಿಪೋರ್ಟ್ ಸಲ್ಲಿಸಿದ್ದರು.